ಸಿಂದಗಿಯಲ್ಲಿ ಬಿಜೆಪಿ ಗೆದ್ದರೂ ಅಭಿನಂದನೆ ತಿಳಿಸದ ಅಮಿತ್ ಶಾ- ನಡ್ಡಾ ಜೋಡಿ; ಕಾರಣ?
ಬೆಂಗಳೂರು, ನವೆಂಬರ್ 3: ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಕುರ್ಚಿಯಿಂದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿಗೆ ನೂತನ ಸಿಎಂ ಪಟ್ಟ ಕಟ್ಟಲಾಗಿತ್ತು. ಈಗ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನೂ ಪೂರೈಸಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಈ ವೇಳೆ 2023ರ ವಿಧಾನಸಭೆ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಘೋಷಿಸಿದ್ದರು.
ಇದಾದ ನಂತರ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಅಗ್ನಿಪರೀಕ್ಷೆ ಎದುರಾಗಿತ್ತು. ಉಪ ಚುನಾವಣೆಯ ನೇತೃತ್ವ ವಹಿಸಿದ್ದ ಬಸವರಾಜ ಬೊಮ್ಮಾಯಿಗೆ ತವರು ಜಿಲ್ಲೆಯ ಮತದಾರರೇ ಕೈಕೊಟ್ಟಿದ್ದು, ಅಕ್ಷರಶಃ ಹಿನ್ನಡೆಯಾಗಿದೆ ಎಂಬುದನ್ನು ಕಾರ್ಯಕರ್ತರಿಂದ ಹಿಡಿದು ನಾಯಕರವರೆಗೂ ಒಪ್ಪಿಕೊಳ್ಳುತ್ತಾರೆ.
ಹಾನಗಲ್ನಲ್ಲಿ ಹೀನಾಯ ಸೋಲು
ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ಸಂಘಟಿತ ಹೋರಾಟದ ಪರಿಶ್ರಮದಿಂದ ಬಿಜೆಪಿ ಅಭ್ಯರ್ಥಿ ಜಯ ಗಳಿಸಿದ್ದಾರೆ. ಆದರೆ, ಹಾನಗಲ್ನಲ್ಲಿ ಬಿಜೆಪಿ ಅಭ್ಯರ್ಥಿ ಹೀನಾಯ ಸೋಲು ಅನುಭವಿಸಿದ್ದಾರೆ.
ಕರ್ನಾಟಕದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಹೆಚ್ಚಿನ ಅಂತರದಲ್ಲಿ ಗೆದ್ದಿದ್ದರೂ, ಹಾನಗಲ್ನಲ್ಲಿ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಬ್ಬರೂ ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸಿಲ್ಲ. ಇದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಮತ್ತಷ್ಟು ನಿರಾಶೆಯ ಮಡುವಿಗೆ ದೂಡಿದಂತಾಗಿದೆ.
ಅಸಮಾಧಾನಗೊಂಡಿರುವ ಅಮಿತ್ ಶಾ- ಜೆ.ಪಿ. ನಡ್ಡಾ ಜೋಡಿ
ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯ ಕ್ಷೇತ್ರದಲ್ಲಿ ಗೆಲ್ಲದಿರುವುದರಿಂದ ಅಸಮಾಧಾನಗೊಂಡಿರುವ ಅಮಿತ್ ಶಾ- ಜೆ.ಪಿ. ನಡ್ಡಾ ಜೋಡಿ ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸಿಲ್ಲ. ಆದರೆ ಗಮನಿಸಬೇಕಾದ ಅಂಶವೆಂದರೆ ತೆಲಂಗಾಣದಲ್ಲಿ ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಕೆಯಾಗಿದೆ. ಬಿಹಾರ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗಳಿಗೂ ಅಭಿನಂದನೆ ಸಲ್ಲಿಕೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮತ್ತು ಮೈತ್ರಿ ಪಕ್ಷಗಳಿಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ
ಟ್ವೀಟ್ ಮೂಲಕ ಜಯ ದಾಖಲಿಸಿದ ಅವರಿಗೆಲ್ಲ ಅಭಿನಂದನೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕರ್ನಾಟಕ ಬಿಜೆಪಿ ಘಟಕಕ್ಕೆ ಮಾತ್ರ ಅಭಿನಂದನೆ ಸಲ್ಲಿಸಿಲ್ಲ. ಇದರಿಂದ ಬಿಜೆಪಿ ಹೈಕಮಾಂಡ್ ಅಸಮಾಧಾನಗೊಂಡಿರುವ ಬಗ್ಗೆ ಸುಳಿವು ನೀಡಿದಂತಾಗಿದೆ. ನಿರೀಕ್ಷಿಸಿದಷ್ಟು ಫಲಿತಾಂಶ ಬಾರದ ಹಿನ್ನೆಲೆ ಅಭಿನಂದನೆ ಸಲ್ಲಿಸಿಲ್ಲ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.
Recommended Video
ಮುಖ್ಯಮಂತ್ರಿಯಾಗಿ ನೂರು ದಿನ ಪೂರೈಸಿದ ಬೊಮ್ಮಾಯಿ
ರಾಜ್ಯದ ಮುಖ್ಯಮಂತ್ರಿಯಾಗಿ ನೂರು ದಿನ ಪೂರೈಸಿದ ಹಿನ್ನೆಲೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ, 100 ದಿನ ಅನ್ನೋದು ವಿಶೇಷ ಅಲ್ಲ. 100 ದಿನಗಳಲ್ಲಿ ಏನು ಮಾಡಿದ್ದೇವೆ ಅನ್ನೋದು ಮುಖ್ಯ. ನೂರು ದಿನ ಒಂದು ವರ್ಷದ ಹಾಗೆ ಪ್ರಮುಖ ಘಟ್ಟ ಅಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲವಾಗಿ ಮಾಹಿತಿ ನೀಡಲಾಗುವುದು. ನಮ್ಮ ಕೆಲಸವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಮತ ಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.