ಬೆಂಗಳೂರಿನ 2,000 ಕಿ.ಮೀ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ : ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 10: ಬೆಂಗಳೂರಿನ 2 ಸಾವಿರ ಕಿ.ಮೀ ಪ್ರಮುಖ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಸರಕಾರ ಮುಂದಾಗಿದೆ. ಈಗಾಗಲೇ 100 ಕಿ.ಮೀ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುತ್ತಿಗೆದಾರರ ಸಂಘದ ಬೇಡಿಕೆಗಳ ಈಡೇರಿಕೆಗೆ ಚಿಂತನೆ: ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ರಾಜ್ಯ ಗುತ್ತಿಗೆದಾರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಕಾಮಗಾರಿಯನ್ನು ಅನಗತ್ಯ ವಿಳಂಬ ಮಾಡಿದರೆ ಸಂಬಂಧಿಸಿದ ಇಂಜಿನಿಯರುಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳುಲಾಗುವುದು," ಎಂದು ಎಚ್ಚರಿಕೆಯನ್ನೂ ನೀಡಿದರು.
ನ್ಯಾಯಯುತವಾಗಿ ಕೆಲಸ ಮಾಡಿ, ನಾವೂ ನ್ಯಾಯಯುತವಾಗಿ ಕೆಲಸ ಮಾಡುತ್ತೇವೆ. ಈ ಮೂಲಕ ರಾಜ್ಯವನ್ನು ಕಟ್ಟುವ ಕೆಲಸ ಮಾಡೋಣ ಎಂದು ಗುತ್ತಿಗಾದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
"ಕೆಲವೇ ಗುತ್ತಿಗೆದಾರರಿಂದ ಎಲ್ಲಾ ಗುತ್ತಿಗೆದಾರರ ಸಮೂಹಕ್ಕೆ ತೊಂದರೆಯಾಗುತ್ತಿದೆ. ಎಲ್ಲಾ ರಂಗಗಳಲ್ಲೂ ಕಪ್ಪು ಚುಕ್ಕೆ ಇರುವ ಜನರು ಇದ್ದೇ ಇರುತ್ತಾರೆ," ಎಂದು ಸಿದ್ದರಾಮಯ್ಯ ಹೇಳಿದರು.
ಹೊರ ರಾಜ್ಯದ ಗುತ್ತಿಗೆದಾರರೇ ಹೆಚ್ಚಾಗಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗುತ್ತಿಗೆ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಕಾನೂನಿನಲ್ಲಿ ಅವಕಾಶ ಇದೇಯೇ ಎನ್ನುವುದನ್ನು ಪರಿಶೀಲಿಸಿ ರಾಜ್ಯದ ಗುತ್ತಿಗೆದಾರರಿಗೆ ಅವಕಾಶ ನೀಡಲು ಸರಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಬೆಂಗಳೂರಿನ 2 ಸಾವಿರ ಕಿ.ಮೀ ಪ್ರಮುಖ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಸರಕಾರ ಮುಂದಾಗಿದೆ. ಈಗಾಗಲೇ 100 ಕಿ.ಮೀ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗಿದೆ. ಇದರಿಂದ ರಸ್ತೆ ಬಾಳಿಕೆ ಹೆಚ್ಚು ವರ್ಷಗಳ ಕಾಲ ಬರಲಿದೆ. ಇದರಿಂದ ಸಾರ್ವಜನಿಕ ಹಣಕ್ಕೆ ಆಗುವ ನಷ್ಟವೂ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ ಜಾರ್ಜ್ ಮಾತನಾಡಿ, ನಗರದಲ್ಲಿ ಕಳೆದ ಒಂದೂವರೆ ಎರಡು ತಿಂಗಳನಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿಗಳು ರಸ್ತೆ ಗುಂಡಿ ಮುಚ್ಚಲು ಹಣ ಬಿಡುಗಡೆ ಮಾಡಿದ್ದು, ಮಳೆ ನಿಂತ ತಕ್ಷಣವೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.