ಬಿಜೆಪಿಯವರು ಮಾಡಿದ ಕೆಲಸಕ್ಕೆ ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್05: ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿದ್ದಾರೆ. ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿಯವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ತಿಳಿಸಿದರು.
ಈ ಕುರಿತು ಇಂದು(ಶನಿವಾರ) ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ.ನಾವು ಭದ್ರಾ ಯೋಜನೆಗೆ ಎಷ್ಟು ಖರ್ಚು ಮಾಡಿದ್ದೇವೆ, ಕೇಂದ್ರ ಎಷ್ಟು ಕೊಡಬೇಕು ಎಂಬುದನ್ನೂ ತಿಳಿಸಿದ್ದೇವೆ ಎಂದು ಹೇಳಿದರು.

ದೆಹಲಿ ಭೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ನಾನು ಹಾಗೂ ಮುಖ್ಯಮಂತ್ರಿಯವರು ಭೇಟಿ ಮಾಡಿ ರಾಜ್ಯದ ನೀರಾವರಿ ಸಂಬಂಧಿತ ವಿಚಾರಗಳನ್ನು ಚರ್ಚೆ ಮಾಡಿದೆವು. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಮನವರಿಕೆ ಮಾಡಿದ್ದೇವೆ. ನಮ್ಮ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ವಿಚಾರವಾಗಿ ಒಬ್ಬೊಬ್ಬರನ್ನೇ ಕರೆಸಿ ಮಾತುಕಥೆ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಎತ್ತಿನಹೊಳೆಗೆ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುತ್ತಾರೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದ್ದು, ಎತ್ತಿನಹೊಳೆಗೆ ಅನುಮತಿ ನೀಡಲೇಬೇಕು. ಇದರಲ್ಲಿ ಕೊಡಿಸುವುದೇನಿದೆ? ಇದು ಅವರ ಕರ್ತವ್ಯ. ಸ್ವಾಧೀನ ಪಡಿಸಿಕೊಂಡ ಭೂಮಿಗೆ ಬದಲಿ ಭೂಮಿ ನೀಡಿದ್ಧೇವೆ ಎಂದು ತಿಳಿಸಿದರು. ತಮಿಳುನಾಡಿನಿಂದ ಮೇಕೆದಾಟಿಗೆ ಮೊದಲು ಒಪ್ಪಿಗೆ ಪಡೆಯಿರಿ ನಾವು ನಂತರ ಕೊಡಿಸುತ್ತೇವೆ ಎನ್ನುವ ಬಿಜೆಪಿಯವರ ಹೇಳಿಕೆಯ ಕುರಿತು ಉತ್ತರಿಸಿದ್ದು, ಅವರ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದರು.
ನೀವು ಡಿಎಂಕೆ ಜೊತೆ ಉತ್ತಮ ಸಖ್ಯ ಹೊಂದಿದ್ದೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿ, ಇದು ಕೇವಲ ರಾಜಕೀಯ ಉದ್ದೇಶದ ಮೈತ್ರಿ. ಒಟ್ಟಿಗೆ ಕೆಲಸ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ತಮಿಳುನಾಡಿಗೆ ಶಿವಕುಮಾರ್ ಅವರು ಹೆಚ್ಚು ಭೇಟಿ ನೀಡುತ್ತಿದ್ದಾರೆ. ಇದರಿಂದ ನೀರಿನ ಸಮಸ್ಯೆ ಬಗೆಹರಿಯಲಿದೆಯೇ ಎನ್ನುವ ಬಿಜೆಪಿಯವರ ಹೇಳಿಕೆ ಬಗ್ಗೆ ಮಾತನಾಡಿ, ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ. ಅವರ ರಕ್ಷಣೆ ಅವರು ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಹಿತವನ್ನು ನಾವು ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸಂಸತ್ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧದ ಹೋರಾಟದ ಬೆಳವಣಿಗೆಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್ ಅವರು, ಕ್ಷೇತ್ರ ಮರುವಿಂಗಡಣೆ ಹೋರಾಟದ ನಿಯೋಗಕ್ಕೆ ಹೈಕಮಾಂಡ್ ಸೂಚನೆಯಂತೆ ನಮ್ಮ ಕರ್ನಾಟಕದಿಂದ ಸಂಸದರಾದ ತುಕಾರಾಂ ಅವರನ್ನು ನೇಮಿಸಲಾಗಿದೆ ಎಂದು ಹೇಳಿದರು.












Click it and Unblock the Notifications