Weather Report: ಇನ್ನೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ (ಎಲ್ಪಿಎ) ಇರುವುದರಿಂದ ಮುಂದಿನ ಎರಡು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಅಕ್ಟೋಬರ್ 19ರಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಮತ್ತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.

ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ 53 ಮಿ ಮೀ ಮಳೆಯಾಗಿದೆ. ಧಾರವಾಡ 47.5 ಮಿ.ಮೀ, ಹಾವೇರಿ 47 ಮಿ.ಮೀ, ಉಡುಪಿ 25.5 ಮಿ.ಮೀ, ದಕ್ಷಿಣ ಕನ್ನಡ 23.5 ಮಿ.ಮೀ, ಮಂಡ್ಯ 23.5 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಉತ್ತರ ಕನ್ನಡ ಜಿಲ್ಲೆಯ ಬುಜುರ್ಕಾಂಚನಳ್ಳಿಯಲ್ಲಿ 53ಮಿ.ಮೀ ಮಳೆಯಾಗಿದೆ. ಧಾರವಾಡದ ಜಿನ್ನೂರಿನಲ್ಲಿ 47.5 ಮಿಮೀ, ಹಾವೇರಿಯ ಬೈಚವಳ್ಳಿ 47 ಮಿಮೀ, ಕಂಚಿನಗಳೂರು 40 ಮಿಮೀ, ಹಾನಗಲ್ನಲ್ಲಿ 35 ಮಿ.ಮೀ ಮಳೆಯಾಗಿದೆ ಎಂದು ವದಿಯಾಗಿದೆ.
ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾವೇರಿ, ಧಾರವಾಡ, ಮಂಡ್ಯ, ಮೈಸೂರು, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ.
ಕೈ ಹಿಡಿಯುತ್ತಾ ಹಿಂಗಾರು?
ರಾಜ್ಯದಲ್ಲಿ ಈ ಬಾರಿ ಮುಂಗಾರು ಸಂಪೂರ್ಣವಾಗಿ ಕೈಕೊಟ್ಟ ಕಾರಣ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ. ಕೃಷಿ ವಲಯದ ಮೇಲೆ ಭಾರಿ ಪರಿಣಾಮ ಬೀರಿದ್ದು ಹಲವು ಉತ್ಪಾದನೆಗಳು ಕುಂಠಿತವಾಗಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಅಭಾವ ಕೂಡ ಎದುರಾಗಿದೆ. ಗಾಯದ ಮೇಲೆ ಉಪ್ಪು ಸುರಿದಂತೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಹಿನ್ನಡೆಯಾಗುತ್ತಿದೆ.
ಈಗ ಹಿಂಗಾರು ಉತ್ತಮ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಸಮಾಧಾನ ತಂದಿದೆಯಾದರೂ, ಅದೂ ಕೈಕೊಟ್ಟರೆ ಎನ್ನುವ ಆತಂಕ ಮನೆ ಮಾಡಿದೆ. ಮಳೆ ಅಬ್ಬರಿಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದೆ.
ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಳೆ ಹೀಗೆ ಮುಂದುವರೆದರೆ ಜಲಾಶಯದ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ.












Click it and Unblock the Notifications