ವೀಕೆಂಡ್ ಕರ್ಫ್ಯೂ; ಕೆಎಸ್ಆರ್ಟಿಸಿ ಬಸ್ ಸಂಚಾರ ಮಾರ್ಗಸೂಚಿ
ಬೆಂಗಳೂರು, ಜನವರಿ 06; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಸಹ ಜಾರಿಗೆ ಬರುತ್ತಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಾರಾಂತ್ಯ ಕರ್ಫ್ಯೂ ಹಿನ್ನಲೆಯಲ್ಲಿ ಬಸ್ ಸಂಚಾರದ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. 5/1/2022ರ ರಾತ್ರಿ 10 ಗಂಟೆಯಿಂದ 19/1/2022ರ ಮುಂಜಾನೆ 5 ಗಂಟೆಯ ತನಕ ವಾರಾಂತ್ಯ ಕರ್ಫ್ಯೂ ಆದೇಶ ಜಾರಿಯಲ್ಲಿರುತ್ತದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರದ ಕುರಿತು ಮಾರ್ಗಸೂಚಿಯಲ್ಲಿ ಮಾಹಿತಿ ನೀಡಲಾಗಿದೆ.

ವಾರಾಂತ್ಯ ಕರ್ಫ್ಯೂ ಹಿನ್ನಲೆಯಲ್ಲಿ ವಾಣಿಜ್ಯ ವಹಿವಾಟು ಬಹುತೇಕ ಬಂದ್ ಆಗುತ್ತದೆ. ಪ್ರಯಾಣಿಕರು/ ವಿದ್ಯಾರ್ಥಿಗಳ ಸಂಚಾರ ಕಡಿಮೆ ಇರುತ್ತದೆ. ಆದ್ದರಿಂದ ಈ ಕೆಳಕಂಡ ಮಾರ್ಗಸೂಚಿ ಅನ್ವಯ ಬಸ್ ಸಂಚಾರ ಇರುತ್ತದೆ.
* ವಾರಾಂತ್ಯ ಕರ್ಫ್ಯೂ ದಿನಗಳಂದು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಬಸ್ಗಳ ಸಂಚಾರವನ್ನು ನಡೆಸಬೇಕು.
* ಸಾಧ್ಯವಾದಷ್ಟು ಮಟ್ಟಿಗೆ ರಾತ್ರಿ ಸಾರಿಗೆ ಸೇವೆಗಳ ಬುಕ್ಕಿಂಗ್ ಆನ್ಲೈನ್ ಮೂಲಕವೇ ಮಾಡಿಸಬೇಕು. ರಾತ್ರಿ ಸಾರಿಗೆ ಬುಕ್ಕಿಂಗ್ ಪರಿಶೀಲನೆ ಮಾಡಿ ಅಗತ್ಯವಿದ್ದಲ್ಲಿ ಮಾತ್ರ ಬಸ್ ಓಡಿಸಬೇಕು.
* ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ 19 ಲಸಿಕೆ ಪಡೆಯದಿದ್ದರೂ/ ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.
* ಪ್ರಯಾಣಿಕರ ಕೋವಿಡ್ ಪ್ರಮಾಣ ಪತ್ರ, ಆರ್ಟಿಪಿಸಿಆರ್ ಪರೀಕ್ಷೆ ವರದಿಯನ್ನು ಪರಿಶೀಲಿಸುವಂತೆ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡುವುದು.
* ಚಾಲನಾ ಸಿಬ್ಬಂದಿಗಳು, ಪ್ರಯಾಣಿಕರು ಕಡ್ಡಾಯಾಗಿ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ 19 ಸೋಂಕು ಹರಡದಂತೆ ತಡೆಗಟ್ಟುವ ನಿಬಂಧನೆಗಳು/ ಮಾರ್ಗಸೂಚಿಗಳನ್ನು ಪಾಲಿಸುವುದು.
ನಮ್ಮ ಮೆಟ್ರೋ ಸಂಚಾರ; ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಬಗ್ಗೆ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ನಮ್ಮ ಮೆಟ್ರೋ ಸಂಚಾರವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ.
ಬಿಎಂಆರ್ಸಿಎಲ್ ರೈಲು ಸಂಚಾರದ ಅವಧಿಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 8 ರಿಂದ ರಾತ್ರಿ 9ರ ತನಕ ಮಾತ್ರ ಮೆಟ್ರೋ ರೈಲು ಸಂಚಾರ ನಡೆಸಲಿವೆ. ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಟರ್ಮಿನಲ್ನಿಂದ ಪ್ರತಿ 20 ನಿಮಿಷಕ್ಕೆ ಒಂದು ರೈಲು ಹೊರಡಲಿದೆ. ಟರ್ಮಿನಲ್ ನಿಲ್ದಾಣದಿಂದ ಕೊನೆಯ ರೈಲು ರಾತ್ರಿ 9 ಗಂಟೆಗೆ ಹೊರಡಲಿದೆ.
ಕಠಿಣ ನಿಯಮಗಳು; ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ರಾಜ್ಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಡಿಸೆಂಬರ್ 28ರಿಂದ ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ ವಿಸ್ತರಣೆ, ವಾರಾಂತ್ಯದ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ ಶಾಲೆಗಳ ಭೌತಿಕ ತರಗತಿ ಬಂದ್, ಚಿತ್ರಮಂದಿರದಲ್ಲಿ ಶೇ 50ರಷ್ಟು ಸೀಟು ಭರ್ತಿ ಸೇರಿದಂತೆ ಹಲವಾರು ನಿಯಮಗಳನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತದಲೇ ಇದೆ. ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 4246 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 17,414 ಆಗಿದೆ.
ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಬುಧವಾರ ನಗರದಲ್ಲಿ 3605 ಪ್ರಕರಣ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14762.












Click it and Unblock the Notifications