ಫೇಸ್ಬುಕ್ ಬಂದ್ ಮಾಡಿಸಬೇಕಾಗುತ್ತದೆ; ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು, ಜೂನ್ 15; ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಮಯದಲ್ಲಿ ಮೌಖಿಕ ಎಚ್ಚರಿಕೆಯನ್ನು ಕೊಟ್ಟಿದೆ.
ಅರ್ಜಿಯ ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಮಂಗಳೂರು ಪೊಲೀಸರು ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು.

ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಮಂಗಳೂರು ಪೊಲೀಸರಿಗೆ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಿದೆ.
ಏನಿದು ಪ್ರಕರಣ: ಸೌದಿ ಅರೇಬಿಯಾದಲ್ಲಿ ಬಂಧಿತನಾದ ವ್ಯಕ್ತಿಯ ಪ್ರಕರಣದಲ್ಲಿ ಫೇಸ್ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಕೋರ್ಟ್ಗೆ ಮಾಹಿತಿ ನೀಡಿದ್ದರು. ಆಗ ನ್ಯಾಯಪೀಠ ಸರಿಯಾದ ಮಾಹಿತಿ ನೀಡದಿದ್ದರೆ ಫೇಸ್ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಮೌಖಿಕ ಎಚ್ಚರಿಕೆ ನೀಡಿತು.
ಮಂಗಳೂರಿನ ಬಿಕರನಕಟ್ಟೆಯ ಶೈಲೇಶ್ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಸಿಎಎ ಮತ್ತು ಎನ್ಆರ್ಸಿ ಬೆಂಬಲಿಸಿ ಅವರು 2019ರಲ್ಲಿ ಪೋಸ್ಟ್ ಹಾಕಿದ್ದರು. ಆಗ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು. ಇದರಿಂದಾಗಿ ಅವರು ತಮ್ಮ ಫೇಸ್ಬುಕ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು.
2020ರಲ್ಲಿ ಕಿಡಿಗೇಡಿಗಳು ಮತ್ತೆ ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ದೊರೆ ವಿರುದ್ಧ ಪೋಸ್ಟ್ ಹಾಕಿದ್ದರು. ಆಗ ಅವರು ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರನ್ನು ಅಲ್ಲಿನ ದೇಶದ ಕಾನೂನಿನ ಅನ್ವಯ ಬಂಧಿಸಲಾಗಿತ್ತು. ಗಂಡನನ್ನು ಬಿಡುಗಡೆ ಮಾಡುವಂತೆ ಕೋರಿ ಶೈಲೇಶ್ ಪತ್ನಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತರೆಯಲಾಗಿದೆ ಎಂದು ಮಂಗಳೂರು ಪೊಲೀಸರಿಗೆ ಸಹ ಅವರು ದೂರು ನೀಡಿದ್ದರು. ಆದರೆ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಅರ್ಜಿಯ ವಿಚಾರಣೆ ವೇಳೆ ಮಂಗಳೂರು ಪೊಲೀಸರು ಫೇಸ್ಬುಕ್ನಿಂದ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎಂದು ಕೋರ್ಟ್ಗೆ ಹೇಳಿಕೆ ನೀಡಿದ್ದರು. ಆದ್ದರಿಂದ ಕೋರ್ಟ್ ಫೇಸ್ಬುಕ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಮೌಖಿಕ ಎಚ್ಚರಿಕೆಯನ್ನು ಕೊಟ್ಟಿದೆ.
15 ವರ್ಷದ ಶಿಕ್ಷೆ; ಶೈಲೇಶ್ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಖಾತೆ ತೆರೆದು ಸೌದಿ ದೊರೆ ವಿರುದ್ಧ ಪೋಸ್ಟ್ ಹಾಕಿದ್ದಾರೆ. ಈ ಆರೋಪಕ್ಕಾಗಿ ಅವರಿಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮೂರು ವರ್ಷಗಳಿಂದ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ.
ಘಟನೆ ಕುರಿತು ಸೂಕ್ತ ಮಾಹಿತಿಯನ್ನು ಫೇಸ್ಬುಕ್ ನೀಡಬೇಕು. ಸುಳ್ಳು ಪ್ರಕರಣದಲ್ಲಿ ಜೈಲಿನಲ್ಲಿರುವ ವ್ಯಕ್ತಿಯ ಬಿಡುಗಡೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ವರದಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿ, ವಿಚಾರಣೆ ಮುಂದೂಡಿಕೆ ಮಾಡಿದೆ.
ಮಂಗಳೂರಿನ ಶೈಲೇಶ್ 25 ವರ್ಷಗಳಿಂದ ಸೌದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳು ಮಂಗಳೂರಿನಲ್ಲಿದ್ದಾರೆ. ನಕಲಿ ಖಾತೆ ತೆರೆದು ತನ್ನ ಹೆಸರಿನಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಬಂಧನಕ್ಕೂ ಮೊದಲು ಶೈಲೇಶ್ ಪತ್ನಿ, ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಆದರೆ ಅಲ್ಲಿನ ದೇಶದ ಕಾನೂನಿನ ಅನ್ವಯ ಅವರ ಬಂಧನವಾಗಿದೆ.
ಶೈಲೇಶ್ ಪತ್ನಿ ಮಂಗಳೂರು ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು 2021ರಲ್ಲಿ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ಸಮಯದಲ್ಲಿ ತನಿಖಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಕೋರ್ಟ್ಗೆ ಹಾಜರಾಗಿದ್ದರು.
ಅರ್ಜಿ ವಿಚಾರಣೆ ಸಮಯದಲ್ಲಿ ಫೇಸ್ಬುಕ್ ಪರ ವಕೀಲರು ಸಹ ಇದ್ದರು. ಕೋರ್ಟ್ನ ಮೌಖಿಕ ಎಚ್ಚರಿಕೆ ಬಳಿಕ ಅವರು ವರದಿ ನೀಡಲು ಕಾಲಾವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು. ಕೋರ್ಟ್ ಒಂದು ವಾರಗಳ ಸಮಯ ನೀಡಿದೆ.












Click it and Unblock the Notifications