ಬಿಜೆಪಿಯವರಿಗೆ ಶೋಭಕ್ಕ ಗೊತ್ತೇ ಹೊರತು ಅಬ್ಬಕ್ಕನ ಬಗ್ಗೆ ಗೊತ್ತಿಲ್ಲ: ಪ್ರಿಯಾಂಕ್ ಖರ್ಗೆ ಲೇವಡಿ
ಈ ಬಿಜೆಪಿ ಸರ್ಕಾರ ಸತ್ತಿದೆ, ಇದಕ್ಕೆ ಜನರ ಸಮಸ್ಯೆ ಪರಿಹಾರ ನೀಡುವುದು ಅಗತ್ಯವಿಲ್ಲಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಬೆಂಗಳೂರು,ಫೆಬ್ರವರಿ28: ಚುನಾವಣೆ ಹತ್ತಿರಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಬ್ಬಕ್ಕನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಬಿಜೆಪಿ ನಾಯಕರ ವಿರುದ್ದವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ನಗರದಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಟಿಪ್ಪು ವರ್ಸಸ್ ಸಾರ್ವಕರ್, ಟಿಪ್ಪು ವರ್ಸಸ್ ಅಬ್ಬಕ್ಕ ಅವರ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ಶೋಭಕ್ಕ ಗೊತ್ತೇ ಹೊರತು ಅಬ್ಬಕ್ಕನ ಬಗ್ಗೆ ಗೊತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿಯವರು ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಟಿಪ್ಪು ವರ್ಸಸ್ ಅಬ್ಬಕ್ಕ ಎನ್ನುತ್ತಿದ್ದಾರೆ. ಈ ಬಗ್ಗೆ ಕಟೀಲ್ ಅವರು ಚರ್ಚೆಗೆ ಬನ್ನಿ. ಬಿಡೆಪಿ ಭರವಸೆ ಎಂಬ ಪೋಸ್ಟರ್ ಹಾಕುತ್ತಿದ್ದೀರಿ. ಯಾವ ಭರವಸೆ ಈಡೇರಿಸಿದ್ದೀರಿ? ಎಂದು ಪ್ರಶ್ನಿಸಿದರು.

ವಲಸಿಗ ಸಚಿವರು ಡಿ.ಕೆ. ಶಿವಕುಮಾರ್ ಅವರು ಪಕ್ಷ ಕಟ್ಟಿದ್ದಾರಾ ಎಂದು ಹೇಳಿರುವ ವಿಚಾರವಾಗಿ ಮಾತನಾಡಿ, ಶಿವಕುಮಾರ್ ಅವರು ಪಕ್ಷದ ಕಟ್ಟಾಳು. ಸಂಘಟನೆ ಮಟ್ಟದಿಂದ ಬೆಳೆದು ಬಂದಿರುವ ನಾಯಕ. ನಮಗೆ ಮೋದಿ, ವಲಸಿಗರ ಸರ್ಟಿಫಿಕೇಟ್ ಕೊಡಬೇಕಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ರಾಜ್ಯದ ಜನ ಹಾಗೂ ಹೈಕಮಾಂಡ್ ಸರ್ಟಿಫಿಕೇಟ್ ಕೊಟ್ಟು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ನಮಗೆ ಬಿಜೆಪಿ ಹಾಗೂ ಜೆಡಿಎಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದರು.
7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರಿ ನೌಕರರ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಯಾರು ಆಡಳಿತ ನಡೆಸುತ್ತಿದ್ದಾರೆ ಅವರು ಪರಿಹಾರ ಕಂಡುಕೊಳ್ಳಬೇಕು. ಈ ವಿಚಾರವಾಗಿ ಬಜೆಟ್ ನಲ್ಲಿ ನಿರೀಕ್ಷೆ ಮಾಡಲಾಗಿತ್ತು. ಸರ್ಕಾರಿ ನೌಕರರ ಸಂಘದವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದಿದ್ದರೆ ಪರಿಹಾರ ಕಂಡುಕೊಳ್ಳಬಹುದಾಗಿತ್ತು. ಇದು ಸರ್ಕಾರ ನಡೆಸುವ ರೀತಿಯೇ? ಈ ಸರ್ಕಾರಕ್ಕೆ ಆಡಳಿತದ ಮೇಲೆ ನಿಯಂತ್ರಣವಿಲ್ಲ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.
ಮೇಲಾಧಿಕಾರಿಗಳು ಬೀದಿಯಲ್ಲಿ ಜಗಳವಾಡಿದ್ದಾರೆ. ಈ ಸರ್ಕಾರ ಸತ್ತಿದೆ. ಅವರಿಗೆ 40% ಕಮಿಷನ್ ಸಿಕ್ಕರೆ ಸಾಕು. ಜನರ ಸಮಸ್ಯೆ ಅದಕ್ಕೆ ಪರಿಹಾರ ನೀಡುವುದು ಅಗತ್ಯವಿಲ್ಲ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.

