CM Race: ಸಿ.ಎಂ ರೇಸ್ನಲ್ಲಿ ಇರೋದು ಇವರೇ: ಬಿ.ವೈ ವಿಜಯೇಂದ್ರ ಶಾಕಿಂಗ್ ಹೇಳಿಕೆ!
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋತ ನಂತರ ದೇಶದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ರಾಜ್ಯದಲ್ಲಿ ಸಿ.ಎಂ ಬದಲಾವಣೆ ಮಾಡಲಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿ.ಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಒಳಗಿನ ಬೆಳವಣಿಗೆಯ ಬಗ್ಗೆ ಮಾತನಾಡಿದ್ದಾರೆ
ಈ ಸಂಬಂಧ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೋ, ಅವರೇ ಸಿಎಂ ರೇಸ್ನಲ್ಲಿ ಮುಂದಿದ್ದಾರೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರತ್ತಾರೋ, ಇಲ್ಲ ಐದು ವರ್ಷ ಇರತ್ತಾರೋ ಅದನ್ನು ಕಾಂಗ್ರೆಸ್ ಹೈಕಮಾಂಡ್ಗೆ ಕೇಳಬೇಕು ಎಂದಿದ್ದಾರೆ. ಇದರ ಅರ್ಥವೇನು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈಗಾಗಲೇ ಕಾಂಗ್ರೆಸ್ನ ಶಾಸಕರು ರಹಸ್ಯ ಸಭೆಗಳನ್ನು ಮಾಡುತ್ತಿದ್ದಾರೆ. ಡಿಕೆಶಿ ದೇವರ ಪೂಜೆ ಮಾಡಿ ಬಳಿಕ ಸಿದ್ದರಾಮಯ್ಯ ಐದು ವರ್ಷ ಪೂರೈಸತ್ತಾರೆ ಎಂದಿದ್ದಾರೆ. ಆದರೆ, ನಿಜವಾಗಿಯೂ ಸಿಎಂ ರೇಸ್ನಲ್ಲಿ ಇರೋದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಎಂದು ಬಿ.ವೈ ವಿಜಯೇಂದ್ರ ಅವರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಅನೀತಿಯ ವಿರುದ್ಧ ಹೋರಾಟ ಮಾಡಿದ್ದೇವೆ. ವಾಲ್ಮೀಕಿ, ಮುಡಾ ಹಗರಣ ಸಂಬಂಧಿಸಿದಂತೆ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಅವರ ಬಂಡತನ ತುಂಬಾ ದಿನ ನಡೆಯೋದಿಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದರು.
ಇನ್ನು ಜಾತಿಗಣತಿಯ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಪ್ರಯಾಣಿಕತೆ ಇದ್ದಿದ್ದರೆ ಜಾತಿಗಣತಿಯನ್ನು 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಅನುಷ್ಠಾನ ಮಾಡಬೇಕಿತ್ತು. ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೇ ಈಗಾಗಲೇ ಜಾತಿಗಣತಿಯನ್ನು ಕಾಂಗ್ರೆಸ್ನ ಮುಖಂಡರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಪ್ರಮುಖ ನಾಯಕರೇ ಇದೊಂದು ಅವೈಜ್ಞಾನಿಕ ವರದಿ ಎಂದು ಹೇಳಿದ್ದಾರೆ. ಹೀಗಾಗಿ, ಸದನದಲ್ಲಿ ಜಾತಿಗಣತಿ ಅನುಷ್ಠಾನ ಮಾಡುವುದು ಸಿದ್ದರಾಮಯ್ಯ ಅವರ ಭ್ರಮೆ ಎಂದು ಹೇಳಿದರು.
ವಿಜಯೇಂದ್ರ ಹೈಕಮಾಂಡ್ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಹೈಕಮಾಂಡ್ಗೆ ಮಂಕುಬೂದಿ ಎರಚುವಷ್ಟು ದೊಡ್ಡವನು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದರೆ ಸಂತೋಷ. ಆದರೆ, ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ. ಇನ್ನು ಆರ್ಸಿಬಿ ಸಂಘಟನೆ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಅದು 20-20 ಮ್ಯಾಚ್. ಆದರೆ, ನಾನು ಟೆಸ್ಟ್ ಆಡೋಕ್ಕೆ ಬಂದಿದ್ದೇನೆ. ಈಶ್ವರಪ್ಪ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ಆಗುವುದಂತೂ ನಿಶ್ಚಿತ ಎಂದಿದ್ದಾರೆ.












Click it and Unblock the Notifications