ಮೂಡಿಗೆರೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮೂಡದ ಒಮ್ಮತ!
ಚಿಕ್ಕಮಗಳೂರು, ಅಕ್ಟೋಬರ್ 27; ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಟಿಕೆಟ್ ಹಂಚಿಕೆ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ಭಾರೀ ಪೈಪೋಟಿ ಇದೆ. ಕಾಂಗ್ರೆಸ್ ಹಿರಿಯ ನಾಯಕಿ ಪುತ್ರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕ್ಷೇತ್ರವೊಂದು ಸುದ್ದಿಯಲ್ಲಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಬಿಸಿ-ಬಿಸಿ ಚರ್ಚೆ ಆರಂಭವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಟಿಕೆಟ್ ಹಂಚಿಕೆಗೆ ಒಮ್ಮತ ಮೂಡುತ್ತಿಲ್ಲ. ಎರಡೂ ಪಕ್ಷದಲ್ಲಿನ ಟಿಕೆಟ್ ಪೈಪೋಟಿ ಬಿಜೆಪಿಗೆ ಸಹಾಯಕವಾಗುವ ನಿರೀಕ್ಷೆ ಇದೆ.
2018ರ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಮೋಟಮ್ಮಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿತ್ತು. ಅಂತಿಮವಾಗಿ ಮೋಟಮ್ಮ ಟಿಕೆಟ್ ಪಡೆದಿದ್ದರು. ಆದರೆ ಚುನಾವಣೆಯಲ್ಲಿ 46,271 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಎಂ. ಪಿ. ಕುಮಾರಸ್ವಾಮಿ. ಕಳೆದ ಚುನಾವಣೆಯಲ್ಲಿ 58,783 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿಯಿಂದ ಅವರೇ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ತವರು ಜಿಲ್ಲೆ. ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳಿಸಲು ಅವರು ತಂತ್ರ ರೂಪಿಸುತ್ತಿದ್ದಾರೆ.

ಟಿಕೆಟ್ ಪಡೆಯಲು ಮೋಟಮ್ಮ ಪುತ್ರಿ ಪ್ರಯತ್ನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಟಿಕೆಟ್ ಪಡೆಯಲು ಕಾಂಗ್ರೆಸ್ನ ಹಿರಿಯ ನಾಯಕಿ ಮೋಟಮ್ಮ ಪುತ್ರ ನಯನಾ ಮೋಟಮ್ಮ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಅವರನ್ನು ಅಭ್ಯರ್ಥಿಯಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಸ್ಥಳೀಯ ನಾಯಕರು ಹೇಳುತ್ತಿದ್ದಾರೆ. ಇದರಿಂದಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ನಯನಾ ಮೋಟಮ್ಮ ಸೋಲುವ ಅಭ್ಯರ್ಥಿ. ಅವರನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಬೇರೆ ಯಾರನ್ನಾದರೂ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಸ್ಥಳೀಯ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತು ಪಕ್ಷದ ರಾಜ್ಯ, ರಾಷ್ಟ್ರ ನಾಯಕರ ಗಮನ ಸಳೆಯಲು ಸಹ ಮುಂದಾಗಿದ್ದಾರೆ.

ಮೋಟಮ್ಮಗೂ ಟಿಕೆಟ್ ನೀಡಲು ವಿರೋಧ
ನಯನಾ ಮೋಟಮ್ಮಗೆ ಟಿಕೆಟ್ ನೀಡಲು ಸ್ಥಳೀಯರು ವಿರೋಧಿಸುತ್ತಿದ್ದಾರೆ. ಮುಗ್ಗಲಮಕ್ಕಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ ಈ ಕುರಿತು ನಿರ್ಣಯ ಕೈಗೊಂಡಿದ್ದಾರೆ. ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ ಈ ಕುರಿತು ಒಮ್ಮತದ ನಿರ್ಣಯ ತೆಗೆದುಕೊಳ್ಳಲು ಮುಂದಾಗಿದ್ದಾರೆ.
2018ರ ಚುನಾವಣೆಯಲ್ಲಿಯೂ ಮೋಟಮ್ಮಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿತ್ತು. ಈ ಬಾರಿ ನಯನಾ ಮೋಟಮ್ಮ ಟಿಕೆಟ್ ನೀಡಲು ಸ್ಥಳೀಯರು ವಿರೋಧಿಸುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ನಯನಾ ಮೋಟಮ್ಮ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಸೋಲುವ ಅಭ್ಯರ್ಥಿ ಜೊತೆ ರಾಜಿ ಇಲ್ಲ
ಮೂಡಿಗೆರೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿಯೇ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನವಿತ್ತು. ಮೋಟಮ್ಮಗೆ ಟಿಕೆಟ್ ನೀಡುವುದು ಬೇಡ ಎಂದು ಸ್ಥಳೀಯ ನಾಯಕರು ಪಟ್ಟು ಹಿಡಿದಿದ್ದರು. ನಾಗರತ್ನ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮೋಟಮ್ಮ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. 46,271 ಮತ ಪಡೆದು ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಈ ಬಾರಿ ಸ್ಥಳೀಯ ನಾಯಕರು ನಯನಾ ಮೋಟಮ್ಮ ಸೋಲುವ ಅಭ್ಯರ್ಥಿ ಅವರನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ. ಸೋಲುವ ಅಭ್ಯರ್ಥಿಗೆ ಟಿಕೆಟ್ ಬೇಡ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗುವ ನಿರೀಕ್ಷೆ ಇದೆ.

ಜೆಡಿಎಸ್ ಪಕ್ಷದಲ್ಲೂ ಒಮ್ಮತವಿಲ್ಲ
ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಮಾತ್ರವಲ್ಲ ಜೆಡಿಎಸ್ ಟಿಕೆಟ್ ಹಂಚಿಕೆ ಬಗ್ಗೆಯೂ ಒಮ್ಮತವಿಲ್ಲ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಿ. ಬಿ. ನಿಂಗಯ್ಯ 22,063 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿ ಅವರಿಗೆ ಟಿಕೆಟ್ ಬೇಡ ಎಂಬ ಒತ್ತಾಯ ಕೇಳಿಬರುತ್ತಿದೆ.
ಕಳೆದ ಬಾರಿ ನಿಂಗಯ್ಯ ವಿರುದ್ಧ ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಮುನಿಸಿಕೊಂಡಿದ್ದರು. ಈ ಬಾರಿ ಜೆಡಿಎಸ್ ಟಿಕೆಟ್ ಯಾರಿಗೆ ಸಿಗಲಿದೆ? ಎಂದು ಕಾದು ನೋಡಬೇಕಿದೆ.












Click it and Unblock the Notifications