CM Change: ಸರ್ಕಾರಕ್ಕೆ ಎರಡು ವರ್ಷ; ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಕೊಟ್ಟ ಸಂದೇಶವೇನು?
ಬೆಂಗಳೂರು, ಏಪ್ರಿಲ್ 07: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಭಾರೀ ಚರ್ಚೆಯಾಗುತ್ತಿದೆ. ರಾಜ್ಯ ಬಜೆಟ್ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನುವ ಚರ್ಚೆ ನಡೆಯುತ್ತಿದ್ದು, ಬಹುದಿನಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ವರಿಷ್ಠರನ್ನ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣೆಗೆಗಳ ಕುರಿತು ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ.
ಹೊಸದಿಲ್ಲಿಯಲ್ಲಿ ಎಐಸಿಸಿ ವರಿಷ್ಠ ನಾಯಕರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆಯ ಚರ್ಚೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯ ಬಳಿಕ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಬಿರುಸಾಗಿವೆ. ಮುಖ್ಯಮಂತ್ರಿ ನಿವಾಸ ಕಾವೇರಿ ಭಾನುವಾರ ಇಡೀ ದಿನ ಚಟುವಟಿಕೆಯ ಕೇಂದ್ರವಾಗಿದ್ದು, ಹಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಹೈಕಮಾಂಡ್ ಸಂದೇಶದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದರು. ಹೈಕಮಾಂಡ್ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುರ ಪುನರ್ ರಚನೆ ಬಗ್ಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಹನಿಟ್ರ್ಯಾಪ್ ಪ್ರಕರಣ ತೀವ್ರ ಸದ್ದು ಮಾಡುತ್ತಿದೆ. ಇದರಿಂದ ಪಕ್ಷವೂ ತೀವ್ರ ಮುಜುಗರವನ್ನ ಅನುಭವಿಸಿದ್ದು, ಈ ಸಂದರ್ಭದಲ್ಲಿ ಹಿರಿಯ ಸಚಿವರಿಗೆ ಕೊಕ್ ಕೊಟ್ಟು, ಹೊಸಬರಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದು ಹೈಕಮಾಂಡ್ ಸಂದೇಶ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ತಿಳಿಸಿದ್ದಾರೆ. ಅಲ್ಲದೇ ತಮ್ಮ ತಮ್ಮ ಕಾರ್ಯವೈಖರಿಯ ಮೇಲೆ ಗಮನವಿಟ್ಟು ಕೆಲಸ ಮಾಡುವಂತೆ ತಿಳಿಸಿದ್ದಾರೆ.
ಇನ್ನೂ ಕೆಪಿಸಿಸಿ ನಾಯಕತ್ವ ಬದಲಾವಣೆ ಕುರಿತು ವರಿಷ್ಠರ ನಾಯಕರ ನಿಲುವು ಹಾಗೂ ಸೂಚನೆ ಏನಿದೆ ಎಂಬ ಕುತೂಹಲ ಆಡಳಿತ ಪಕ್ಷದಲ್ಲಿ ಹೆಚ್ಚಿದೆ. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಜತೆಗಿನ ಅರ್ಧ ಗಂಟೆಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆ ಬಗ್ಗೆ ಮಾಹಿತಿ ಪಡೆಯಲು ಸಚಿವರುಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ. ಭಾನುವಾರ ನಿವಾಸದಲ್ಲೇ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ ಸೇರಿ ಹಲವು ಸಚಿವ, ಶಾಸಕರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಅಲ್ಲದೇ ಪಕ್ಷ ಮತ್ತು ಸರಕಾರದಲ್ಲಿ ಉತ್ತಮವಾಗಿ ನಿರ್ವಹಿಸಿಕೊಂಡು ಹೋಗುವಂತೆ ಹೈಕಮಾಂಡ್ ವರಿಷ್ಠರು ಸೂಚನೆಯನ್ನ ನೀಡಿದ್ದಾರೆ. ಮೇ ತಿಂಗಳಿಗೆ ಸರ್ಕಾರ ಎರಡು ವರ್ಷ ಪೂರೈಸಲಿದ್ದು, ಸಿಎಂ ಬದಲಾವಣೆಯ ಬಗ್ಗೆ ಯಾರು ಸಹ ಚರ್ಚೆ ನಡೆಸದೇ ಆಡಳಿತದತ್ತ ಗಮನ ಹರಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಹನಿ ಟ್ರ್ಯಾಪ್ ಪ್ರಕರಣ ಒಳಗೊಂಡು ಹಲವು ವಿಚಾರಗಳಲ್ಲಿ ಸಂಪುಟ ಸಹೋದ್ಯೋಗಿಗಳಲ್ಲೇ ಪರಸ್ಪರ ಅವಿಶ್ವಾಸ ಮತ್ತು ಅಸಮಾಧಾನದ ಸ್ಥಿತಿ ನಿರ್ಮಾಣವಾಗಿದ್ದು, ಈ ಎಲ್ಲಾ ಬೆಳವಣಿಗಳ ಕುರಿತು ಹೈಕಮಾಂಡ್ ಮಾಹಿತಿಯನ್ನ ಪಡೆದುಕೊಂಡಿದೆ.
ಇನ್ನೂ ದೆಹಲಿಯ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಒಳಗೊಂಡು ಕೆಲವು ಕೇಂದ್ರ ಸಚಿವರ ಭೇಟಿಯಲ್ಲಿದ್ದು, ರಾಜ್ಯದ ಅಭಿವೃದ್ದಿ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೇ ಪಕ್ಷದ ವರಿಷ್ಠರ ಭೇಟಿ ಪ್ರತ್ಯೇಕವಾಗಿ ನಡೆದಿವೆ. ಡಿ.ಕೆ. ಶಿವಕುಮಾರ್ ಅವರು ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದು ಸಚಿವರು ಮತ್ತು ಆಡಳಿತ ಪಕ್ಷದ ಪ್ರಮುಖರ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications