ಹುಬ್ಬಳ್ಳಿ ಮೇಲ್ಸೇತುವೆ ಕಾಮಗಾರಿ ಸ್ಥಗಿತಕ್ಕೆ ಇದೇ ಕಾರಣ.. ಸದ್ಯಕ್ಕೆ ಶುರುವಾಗೋದು ಡೌಟ್ ಯಾಕೆ ?!
ಹುಬ್ಬಳ್ಳಿಯ ಮುಖ್ಯಭಾಗದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಇದೀಗ ಕಳೆದ ಎರಡೂವರೆ ತಿಂಗಳಿನಿಂದ ಸ್ಥಗಿತವಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಆದರೆ, ಈ ಕಾಮಗಾರಿ ನಿಂತಿರುವುದಕ್ಕೆ ಕಾರಣವೇ ಬೇರೆ ಇದೆ. ಈ ಕಾಮಗಾರಿ ಪ್ರಾರಂಭವಾಗಿ ಈಗಾಗಲೇ ಮೂರು ವರ್ಷಗಳೇ ಕಳೆದಿದೆ. ಆದರೆ, ಕಾಮಗಾರಿ ಪ್ರಾರಂಭವಾದಾಗಿನಿಂದಲೂ ಇಲ್ಲಿ ಆಮೆ ವೇಗದಲ್ಲಿ ಕಾಮಗಾರಿ ನಡೆದಿದೆ. ಎರಡೂವರೆ ತಿಂಗಳು ಕಳೆದರೂ ಇನ್ನೂ ಪುನರಾರಂಭವಾಗುತ್ತಿಲ್ಲ. ಕಾಮಗಾರಿಗೆ ಬಳಸಿದ ಕಬ್ಬಿಣದ ಸರಳುಗಳು, ರಾಡ್ಗಳು ತುಕ್ಕು ಹಿಡಿಯುತ್ತಿವೆ..
ಹುಬ್ಬಳ್ಳಿ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದಾರೆ. ಆದರೆ, ಕಾಮಗಾರಿ ಆರಂಭವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಆದರೆ ಇನ್ನೊಂದು ಕಡೆ ಕೆಲ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿಲ್ಲ ಎನ್ನುತ್ತಿದ್ದಾರೆ.

ಸೆಪ್ಟೆಂಬರ್ 10ರಂದು ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್ಐ ನಾಬಿರಾಜ ಅವರ ತಲೆಮೇಲೆ ಹಳೇ ಕೋರ್ಟ್ ವೃತ್ತದ ಬಳಿ ಕಬ್ಬಿಣದ ರಾಡ್ ಬಿದ್ದು, ಮೃತಪಟ್ಟಿದ್ದರು. ಅಂದಿನಿಂದ ಕಾಮಗಾರಿ ಸ್ಥಗಿತವಾಗಿದೆ. ಈ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆ ಪಡೆದ ಕಂಪನಿಯು ಮತ್ತು ಅದರಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 19 ಜನ ಸಿಬ್ಬಂದಿ ಹಾಗೂ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಿಂದ ಕಾಮಗಾರಿಗೆ ಕಾರ್ಮಿಕರ ಕೊರತೆ ಎದುರಾಗಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಇನ್ನು ಈ ಭಾಗದಲ್ಲಿ ಕಾಮಗಾರಿ ಸ್ಥಗಿತವಾಗಿರುವುದರಿಂದ ವಾಹನಗಳ ಸಂಚಾರ ಅಸ್ತವ್ಯಸ್ಥವಾಗಿದೆ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಅವರು ಈಚೆಗೆ ಹುಬ್ಬಳ್ಳಿ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆಯನ್ನು ಪಡೆದಕೊಂಡಿರುವ ಕಂಪನಿ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹುಬ್ಬಳ್ಳಿ - ಧಾರವಾಡ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡಿದ್ದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಾಮಗಾರಿಯನ್ನು ನಾಲ್ಕು ದಿನದ ಒಳಗೆ ಕಾಮಗಾರಿ ಪುನರಾರಂಭಿಸುವಂತೆ ಸೂಚಿಸಲಾಗಿತ್ತು. ಜಿಲ್ಲಾಡಳಿತ ಪ್ರತಿವಾರವೂ ಎನ್ಎಚ್ಎಐ ಹಾಗೂ ಲೋಕೋಪಯೋಗಿ ಇಲಾಖೆ ಜೊತೆ ಸಭೆ ನಡೆಸಿ, ಗುತ್ತಿಗೆ ಪಡೆದ ಕಂಪನಿಗೆ ತಕ್ಷಣ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಲು ನಿರ್ದೇಶನ ನೀಡುತ್ತಲ್ಲೇ ಇದೆ. ಆದರೆ, ಅರ್ಧಕ್ಕೆ ನಿಂತಿರುವ ಕಾಮಗಾರಿ ಪ್ರಾರಂಭವಾಗುವ ಲಕ್ಷಣವೇ ಕಾಣಿಸುತ್ತಿಲ್ಲ.

