ಯಾರಾಗಲಿದ್ದಾರೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ?
ಬೆಂಗಳೂರು, ಜುಲೈ 13: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್. ಪ್ರತಿಪಕ್ಷಗಳಾದ ಜೆಡಿಎಸ್-ಬಿಜೆಪಿ ಒಟ್ಟಾಗಿ ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟವನ್ನು ಮಾಡುತ್ತಿವೆ.
ಲೋಕಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಮೊದಲ ಬಾರಿಗೆ ವಿಧಾನಮಂಡಲ ಕಲಾಪ ನಡೆಯುತ್ತಿದೆ. ಆದರೆ ಸದನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಯಾರು? ಎಂಬುದು ಎಲ್ಲರ ಪ್ರಶ್ನೆಯಾಗಿದೆ. ಜೆಡಿಎಸ್ ಪಕ್ಷ ಸದನದಲ್ಲಿ 18 ಶಾಸಕರ ಬಲ ಹೊಂದಿದೆ.

ಮಾಜಿ ಮುಖ್ಯಮಂತ್ರಿ, ಚನ್ನಪಟ್ಟಣದ ಶಾಸಕ ಎಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಅವರು ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಸದನದಲ್ಲಿ ಜೆಡಿಎಸ್ ಸದಸ್ಯರ ಸಂಖ್ಯೆ 19 ರಿಂದ 18ಕ್ಕೆ ಇಳಿಕೆಯಾಗಿದೆ.
ಹಲವು ನಾಯಕರ ಹೆಸರು ಮುಂಚೂಣಿಯಲ್ಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಗೆ ಹಲವಾರು ಹೆಸರುಗಳು ಕೇಳಿ ಬರುತ್ತಿವೆ. ಮಾಜಿ ಸಚಿವ, ಹೊಳೆನರಸೀಪುರದ ಶಾಸಕ ಎಚ್. ಡಿ. ರೇವಣ್ಣ ಹೆಸರು ಮುಂಚೂಣಿಯಲ್ಲಿದೆ. ಆದರೆ ರೇವಣ್ಣ ಶಾಸಕಾಂಗ ಪಕ್ಷದ ನಾಯಕರಾಗುವುದು ಕಷ್ಟ ಎಂಬ ಮಾತು ಕೇಳಿ ಬರುತ್ತಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನವಾಗಿ ಎಚ್. ಡಿ. ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಅವರ ಇಬ್ಬರು ಮಕ್ಕಳು ಅತ್ಯಾಚಾರ, ಲೈಂಗಿಕ ದೌಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಆದ್ದರಿಂದ ರೇವಣ್ಣ ಸದಸನಕ್ಕೆ ಆಗಮಿಸಲಿದ್ದಾರೆಯೇ? ಎಂಬುದು ಮೊದಲ ಪ್ರಶ್ನೆಯಾಗಿದೆ.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಬಹುದು ಎಂಬ ಮಾತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ ಪ್ರಭಾವಿ ನಾಯಕ ಜಿ. ಟಿ. ದೇವೇಗೌಡ.
ಎಚ್. ಡಿ. ದೇವೇಗೌಡ, ಎಚ್. ಡಿ. ಕುಮಾರಸ್ವಾಮಿ ಆಪ್ತರಾಗಿರುವ ಜಿ. ಟಿ. ದೇವೇಗೌಡರು ಶಾಸಕಾಂಗ ಪಕ್ಷದ ನಾಯಕರಾದರೆ ಸದನದಲ್ಲಿ ಪಕ್ಷದ ಶಾಸಕರು ಹೋರಾಟ ನಡೆಸಲು ಸಹ ಸಮರ್ಥ ನಾಯಕತ್ವ ಸಿಗಲಿದೆ ಎಂಬ ಮಾತಿದೆ. ಆದರೆ ಈ ಕುರಿತು ಎಚ್. ಡಿ. ಕುಮಾರಸ್ವಾಮಿ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ.
ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ. ಕೆ. ವೆಂಕಟಶಿವ ರೆಡ್ಡಿ, ಅರಕಲಗೂಡು ಶಾಸಕರಾದ ಎ. ಮಂಜು, ಶ್ರವಣಬೆಳಗೊಳದ ಶಾಸಕ ಸಿ. ಎನ್. ಬಾಲಕೃಷ್ಣ ಹೆಸರು ಸಹ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಗೆ ಕೇಳಿ ಬರುತ್ತಿದೆ. ಅಂತಿಮವಾಗಿ ಯಾರು ಶಾಸಕಾಂಗ ಪಕ್ಷದ ನಾಯಕ ಎಂದು ಶನಿವಾರ ಸಂಜೆ ಇಲ್ಲವೇ ಭಾನುವಾರ ಘೋಷಣೆ ಮಾಡುವ ನಿರೀಕ್ಷೆ ಇದೆ.
2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ 8,51,881 ಮತಗಳನ್ನು ಪಡೆದು ಜಯಗಳಿಸಿರುವ ಎಚ್. ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟ 3.0 ಸೇರಿದ್ದಾರೆ. ಅವರು ಈಗ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು.
ಶನಿವಾರ ಮತ್ತು ಭಾನುವಾರ ಎಚ್. ಡಿ. ಕುಮಾರಸ್ವಾಮಿ ಕರ್ನಾಟಕದಲ್ಲಿಯೇ ಇರಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಳ್ಗೊಳ್ಳಲಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಅವರು ಶಾಸಕಾಂಗ ಪಕ್ಷದ ನಾಯಕ ಹೆಸರನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ.
ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ವಿಧಾನಸಭೆ ಕಲಾಪ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ ಅವರು ಇಲ್ಲದೇ ಕಲಾಪ ನಡೆಯುತ್ತಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದು ಈಗಾಗಲೇ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.












Click it and Unblock the Notifications