ಕಾಂಗ್ರೆಸ್ನಲ್ಲಿ ಹಿರಿಯರ ಕಡಗಣನೆ: ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಜೂನ್ 10: ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಸೋಲಿನ ಕುರಿತು ಚರ್ಚೆಗಳು ನಡೆಯುತ್ತಿದ್ದು, ಹಿರಿಯರ ಕಡಗಣನೆ ಎಂಬ ವಿಚಾರ ಮುನ್ನಲೆಗೆ ಬಂದಿದೆ. ನಮ್ಮ ಪಕ್ಷದಲ್ಲಿ ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವುದಾದರು ವಿಚಾರಗಳು ಬಂದಾಗ ಒಬ್ಬೊಬ್ಬರು ಅಭಿಪ್ರಾಯಗಳನ್ನು ಹಂಚಿಕೊಂಡಿರುವುದು ಸಹಜ. ಅಂತಹ ಸಂದರ್ಭದಲ್ಲಿ ಬಿಟ್ಟರೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಸ್ಪಷ್ಟ ಪಡಿಸಿದರು.

ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಹಂಚಿಕೊಳ್ಳಲು ಕ್ಯಾಬಿನೆಟ್ ಇದೆ. ಪಕ್ಷಕ್ಕೆ ಸಂಬಂಧಪಟ್ಟ ತೀರ್ಮಾನಗಳನ್ನು ಕೈಗೊಳ್ಳಲು ಕೋರ್ಕಮಿಟಿ ಸಭೆ ಮಾಡಬಹುದು. ಇದಕ್ಕೆ ಅವಕಾಶಗಳನ್ನು ಪಕ್ಷದ ಅಧ್ಯಕ್ಷರು ಕೊಡಬೇಕಾಗುತ್ತದೆ. ಸಂದರ್ಭ ಬಂದಾಗ ಅವರು ಮಾಡುತ್ತಾರೆ ಎಂದರು.
ಪ್ರಬಲ ಸಚಿವರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಸಮಿತಿ ರಚನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಜಿಲ್ಲೆ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋತಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವ, ಆತ್ಮಾವಲೋಕನಾ ಮಾಡಿಕೊಳ್ಳುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ನಾವೆಲ್ಲ ಅದನ್ನು ಒಪ್ಪುತ್ತೇವೆ. ಮುಂದೆ ನಮಗೆ ಏನು ಸಲಹೆ ಮಾಡುತ್ತಾರೆ. ಅದನ್ನು ಪಾಲನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿದೆ ಎಂದು ಹೇಳಿದರು.
ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರದಲ್ಲಿ ಸರ್ಕಾರ ಭಾಗಿಯಾಗಿದೆ, ಸಿಎಂ ಸಿದ್ದರಾಮಯ್ಯ, ನಿಗಮದ ಅಧ್ಯಕ್ಷ ದದ್ದಲ್ ಬಸನಗೌಡ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರ ಒತ್ತಾಯದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಹೇಳಿದ್ದಕ್ಕೆಲ್ಲ ಎಸ್ ಅನ್ನೋದಿಕ್ಕೆ ಆಗಲ್ಲ. ತನಿಖೆಯನ್ನು ಪ್ರಾರಂಭ ಮಾಡಿದ್ದೇವೆ. ಬ್ಯಾಂಕ್ನಲ್ಲಿ ಫ್ರಾಡ್ ಆಗಿದೆ ಅಂತ ಸಿಬಿಐನವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಆಗಲಿ. ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಎಸ್ಐಟಿಗೆ ಸೂಚಿಸಿದ್ದೇವೆ. ತನಿಖೆ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಾಯ ಮಾಡಲು ಆಗುವುದಿಲ್ಲ. ಅವರ ತನಿಖೆಗೆ ಸಮಯ ಕೊಡಬೇಕಾಗುತ್ತದೆ. ಏನೆಲ್ಲ ಹೇಳಿಕೆಗಳು ಬರುತ್ತವೆ ಪರಿಶೀಲಿಸುತ್ತಾರೆ. ಸಿಬಿಐನವರು ಅಧಿಕೃತವಾಗಿ ಯಾವುದೇ ಪತ್ರ ಬರೆದಿಲ್ಲ ಎಂದು ತಿಳಿಸಿದರು.
ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡಲಾಗುವುದು. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್ಲ. ಈಗ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.












Click it and Unblock the Notifications