ವರುಣಾ ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ರಾಕೇಶ್ ಪುತ್ರ! ಮೊಮ್ಮಗನ ರಾಜಕೀಯ ಎಂಟ್ರಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು,ಮೇ6: ನನ್ನ ಮೊಮ್ಮಗನಿಗೆ ಇನ್ನು 17 ವರ್ಷ. ಅವನು ಒಂದು ವೇಳೆ ರಾಜಕೀಯಕ್ಕೆ ಬರಲು ಮನಸು ಮಾಡಿದರು ಅದಕ್ಕೆ ಇನ್ನು 8 ರಿಂದ 10 ವರ್ಷ ಬೇಕು. ಮೊಮ್ಮಗನನ್ನು ನನ್ನ ಉತ್ತರಾಧಿಕಾರಿ ಎಂದು ಹೇಳಿಯೇ ಇಲ್ಲ. ರಾಜಕೀಯಕ್ಕೆ ಅವನು ಬರಬಹುದು ಇಲ್ಲ ಬರದೇ ಇರಬಹುದು. ಅದು ಅವನ ವೈಯಕ್ತಿಕ ಇಷ್ಟ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ವಿರುದ್ಧ ಜನ ಇಂದು ಬೇಸತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ಭ್ರಷ್ಟಾಚಾರ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 40% ಕಮಿಷನ್ ಸರ್ಕಾರ ಎಂದು ದೂರಿದ್ದಾರೆ.

ಪ್ರಧಾನಿ ಮೋದಿ ಅವರು ದೇಶದ ಜನರಿಗೆ 'ನ ಖಾವೂಂಗ ನ ಖಾನೇದೂಂಗ' ಎಂದಿದ್ದರು, ಆದರೆ ಪತ್ರ ಬರೆದು ಇಷ್ಟು ಕಾಲ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಅವರ ಈ ಭರವಸೆ ಕೇವಲ ಪ್ರಚಾರಕ್ಕಾಗಿ ನೀಡಿದ್ದ ಹೇಳಿಕೆ ಮಾತ್ರ. ರುಪ್ಸಾ (ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ) ದವರು ಪ್ರಧಾನಿಗಳಿಗೆ ಪತ್ರ ಬರೆದು ಈ ಸರ್ಕಾರ 40% ಕಮಿಷನ್ ಕೇಳುತ್ತಿದ್ದೆ ಎಂದರು. ಬೊಮ್ಮಾಯಿ ಅವರು ತಮ್ಮ ಭ್ರಷ್ಟಾಚಾರಗಳಿಗೆ ದಾಖಲೆ ಕೇಳುತ್ತಾರೆ, ಈ ಪತ್ರಗಳು ದಾಖಲಾತಿಗಳಲ್ವಾ? ಎಂದು ಪ್ರಶ್ನಿಸಿದರು.
ಪಿಎಸ್ಐ ನೇಮಕಾತಿಯಲ್ಲಿ ಎಡಿಜಿಪಿ ಸಹಿತವಾಗಿ ಸುಮಾರು 70 ಜನ ಜೈಲಿಗೆ ಹೋದರು, ಇದು ಸಾಕ್ಷಿ ಅಲ್ಲವಾ? ಸಂತೋಷ್ ಪಾಟೀಲ್ ಎಂಬ ಬಿಜೆಪಿ ಕಾರ್ಯಕರ್ತ ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಗುತ್ತಿಗೆ ಕೆಲಸಗಳನ್ನು ಮಾಡಿ, ಲಂಚ ಕೊಡದ ಕಾರಣಕ್ಕೆ ಬಿಲ್ ಹಣ ನೀಡಲಿಲ್ಲ ಎಂದು ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದರು. ಇದು ಸಾಕ್ಷಿ ಅಲ್ಲವಾ? ನಾವು ಸದನದ ಒಳಗೆ ಮತ್ತು ಹೊರಗೆ ಹಗಲು ರಾತ್ರಿ ಹೋರಾಟವನ್ನು ಮಾಡಿದ್ದೆವು, ಧರಣಿ ಮಾಡಿದ್ದೆವು. ಇದರಿಂದ ಈಶ್ವರಪ್ಪ ರಾಜೀನಾಮೆ ನೀಡಬೇಕಾಯಿತು.
ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರು ಸೋಪ್ ಮತ್ತು ಡಿಟರ್ಜೆಂಟ್ ನಿಗಮದ ಅಧ್ಯಕ್ಷರಾಗಿದ್ದವರು. ಅವರ ಮಗ ಅಪ್ಪನ ಪರವಾಗಿ ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಮನೆಯನ್ನು ಶೋಧ ಮಾಡಿದಾಗ ಸುಮಾರು 8 ಕೋಟಿ ಭ್ರಷ್ಟ ಹಣ ಸಿಗುತ್ತದೆ. ಈ ರೀತಿ ರೆಡ್ ಹ್ಯಾಂಡಾಗಿ ಸಿಕ್ಕಿಬೀಳುವುದು ದಾಖಲೆಗಳಿಗಿಂತ ಪ್ರಬಲ ಸಾಕ್ಷಿಗಳು. ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಬೀತಾಗಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು?

