ಲೋಕಸಭೆಗೆ ಸಚಿವರಿಗೆ ಟಿಕೆಟ್ ನೀಡಲು ʼಹೈʼ ಚಿಂತನೆ; ರಾಜ್ಯ ರಾಜಕಾರಣದಲ್ಲಿ ಉಳಿಯಲು ಸತೀಶ್ ಜಾರಕಿಹೊಳಿ ಪ್ಲ್ಯಾನ್ ಏನು?
ಬೆಳಗಾವಿ, ಆಗಸ್ಟ್ 24: 2023 ರ ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆ ವರ್ಚಸ್ಸಿರುವ ಸಚಿವರನ್ನ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ.
ಹೌದು, ರಾಜ್ಯ ರಾಜಕಾರಣದ ಪವರ್ ಸೆಂಟರ್ ಆಗಿರುವ ಬೆಳಗಾವಿ ಜಿಲ್ಲೆಯ ಎರಡೂ ಸ್ಥಾನ ಗೆಲ್ಲಬೇಕೆಂಬ ದೃಷ್ಟಿಯಿಂದ ಚಿಕ್ಕೋಡಿಯಿಂದ ಲಕ್ಷ್ಮಣ್ ಸವದಿ ಹಾಗೂ ಬೆಳಗಾವಿಯಿಂದ ಸಚಿವ ಸತೀಶ್ ಜಾರಕಿಹೊಳಿರನ್ನು ಕಣಕ್ಕಿಳಿಸುವ ಹೈಕಮಾಂಡ್ ಚಿಂತನೆ ನಡೆಸಿದ್ದು, ರಾಷ್ಟ್ರ ರಾಜಕಾರಣಕ್ಕೆ ಹೋಗಲು ಸತೀಶ್ ಜಾರಕಿಹೊಳಿ ಹಿಂದೆಟ್ಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಏಕೆಂದರೆ, ಮುಂದಿನ ಅವಧಿಗೂ ನಾನು ಮುಖ್ಯಮಂತ್ರಿ ರೇಸ್ ನಲ್ಲಿ ಇರುವುದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಉಳಿಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಕ್ಕೋಡಿಯಿಂದ ಲಕ್ಷ್ಮಣ್ ಸವದಿ ಸ್ಪರ್ಧಿಸಲು ಹೈಕಮಾಂಡ್ ಲೆಕ್ಕಾಚಾರವಾಗಿದೆ. ಆದರೆ, ಯಾವುದೇ ಕಾರಣಕ್ಕೂ ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಲೋಕಸಭೆಗೆ ಸ್ಪರ್ಧಿಸಲ್ಲ ಎಂದು ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ಇತ್ತ ಸಚಿವ ಸತೀಶ್ ಜಾರಕಿಹೊಳಿಯೂ ಸಹ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾಸ್ಟರ್ಪ್ಲ್ಯಾನ್ ಮಾಡಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.
ಹಾಲಿ ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಬೆಳಗಾವಿ, ಚಿಕ್ಕೋಡಿ ಎರಡೆರಡು ಕಡೆ ಲೋಕಸಭೆಗೆ ಟಿಕೆಟ್ ಕೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು,, ಪ್ರಕಾಶ್ ಹುಕ್ಕೇರಿ ಹೆಸರು ಪ್ರಸ್ತಾಪಿಸಿ ರಾಜ್ಯ ರಾಜಕಾರಣದಲ್ಲಿ ಉಳಿಯಲು ಸತೀಶ್ ಜಾರಕಿಹೊಳಿ ಮಾಸ್ಟರ್ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಲೋಕಸಭೆಗೆ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ಕೊಡಿಸಿ, ಚಿಕ್ಕೋಡಿ ಲೋಕಸಭೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದಾರೆ ಎಂಬ ಮಾತು ಕೇಳಿ ಬರ್ತಿದೆ. ಈಗಾಗಲೇ ಪುತ್ರಿ ರಾಜಕೀಯ ಭವಿಷ್ಯಕ್ಕಾಗಿ ತೆರೆಮರೆಯಲ್ಲಿ ಸತೀಶ್ ಜಾರಕಿಹೊಳಿ ಪ್ರಯತ್ನ ನಡೆಸುತ್ತಿದ್ದು, ಇನ್ನು ಪುತ್ರಿ ಪ್ರಿಯಾಂಕಾ ಲೋಕಸಭೆ ಸ್ಪರ್ಧಿಸುವ ವಿಚಾರ ಇನ್ನೂ ಚರ್ಚಾ ಹಂತದಲ್ಲಿ ಇದೆ ಎಂದು ಸತೀಶ್ ಜಾರಕಿಹೊಳಿ ಹಲವು ಬಾರಿ ಹೇಳಿಕೆ ನೀಡಿದ್ದಾರೆ.

ಇತ್ತ ಬೆಳಗಾವಿ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಮಂಗಳಾ ಸುರೇಶ್ ಅಂಗಡಿಯವರ ವರ್ಚಸ್ಸು ಕಡಿಮೆಯಾಗಿದ್ದು, ಇತ್ತೀಚೆಗೆ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದ ವಿಚಾರ ಪ್ರಸ್ತಾಪಿಸಿ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ರೆ ಒಳ್ಳೆಯದು ಎಂದು ಹಲವು ನಾಯಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ ರಾಜ್ಯ ರಾಜಕಾರಣದಲ್ಲೇ ಉಳಿಯುವ ಮೂಲಕ, ಮಗಳನ್ನ ರಾಷ್ಟ್ರ ರಾಜಕಾರಣದತ್ತ ಕಳುಹಿಸುವ ಪ್ಲಾನ್ ಸತೀಶ್ ಜಾರಕಿಹೊಳಿ ನಡೆಸಿದ್ದಾರೆ ಎನ್ನಲಾಗಿದೆ.
ಒಟ್ನಾಲಿ, ಲೋಕಸಭೆ ಚುನಾವಣೆ ವಿಚಾರವಾಗಿ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ಬೆಳಗಾವಿ ಜಿಲ್ಲಾ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಯ ಕ್ಷಣದಲ್ಲಿ ಯಾವ ನಿರ್ಧಾರ ತಗೆದುಕೊಳ್ಳುತ್ತೆ ಹಾಗೂ ಸತೀಶ್ ಜಾರಕಿಹೊಳಿ ನಿರ್ಧಾರಕ್ಕೆ ಅಸ್ತು ಎನ್ನುತ್ತಾ ಎಂಬುದನ್ನ ಕಾದು ನೋಡಬೇಕಾಗಿದೆ.












Click it and Unblock the Notifications