ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುಣಾವಣೆ: ಡಿ ಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರು, ಜನವರಿ 17: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಅವರು ಜವಾಬ್ದಾರಿಯುತ ನಾಯಕ.

ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಹೇಳಿದ್ದಾರೆ.
ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, "ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ" ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ಮೈಸೂರು ಸ್ಯಾಂಡಲ್ ಸೋಪ್ ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ.
ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ. ಈ ಹಿಂದೆ ಮೈಸೂರು ಲ್ಯಾಂಪ್ಸ್ ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ 300 ಕೋಟಿ ಮೌಲ್ಯದ ರೈಲ್ವೇ ಭೂಮಿಯನ್ನು ಕೇವಲ 80 ಕೋಟಿಗೆ ಬಿಡ್ ಕರೆಯಲು ಮುಂದಾಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡದ ಬಗ್ಗೆ ಕೇಳಿದಾಗ, "ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ನಾನು ಮಾತನಾಡುವುದಿಲ್ಲ. ಅನಗತ್ಯವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದರು. ಇನ್ನೂ ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೇಳಿದಾಗ ನಿಮ್ಮ ಗಮನಕ್ಕೆ ತರುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications