ಕಾಂಗ್ರೆಸ್ ಪಕ್ಷ ಸೇರಿದ ಯು.ಬಿ. ಬಣಕಾರ್, ಶ್ರೀನಿವಾಸ್, ಎಚ್.ನಿಂಗಪ್ಪ, ಮಲ್ಲಿಕಾರ್ಜುನ ರೋಣಿ
ಬೆಂಗಳೂರು, ನವೆಂಬರ್ 21: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಗುಡ್ ಬೈ ಹೇಳಿದ್ದ ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು. ಬಿ. ಬಣಕಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅಲ್ಲದೇ ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರು ಕಾಂಗ್ರೆಸ್ ಸಿದ್ಧಾಂತ, ನಾಯಕತ್ವವನ್ನು ಒಪ್ಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ಹಾಗೂ ಶಾಲು ನೀಡಿ ಈ ನಾಯಕರು ಹಾಗೂ ಅವರ ಬೆಂಬಲಿಗರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಇನ್ನೂ ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಬಹಳ ಜನ ಕಾಂಗ್ರೆಸ್ ಖಾಲಿಯಾಗಿರುವ ಮನೆ. ಅಲ್ಲಿಗೆ ಯಾರು ಹೋಗುತ್ತಾರೆ. ಡಿ.ಕೆ.ಶಿವಕುಮಾರ್ ಎಲ್ಲರನ್ನೂ ಕರೆಯುತ್ತಿದ್ದಾರೆ ಎಂದು ಕೆಲವು ಸ್ನೇಹಿತರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಇದನ್ನು ಒಂದೇ ಬಾರಿ ಬಿಡುಗಡೆ ಮಾಡುವುದಿಲ್ಲ. ಇಂದು ಶುಭ ಮುಹೂರ್ತ, ಶುಭ ಗಳಿಗೆಯಲ್ಲಿ ಬೇರೆ ಪಕ್ಷದ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಹಿರೇಕೆರೂರಿನ ಮಾಜಿ ಶಾಸಕರಾದ ಯು.ಬಿ ಬಣಕಾರ್ ಅವರು ಬಹಳ ದಿನದಿಂದ ಪಕ್ಷ ಸೇರ್ಪಡೆಯಾಗಬೇಕಿತ್ತು. ಅವರ ತಂದೆ ಕೂಡ ಜನರ ಸೇವೆ ಮಾಡಿದ್ದು, ಇಂದು ಅವರ ಮಗ ಬಿಜೆಪಿಯಲ್ಲಿ ಅಧಿಕಾರ ತ್ಯಾಗ ಮಾಡಿ ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಗೆ ಅರ್ಜಿ ಹಾಕಿದ್ದರು. ನಾನು ಪಕ್ಷದ ಹಿರಿಯ ನಾಯಕರು ಹಾಗೂ ಕೋಳಿವಾಡ ಅವರು, ಡಿ.ಆರ್. ಪಾಟೀಲ್ ಸೇರಿದಂತೆ ಆ ಭಾಗದ ಪಕ್ಷದ ಮುಖಂಡರ ಜತೆ ಚರ್ಚೆ ಮಾಡಿದ್ದೇನೆ. ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಇವರ ಸೇರ್ಪಡೆಗೆ ಒಮ್ಮತದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಅವರಿಗೆ ತುಂಬು ಹೃದಯದ ಸ್ವಾಗತ ಬಯಸುತ್ತೇನೆ. ಬಣಕಾರ್ ಅವರ ಜತೆ ಮಂಜಣ್ಣ, ಶಿವರಾಜ್ ಹರಿಜನ್, ಮಹೇಂದ್ರ, ಹೇಮಣ್ಣ, ಷನ್ಮುಗಯ್ಯ ಅವರು ಸೇರಿದಂತೆ ಹಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹಿರಿಯ ನಾಯಕರ ಎನ್. ಟಿ ಬೊಮ್ಮಣ್ಣ ಅವರ ಪುತ್ರ ಡಾ. ಶ್ರೀನಿವಾಸ್ ಅವರು ಕೂಡ ನೂರಾರು ಬೆಂಬಲಿಗೆರೊಂದಿಗೆ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಅವರ ಜತೆ ಎನ್. ಟಿ ತಮ್ಮಣ್ಣ, ಪಂಪಾಪತಿ, ಎಂ. ಪಿ ಚಂದ್ರಣ್ಣ, ಬಸವರಾಜ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಇನ್ನು ವಿಜಯಪುರದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ರೋಣಿ ಅವರು ಪಕ್ಷ ಸೇರ್ಪಡೆ ಆಗುತ್ತಿದ್ದಾರೆ. ನಮ್ಮ ಪಕ್ಷದ ನಾಯಕರು, ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿ ಇವರುಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.

ಈ ನಾಯಕರೆಲ್ಲರೂ ಪಕ್ಷದ ಸಿದ್ಧಾಂತ ಒಪ್ಪಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಒಪ್ಪಿ, ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಹಿರೇಕೆರೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ: ಯು.ಬಿ ಬಣಕಾರ್
ಇನ್ನೂ ಕಾಂಗ್ರೆಸ್ ಪಕ್ಷ ಸೇರ್ಪಡೆಯ ನಂತರ ಯು.ಬಿ ಬಣಕಾರ್ ಅವರು ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾಗಿ ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿ ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ.

ನಾನು ಕಳೆದ 30 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಹಲವು ಸ್ಥಾನಗಳಲ್ಲಿ ಕೆಲಸ ಮಾಡಿದ್ದೇನೆ. 2018ರಲ್ಲಿ ಬಿ.ಸಿ ಪಾಟೀಲ್ ಅವರು ಈ ಎಲ್ಲಾ ನಾಯಕರ ಬೆಂಬಲದಿಂದ ಗೆದ್ದಿದ್ದರು. ಆದರೆ ಅಧಿಕಾರ ಆಸೆಗೆ ಪಕ್ಷ ತೊರೆದರು. ಅದೇ ಹಿರೇಕೆರೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ. ನನ್ನ ಗುರಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ನಿಮ್ಮ ಪ್ರೀತಿ, ವಿಶ್ವಾಸ, ನಂಬಿಕೆಗೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದರು.












Click it and Unblock the Notifications