ಇವೆಲ್ಲವೂ ಈ ಸರ್ಕಾರ 40% ಕಮಿಷನ್ ಸರ್ಕಾರ ಎಂಬುದನ್ನು ತೋರಿಸುತ್ತದೆ. ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ನೇಮಕಾತಿ, ವರ್ಗಾವಣೆ, ಯೋಜನೆಗೆ ಅನುಮೋದನೆ ನೀಡುವಾಗ, ಎನ್,ಒ,ಸಿ ನೀಡುವಾಗ ಲಂಚದಿಂದ ತುಂಬಿಹೋಗಿದೆ. ಇಷ್ಟು ದೊಡ್ಡ ಮಟ್ಟದ ಭ್ರಷ್ಟಾಚಾರ ಯಾವಾಗಲೂ ನಡೆದಿರಲಿಲ್ಲ.
ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿತ್ತು ಎನ್ನುತ್ತಾರೆ. ಹಾಗಾದರೆ ಹಿಂದೆ 5 ವರ್ಷ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಯಾವತ್ತಾದರೂ ಆರೋಪ ಮಾಡಿತ್ತಾ? ಕಳೆದ 3 ವರ್ಷ 10 ತಿಂಗಳಿಂದ ಬಿಜೆಪಿ ಅಧಿಕಾರದಲ್ಲಿದೆ, ಸರ್ಕಾರದ ಬಳಿ ಸಾಕ್ಷಿ ಇದ್ದರೆ ಕ್ರಮ ಕೈಗೊಳ್ಳಬಹುದಾಗಿತ್ತು ಅಲ್ವಾ? ಈಗ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದರೆ ಯಾರಾದರೂ ನಂಬುತ್ತಾರ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷದ ಧೋರಣೆ ಮತ್ತು ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಸುಮಾರು 50,000 ಜನರು ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಜನ ಬರೆಯುತ್ತಿದ್ದಾರೆ. ಮೋದಿ ಅವರ ರೋಡ್ ಶೋ ನಿಂದಾಗ ಕೆಲವು ರಸ್ತೆಗಳಿಗೆ ನಿರ್ಬಂಧ ಹಾಕಿದ್ದಾರೆ. ಮೋದಿ ಅವರು ಹೊಸಪೇಟೆಗೆ ಹೋಗುತ್ತಿದ್ದರು, ನಾನು ಗಂಗಾವತಿಗೆ ಹೊರಟಿದ್ದೆ, ಆದರೆ ಮೋದಿ ಅವರು ಹೋಗುತ್ತಿರುವ ಕಾರಣಕ್ಕೆ ನನಗೆ ಅನುಮತಿಯನ್ನೇ ನೀಡಿಲ್ಲ.
ವಿಧವಿಧವಾಗಿ ನಾನು ಮನವಿ ಮಾಡಿದೆ, ಆದರೂ ಅನುಮತಿ ಕೊಡಲಿಲ್ಲ. ಒಬ್ಬ ವಿರೋಧ ಪಕ್ಷದ ನಾಯಕನಿಗೆ ಹೀಗಾದರೆ ಸಾಮಾನ್ಯ ಜನರ ಗತಿಯೇನು? ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ? ಒಂದಿನ ಮುಂಚಿತವಾಗಿ ಹೋಗಿ ಉಳಿದುಕೊಳ್ಳಿ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ, ಬಡ ವಿದ್ಯಾರ್ಥಿಗಳಿಗೆ ಇದು ಆಗುತ್ತಾ? ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ.
ಮೋದಿ ಅವರ ರೋಡ್ ಶೋವನ್ನು ಒಂದಿನ ಮುಂದಕ್ಕೆ ಹಾಕಬಹುದಲ್ವ? ವಿದ್ಯಾರ್ಥಿಗಳು ಪರೀಕ್ಷೆ ನಾಳೆ ಬರೆಯುತ್ತೇನೆ ಎಂದರೆ ಆಗುತ್ತಾ? ಸರ್ಕಾರದ ಮತ್ತು ಮೋದಿ ಅವರ ಈ ನಡೆ ಖಂಡನೀಯ.












Click it and Unblock the Notifications