ನಿಮ್ಮ ಉಚಿತ ಕರೆಂಟ್ ನಮಗೆ ಬೇಡ. ಆದರೆ.. ಪ್ರಜ್ವಲ್ ರೇವಣ್ಣ ಹೇಳಿದಿಷ್ಟು !
ಹಾಸನ, ಆಗಸ್ಟ್ 18: ನಿಮ್ಮ ಉಚಿತ ಕರೆಂಟ್ ನಮಗೆ ಬೇಡ. ರೈತರ ಪಂಪ್ಸೆಟ್ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಹಿನ್ನಲೆ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲಾ ಕಡೆಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದೊಂದು ಸಮಸ್ಯೆ ಆಗಿದೆ. ಇನ್ನೂ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರ ಮೇಲೆ ಕೇಸ್ ದಾಖಲಿಸಿ, ದಂಡ ವಿಧಿಸುತ್ತಿದ್ದಾರೆ. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರು ಟ್ರಾನ್ಸ್ಫಾರ್ಮರ್ ಹಾಕಿಕೊಂಡುವಂತೆ ಹಣ ಕಟ್ಟಿದ್ದಾರೆ. ಆದರೂ ಟ್ರಾನ್ಸ್ಫಾರ್ಮರ್ ಆಳವಡಿಸಿಲ್ಲ. ಹೀಗಾಗಿ ರೈತರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಹೇಳಿದರು.

ಇನ್ನೂ ಕಾಂಗ್ರೆಸ್ ಗ್ಯಾರಂಟಿಗಳನ್ನ ಘೋಷಿಸಿದೆ. ಕಾಂಗ್ರೆಸ್ ಸರ್ಕಾರ ಷರತ್ತು ವಿಧಿಸಿ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೆ ಇದರಿಂದ ಏನು ಫಲ ಎಂದು ಪ್ರಶ್ನಿಸಿದ ಅವರು, ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಹೇಳಿದ್ದಾರೆ. ಸರಿಯಾದ ಸಮಯದಲ್ಲಿ ವಿದ್ಯುತ್ ನೀಡಲು ಆಗುತ್ತಿಲ್ಲ ಎಂದರೆ, ನಿಮ್ಮ ಉಚಿತ ಕರೆಂಟ್ ಏನಕ್ಕೆ ಬೇಕು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ, ಇತ್ತ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ರೈತರು ಬೆಳೆದ ಬೆಳೆಗಳು ಹಾಳಾಗುತ್ತಿವೆ. ನಾಲ್ಕು ಗಂಟೆ ಅಂತ ಹೇಳಿ ಮೂರು ಗಂಟೆ ವಿದ್ಯುತ್ ನೀಡುತ್ತಿದ್ದಾರೆ. ಜೋಳ ಎಲ್ಲಾ ಒಣಗುವ ಮಟ್ಟಕ್ಕೆ ಬಂದಿದೆ. ಈ ರೈತರ ಕ್ಷೇಮ ಕಾಯದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಪ್ರಜ್ವಲ್ ರೇವಣ್ಣ ಎಚ್ಚರಿಕೆ ನೀಡಿದರು.
ಇನ್ನೂ ಕಾಂಗ್ರೆಸ್ ಗ್ಯಾರಂಟಿಗಳನ್ನ ಘೋಷಿಸಿದೆ. ನಿಮ್ಮ ಉಚಿತ ಯೋಜನೆಯನ್ನು ನಾವ್ಯಾರು ಕೇಳುತ್ತಿಲ್ಲ. ರೈತರಿಗೆ ಸರಿಯಾದ ಸಮಯಕ್ಕೆ ವಿದ್ಯುತ್, ನೀರು, ರೈತರ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ನೀಡಿದರೆ ಅವರೇ ಅನುದಾನ ಕೊಡುತ್ತಾರೆ ಅಂತ ದೇವೇಗೌಡ ಅವರು 2009ರಲ್ಲೇ ಹೇಳಿದ್ದರು. ಇಂತಹ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕೇ ಹೊರತು ಸರ್ಕಾರ ಬರೀ ಯೋಜನೆಗಳ ಬಗ್ಗೆ ತಲೆಕೆಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಈ ಸರ್ಕಾರ ದಿವಾಳಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಸನಕ್ಕೆ ಬಂದ ವೇಳೆ ವಿದ್ಯುತ್ ಸಮಸ್ಯೆ ಬಗ್ಗೆ ಗಮನಕ್ಕೆ ತರುತ್ತೇನೆ. ವಿದ್ಯುತ್ ಸಮಸ್ಯೆಯಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ರಾಜಣ್ಣ ಅವರ ಮೇಲೆ ನನಗೆ ವಿಶ್ವಾಸವಿದೆ. ಅವರು ಅಧಿಕಾರಿಗಳನ್ನು ಕರೆದು ಚರ್ಚಿಸಿ ನಿರ್ದೇಶನ ನೀಡುತ್ತಾರೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.












Click it and Unblock the Notifications