ಬಿಜೆಪಿ ಸಮಾವೇಶಗಳಲ್ಲಿ ನಮ್ಮ ಮುಖ್ಯಮಂತ್ರಿ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪವನ್ನೇ ಮಾಡುತ್ತಿಲ್ಲ. ಶಿವಮೊಗ್ಗದ ಕಾರ್ಯಕ್ರಮದಲ್ಲಿ ಅವರು ಮುಖ್ಯಮಂತ್ರಿಗಳ ಹೆಸರೂ ತೆಗೆದುಕೊಳ್ಳಲಿಲ್ಲ. ಒರ್ವ ಮುಖ್ಯಮಂತ್ರಿಗಳ ಬಗ್ಗೆ ಅವರಿಗೆ ಇಷ್ಟೋಂದು ಸಿಟ್ಟು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಈ ಸರ್ಕಾರ 40% ಸರ್ಕಾರ, ಹೀಗಾಗಿ ನಾವು ಇವರ ಹೆಸರು ತೆಗೆದುಕೊಂಡರೆ ಜನ ನಮಗೆ ಮತ ಹಾಕುವುದಿಲ್ಲ ಎಂದು ರಾಜ್ಯ ನಾಯಕರ ಹೆಸರು ಹೇಳುತ್ತಿಲ್ಲ ಎಂದಿದ್ದಾರೆ.
ಸಂಡೂರಿನಲ್ಲಿ ಅಮಿತ್ ಶಾ ಅವರು ಮೋದಿ ಅವರ ಮುಖ ನೋಡಿ ಮತ ನೀಡಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದಿದ್ದಾರೆ. ಇಲ್ಲಿ ಸದನದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಾರೆ. ಇಲ್ಲಿ ರಾಜ್ಯ ನಾಯಕರು ಜನರ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಸರ್ಕಾರ 40% ಸರ್ಕಾರ, ಪೇಸಿಎಂ ಎಂದು ದೇಶದಲ್ಲಿ ಕುಖ್ಯಾತಿ ಪಡೆದಿದ್ದಾರೆ. ಹೀಗಾಗಿ ಮೋದಿ ಮುಖ ನೋಡಿ ಮತ ನೀಡಿ ಎಂದು ಹೇಳುತ್ತಿದ್ದಾರೆ.
ಸರ್ಕಾರ ನಮಗೆ ದಿನಕ್ಕೊಂದು ಹಗರಣ ನೀಡುತ್ತಿದ್ದಾರೆ. ನಾವು ದಾಖಲೆ ಸಮೇತ ಮಾತನಾಡಿದರೆ ನಮ್ಮ ವಿರುದ್ಧ ಸಿಐಡಿ ನೋಟೀಸ್ ನೀಡುತ್ತಾರೆ. ಇವರು ಯಾವುದನ್ನೂ ಬಿಡದ ರೀತಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕಾಕಂಬಿಯಲ್ಲೂ ಹಗರಣ ಮಾಡುತ್ತಿದ್ದಾರೆ. ಪಠ್ಯಪುಸ್ತಕ, ಶಾಲಾ ಬ್ಯಾಗ್, ಶೂ ಯಾವುದನ್ನು ಬಿಡುತ್ತಿಲ್ಲ. ಎಲ್ಲದರಲ್ಲೂ ಹಗರಣ ಎಂದು ವಾಗ್ದಾಳಿ ನಡೆಸಿದರು.












Click it and Unblock the Notifications