ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪರಿಚಯ
ವಿಧಾನಸಭೆ ಚುನಾವಣೆಯಾಗಲಿ, ಲೋಕಸಭೆ ಚುನಾವಣೆಯಾಗಲಿ ನಾಲ್ಕು ದಶಕಗಳಿಂದ ಸೋಲನ್ನೇ ಕಾಣದ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಖರ್ಗೆ ಗುಲ್ಬರ್ಗ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜುಲೈ 24, 1947ರಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರ ತಂದೆ ಮಾಪಣ್ಣ ಖರ್ಗೆ. ಗುಲ್ಪರ್ಗದಲ್ಲಿ ಶಾಲಾ ಶಿಕ್ಷಣವನ್ನು ಪೂರೈಸಿದರು. ಗುಲ್ಪರ್ಗಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಕಾನೂನು ಪದವಿ ಪಡೆದ ಅವರು, ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರ ಕಚೇರಿಯಲ್ಲಿ ಜ್ಯುನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದರು.
ಗುಲ್ಬರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪುಟ
76 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟೂರು ಭಾಲ್ಕಿಯ ವರವಟ್ಟಿ ಗ್ರಾಮ. ಪತ್ನಿ ರಾಧಾಬಾಯಿ. ಪುತ್ರ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದಾರೆ.
ಸೋಲೆ ಇಲ್ಲ ಎನ್ನುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಮುಖ್ಯಮಂತ್ರಿ ರೇಸ್ನಲ್ಲಿ ಸೋತರು ಎನ್ನುತ್ತಾರೆ ಅವರನ್ನು ಹತ್ತಿರದಿಂದ ಬಲ್ಲವರು. ದಲಿತ ನಾಯಕ ಖರ್ಗೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲಿಲ್ಲ ಎಂಬ ನೋವು ಅವರ ಅಪಾರ ಅಭಿಮಾನಿಗಳಲ್ಲಿದೆ.
ರಾಜಕೀಯ ಜೀವನ ಆರಂಭ
ಗುಲ್ಪರ್ಗಾ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ನಾಯಕರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದರು ಮಲ್ಲಿಕಾರ್ಜುನ ಖರ್ಗೆ. ಸಂಯುಕ್ತ ಮಜ್ದೂರ್ ಸಂಘದ ಪ್ರಭಾವಿ ನಾಯಕರಾಗಿದ್ದರು. ಕಾರ್ಮಿಕ ಹಕ್ಕುಗಳಿಗಾಗಿ ಅನೇಕ ಹೋರಾಟದಲ್ಲಿ ಪಾಲ್ಗೊಂಡರು. 1969ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. ಗುಲ್ಪರ್ಗಾ ಸಿಟಿ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದರು.
ಗಾಡ್ ಫಾದರ್ ಇಲ್ಲದೇ ಬೆಳೆದರು
ಸಮಾನತೆಯ ಹರಿಹಾರ ದೇವರಾಜ ಅರಸು ಅವರ ಗರಡಿಯಲ್ಲಿ ಬೆಳೆದ ಹಲವು ರಾಜಕೀಯ ನಾಯಕರ ಪೈಕಿ ಮಲ್ಲಿಕಾರ್ಜುನ ಖರ್ಗೆ ಅವರೂ ಒಬ್ಬರು. 76 ವರ್ಷ ಪ್ರಾಯದ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷ ನಿಷ್ಠೆ ಮತ್ತು ಪಕ್ಷ ಹೇಳಿದ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿ ಗಾಢ್ ಫಾದರ್ಗಳಿಲ್ಲದಿದ್ದರೂ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಬೆಳೆದವರು.
ಸೋಲನ್ನು ನೋಡೇ ಇಲ್ಲ
1972ರಲ್ಲಿ ವಿಧಾನಸಭೆಗೆ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುರುಗಿ ನೋಡಿದ್ದೇ ಇಲ್ಲ. ಸತತ 9 ಬಾರಿ ವಿಧಾನಸಭೆಗೆ 2 ಬಾರಿ ಲೋಕಸಭೆಗೆ ಆಯ್ಕೆಯಾದ ಅವರು ಈಗ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ. ಲೋಕಸಭೆ ವಿರೋಧ ಪಕ್ಷದ ನಾಯಕರಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆ ಖರ್ಗೆ ಅವರದ್ದು.
ಮುಖ್ಯಮಂತ್ರಿಯಾಗಲೇ ಇಲ್ಲ
ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಲಿಲ್ಲ ಎಂಬ ಕೊರಗು ಬಿಟ್ಟರೆ ಗೃಹ, ಕಂದಾಯ ಸೇರಿದಂತೆ ಮಹತ್ವದ ಖಾತೆಗಳ ಸಚಿವರಾಗಿದ್ದರು. ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದರು. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
1976ರಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿ, 1978ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ, 1985ರಲ್ಲಿ ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ಉಪ ನಾಯಕರಾಗಿ, ಎಸ್.ಬಂಗಾರಪ್ಪ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಆಪ್ತರು
ಸಂಸದರಾಗಿ ಆಯ್ಕೆಯಾದ ಮೊದಲ ಸಲವೇ ಕೇಂದ್ರ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದರು ಮಲ್ಲಿಕಾರ್ಜುನ ಖರ್ಗೆ. ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಕಲಂ 371 ಜಾರಿಗೆ ಬರುವಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ದೊಡ್ಡದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಖರ್ಗೆ ಆಪ್ತರು.