ಇನ್ನು ಕಾಮಗಾರಿಗೆ ಬಳಸಿರುವ ವಸ್ತುಗಳು ಹಾಳಾಗುತ್ತಿವೆ. ಅಲ್ಲದೇ, ಕಬ್ಬಿಣದ ರಾಡ್ ತುಕ್ಕು ಹಿಡಿಯುತ್ತಿದೆ. ಇದನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲೂ ಕಾಮಗಾರಿ ಪ್ರಾರಂಭವಾಗಿಲ್ಲ. ಇದರ ಬಾಳಿಕೆ ಅವಧಿ ಸಹ ಕಡಿಮೆಯಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾಣವಾಗಿದೆ. ಈಗಾಗಲೇ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ, ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿವೆ.
ಮೇಲ್ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ. ನಿರ್ಮಾಣ ಕಾರ್ಯಕ್ಕೆ ಬಳಸಿದ್ದ ಕಬ್ಬಿಣದ ಸರಳುಗಳು ಮಳೆ ಮತ್ತು ಗಾಳಿಗೆ ತುಕ್ಕು ಹಿಡಿಯುತ್ತಿವೆ. ಸೀಮಿತ ಅವಧಿಯಲ್ಲಿ ಕಾಮಗಾರಿ ಮುಗಿಯದಿದ್ದರೆ ಸಾಮರ್ಥ್ಯ ಕಳೆದುಕೊಳ್ಳುತ್ತವೆ. ಇದು ಮುಂಬರುವ ದಿನಗಳಲ್ಲಿ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಈಗಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ ಈ ಕಾಮಗಾರಿಯಿಂದ ಸೃಷ್ಟಿಯಾಗಿರುವ ರಸ್ತೆಗುಂಡಿ ಹಾಗೂ ಹೊಂಡಗಳಲ್ಲಿ ಬಿದ್ದು ಹುಬ್ಬಳ್ಳಿ - ಧಾರವಾಡದ ಹಲವುರ ಕೈ-ಕಾಲು ಮುರಿದುಕೊಂಡಿದ್ದಾರೆ. ಕಾಮಗಾರಿ ವಿಳಂಬವಾಗುತ್ತಿರುವುದರಿಂದ ವಾಹನಗಳ ಸಂಚಾರಕ್ಕೂ, ಜನರ ಓಡಾಟಕ್ಕೂ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಈಗಾಗಲೇ ಜನ ಅಸಮಾಧಾನ ಹೊರ ಹಾಕಿದ್ದಾರೆ.
ಪೊಲೀಸ್ ಅಧಿಕಾರಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆಲವು ಸಿಬ್ಬಂದಿ ಮತ್ತು ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದರಿಂದ ಕಾರ್ಮಿಕರ ಕೊರತೆ ಎದುರಾಗಿದೆ. ಹೊಸದಾಗಿ ಕಾರ್ಮಿಕರನ್ನು ಕರೆತರಬೇಕಿರುವುದರಿಂದ ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಕಂಪನಿ ಕಾನೂನು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಕಾಮಗಾರಿ ಪುನರಾರಂಭಿಸಲು ವಿಳಂಬವಾಗುತ್ತಿದೆ ಎನ್ನಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು. ಕಾಮಗಾರಿ ನಡೆಯುವ ಪ್ರದೇಶದಲ್ಲಿಯ ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರ ಸಹ ಹುಬ್ಬಳ್ಳಿ - ಧಾರವಾಡ ಪಾಲಿಕೆ ಪೂರ್ಣಗೊಳಿಸಿದೆ. ಇನ್ನು ಕಾಮಗಾರಿ ಪುನರಾರಂಭಿಸುವುದಕ್ಕೆ ಗುತ್ತಿಗೆ ಪಡೆದಿರುವ ಕಂಪನಿಗೆ ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೆ, ಕಾಮಗಾರಿ ಮಾತ್ರ ಪುನರಾರಂಭಿಸುತ್ತಿಲ್ಲ. ಇದರಿಂದ ಜನರಿಗೆ ತೀವ್ರ ಸ್ವರೂಪದ ತೊಂದರೆ ಆಗಿದೆ ಎಂದು ಹೇಳಲಾಗಿದೆ.












Click it and Unblock the Notifications