ಮಗನ ರಾಜಕೀಯ ಪ್ರವೇಶಕ್ಕೆ ತೊಡಕಾದ ಸುಮಲತಾ ವಿರುದ್ಧ ಎಚ್ಡಿಕೆ ಗರಂ
Recommended Video

ಬೆಂಗಳೂರು, ಫೆಬ್ರವರಿ 05: ಮಂಡ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಅವರು ಹೇಳಿಕೆ ನೀಡಿದ ಬೆನ್ನಲ್ಲೆ ಕುಮಾರಸ್ವಾಮಿ ಅವರು ಸುಮಲತಾ ಅವರ ವಿರುದ್ಧ ಟೀಕಾ ಪ್ರಹಾರ ಆರಂಭಿಸಿದ್ದಾರೆ.
ನಿನ್ನೆ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಂಡ್ಯಕ್ಕೆ ಸುಮಲತಾ ಕೊಡುಗೆ ಏನು? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಸಿಂಪತಿಯಂದಾಗಿ ಜನರ ಪ್ರೀತಿ ಅವರಿಗೆ ಸಿಗುತ್ತಿದೆ ಅದನ್ನೇ ಅವರು ರಾಜಕೀಯ ಏಳಿಗೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಂತರಂಗದ ಮಾತು ಹೊರಹಾಕಿದ್ದಾರೆ.
ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಿಗಳ ಮಕ್ಕಳು ಅಧಿಕಾರಿಗಳಾಗುವಂತೆ, ನಟರ ಮಕ್ಕಳು ನಟರಾಗುವಂತೆ, ಕ್ರೀಡಾಪಟುಗಳ ಮಕ್ಕಳು ಕ್ರೀಡಾಪಟುಗಳಾಗುವಂತೆ ರಾಜಕಾರಣಿಗಳ ಮಕ್ಕಳು ರಾಜಕಾರಣಿ ಆಗುವುದು ಸಾಮಾನ್ಯ ಎಂದು ಉತ್ತರಿಸಿದರು.

ನಿಖಿಲ್ಗೆ ಟಿಕೆಟ್, ಹೈಕಮಾಂಡ್ ನಿರ್ಧಾರ: ಎಚ್ಡಿಕೆ
ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಜೆಡಿಎಸ್ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದರು.

ಮಂಡ್ಯದಿಂದ ನಿಖಿಲ್ ಕಣಕ್ಕೆ: ಎಚ್ಡಿಕೆ ಪ್ಲಾನ್
ನಿಖಿಲ್ ಕುಮಾರಸ್ವಾಮಿ ಅವರನ್ನು ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಕಣಕ್ಕೆ ಇಳಿಸುವ ಬಗ್ಗೆ ಕುಮಾರಸ್ವಾಮಿ ಚಿಂತಿಸಿದ್ದರು, ಆದರೆ ಸುಮಲತಾ ಅವರು ತಾವು ಮಂಡ್ಯದಿಂದ ಚುನಾವಣೆಗೆ ಕಣಕ್ಕಿಳಿಯುವುದಾಗಿ ಹೇಳಿಕೆ ನೀಡಿದ್ದರಿಂದ ಕುಮಾರಸ್ವಾಮಿ ಅವರು ಸಿಟ್ಟಾಗಿದ್ದಾರೆ ಎನ್ನಲಾಗಿದೆ.

'ಸುಮಲತಾ ಮಂಡ್ಯ ಗೌಡ್ತಿ ಅಲ್ಲ'
ಮತ್ತೊಂದೆಡೆ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಆಂಧ್ರ ಗೌಡ್ತಿ ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು ಜೆಡಿಎಸ್ ವಿರುದ್ಧ ಅಂಬರೀಶ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ಸುಮಲತಾ ರಾಜಕೀಯ ಪ್ರವೇಶ ಕುತೂಹಲ
ಸುಮಲತಾ ಅವರ ರಾಜಕೀಯ ಪ್ರವೇಶ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ಸುಮಲತಾ ಅವರು ಕಾಂಗ್ರೆಸ್ನಿಂದಲೇ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಯಾವ ಪಕ್ಷದ ಪರವೂ ಅಲ್ಲ, ಯಾವ ಪಕ್ಷದ ವಿರುದ್ಧವೂ ಅಲ್ಲ ಎಂದು ಸುಮಲತಾ ಹೇಳಿದ್ದು, ಅವರು ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿಯು ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತಿದೆ.












Click it and Unblock the Notifications