ಮುಡಾ ಕೇಸ್ ಚುರುಕಾಗಿರುವಾಗಲೇ CBIಗೆ ಬ್ರೇಕ್; ಕಾರಣ ಬಿಚ್ಚಿಟ್ಟ ಕೈ ನಾಯಕರು
ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿರುವ ಮುಡಾ ಕೇಸ್ ಅನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬೆಳವಣಿಗೆ ನಡುವೆಯೇ ಸಿಬಿಐಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ತೀರ್ಮಾನ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ಅಧಿಕಾರದ ಬಗ್ಗೆ ಅಧಿಕಾರ ಮೊಟಕುಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಈ ಹಿಂದೆ ಸಿಬಿಐ ಮುಕ್ತ ತನಿಖೆ ನಡೆಸಲು ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿದೆ. ಈಗ ಸಿಬಿಐನ ಮುಕ್ತ ತನಿಖೆ ಅಧಿಕಾರವನ್ನು ನಿರ್ಬಂಧಿಸಲಾಗಿದ್ದು, ಸರ್ಕಾರದ ಅನುಮತಿ ಪಡೆದರಷ್ಟೇ ತನಿಖೆ ನಡೆಸಬೇಕು ಎಂದು ಹೇಳಿದೆ.

ಇತ್ತ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಚುರುಕಾಗಿರುವಾಗಲೇ ಸಿಬಿಐ ಮೇಲೆ ನಿರ್ಬಂಧಗಳನ್ನು ಹೇರಲು ಮುಂದಾಗಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿದೆ. ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಲಾರಂಭಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದ್ವೇಷದ ರಾಜಕಾರಣಕ್ಕೆ ಸಿಬಿಐ ಒಳಪಡಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ್ ಕೂಡ ಸರ್ಕಾರದ ಈ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ. ಸಿಬಿಐನವರು ನೇರವಾಗಿ ಬಂದು ತನಿಖೆ ನಡೆಸಲು ಅವಕಾಶವೇನೋ ಇದೆ. ಆದರೆ, ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರಗಳು ತಮ್ಮ ಅನುಮತಿ ಪಡೆಯದೆಯೇ ನೇರವಾಗಿ ತನಿಖೆ ನಡೆಬಾರದು ಎಂದು ತಡೆದಿರುವ ನಿದರ್ಶನಗಳೂ ಇವೆ. ಈಗ ನಮ್ಮ ರಾಜ್ಯದಲ್ಲಿ ಈ ರೀತಿ ಸಿಬಿಐಗೆ ನಿರ್ಬಂಧ ಹೇರುತ್ತಿರುವುದು ಮೊದಲೇನಲ್ಲ. ಈ ವಿಚಾರವಾಗಿ ಆಶ್ಚರ್ಯ ಪಡುವುದೇನಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ನಾಲ್ಕೈದು ಬಾರಿ ಸಿಬಿಐನವರಿಗೆ ನೀವು ನೇರವಾಗಿ ಬಂದು ತನಿಖೆ ಕೈಗೊಳ್ಳುವಂತಿಲ್ಲ ಎಂದು ಹೇಳಲಾಗಿದೆ. ಕೆಲವು ಸಂದರ್ಭಗಳಲ್ಲಿ ಸಿಬಿಐನವರಿಗೆ ಮುಕ್ತ ಅವಕಾಶ ಕೂಡ ನೀಡಲಾಗಿದೆ. ಹಿಂದಿನ ಬಿಜೆಪಿ ಆ ರೀತಿ ಮಾಡಿಕೊಂಡಿತ್ತು ಎಂದಿದ್ದಾರೆ.
ಈಗ ರಾಜ್ಯ ಸರ್ಕಾರದ ಗಮನಕ್ಕೆ ತರದೆ, ಯಾವುದೇ ತನಿಖೆ ನಡೆಸಬಾರದು ಎನ್ನುವ ತೀರ್ಮಾನವನ್ನು ನಾವೆಲ್ಲ ತೆಗೆದುಕೊಂಡಿದ್ದೇವೆ. ಇದು ಸಿದ್ದರಾಮಯ್ಯ ಅವರ ವಿಚಾರವನ್ನು ಮುಂದಿಟ್ಟುಕೊಂಡು ಮಾಡಿರುವುದಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ ಎಂದು ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ ಈ ಬಗ್ಗೆ ಮಾತನಾಡಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಮುಕ್ತ ಅನುಮತಿಯನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ. ಹಾಗಾಗಿ ಇನ್ನು ಮುಂದೆ ಯಾವುದೇ ಕೇಸ್ನ ತನಿಖೆ ನಡೆಸಬೇಕಾದರೆ ಸಿಬಿಐ ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದಿದ್ದರು.
ಇತ್ತೀಚೆಗೆ ಸಿಬಿಐ ಸಂಸ್ಥೆಯು ತಮ್ಮ ಅಧಿಕಾರವನ್ನು ಪೂರ್ವಗ್ರಹದಿಂದ ನಿರ್ವಹಿಸಿರುವುದು ಕಂಡುಬಂದಿದೆ. ಹಾಗಾಗಿ ಸಿಬಿಐಗೆ ರಾಜ್ಯದಲ್ಲಿ ತನಿಖೆಗೆ ಮುಕ್ತ ಅವಕಾಶ ನೀಡಬಾರದು ಎಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಕೇಸ್ಗೂ ಯಾವುದೇ ಸಂಬಂಧವಿಲ್ಲ. ಅದನ್ನು ಲೋಕಾಯುಕ್ತದವರೇ ತನಿಖೆ ನಡೆಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ಆದರೆ, ಕಾಂಗ್ರೆಸ್ ಉದ್ದೇಶಪೂರ್ವಕವಾಗಿಯೇ ಸಿಬಿಐ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ. ತಮ್ಮ ಸರ್ಕಾರದ ಲೋಪಗಳು, ಹಗರಣಗಳನ್ನು ಮುಚ್ಚಿಕೊಳ್ಳಲು ಈ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದಾರೆ.












Click it and Unblock the Notifications