ಶಾಸಕ ನೆಹರೂ ಓಲೇಕಾರ್ ಇನ್ನೂ ಅನರ್ಹಗೊಂಡಿಲ್ಲವೇಕೆ?; ಹೈಕೋರ್ಟ್
ಬೆಂಗಳೂರು, ಏಪ್ರಿಲ್ 02; ನಕಲಿ ಬಿಲ್ ಸೃಷ್ಟಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೇಕಾರ್ ಇನ್ನೂ ಅನರ್ಹಗೊಂಡಿಲ್ಲವೇಕೆ?. ಬೇರೆ ಪ್ರಕರಣಗಳಲ್ಲಿ ಬಹು ಬಗೇ ಅನರ್ಹ ಆದೇಶಗಳು ಹೊರಬಿದ್ದಿವೆಯಲ್ಲಾ? ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿದೆ. ಓಲೇಕಾರ್ ಅವರನ್ನು ದೋಷಿಯಾಗಿರುವ ತಿರ್ಮಾನಿಸಿರುವ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡದೆ ಹೋದರೆ, ಅವರು ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾನೂನಾತ್ಮಕ ತೊಡಕು ಉಂಟಾಗಲಿದೆ. ಹಾಗಾಗಿ ಓಲೇಕಾರ್ ಅನರ್ಹತೆ ಭೀತಿಯನ್ನು ಎದುರಿಸುತ್ತಿದ್ದಾರೆ.
ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಶಾಸಕ ನೆಹರೂ ಓಲೇಕಾರ್ ಸಲ್ಲಿಸಿದ ಮಧ್ಯಂತರ ಅರ್ಜಿ ಸಂಬಂಧ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಸಿತು.

ಯಾವುದೇ ಪಾತ್ರವಿಲ್ಲ: ವಿಚಾರಣೆ ವೇಳೆ ಓಲೇಕಾರ್ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಒಳಸಂಚು ರೂಪಿಸಿಲ್ಲ. ಅಧೀನ ನ್ಯಾಯಾಲಯದ ಆದೇಶ ದೋಷಪೂರಿತ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ ಎಂಬ ಅಭಿಪ್ರಾಯಕ್ಕೆ ಹೈಕೋರ್ಟ್ ಬಂದಿದೆ. ಇದೇ ಕಾರಣಕ್ಕೆ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ ವಿಧಿಸಿದ ಆದೇಶಕ್ಕೆ ತಡೆ ಸಹ ನೀಡಿದೆ ಎಂದರು. ಜತೆಗೆ ಶಿಕ್ಷೆ ವಿಧಿಸಿದ ಆದೇಶವು ದೋಷಪೂರಿತವಾಗಿದೆ ಎಂದಾದರೆ ಅದರ ಪರಿಣಾಮಗಳನ್ನು ಆರೋಪಿ ಎದುರಿಸಬಾರದೆಂದು ಸುಪ್ರಿಂಕೋರ್ಟ್ ತೀರ್ಪು ನೀಡಿದೆ.
ಅದರಂತೆ ಪ್ರಕರಣದಲ್ಲಿ ಅರ್ಜಿದಾರ ಯಾವುದೇ ಪಾತ್ರ ಇಲ್ಲದ ಕಾರಣ ಅವರನ್ನು ದೋಷಿಯಾಗಿ ತೀರ್ಮಾನಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆಯೇ? ಎಂದು ಪ್ರಶ್ನಿಸಿತು. ಓಲೇಕಾರ ಪರ ವಕೀಲರು ಇಲ್ಲ ಎಂದು ಉತ್ತರಿಸಿದಾಗ, ಏಕೆ ಇನ್ನೂ ಅನರ್ಹಗೊಳಿಸಿಲ್ಲ? ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ? ಎಂದು ನ್ಯಾಯಪೀಠ ಮತ್ತೆ ಪ್ರಶ್ನಿಸಿತು.

ಓಲೇಕಾರ್ ಪರ ವಕೀಲರು, ಶಾಸಕರನ್ನು ಅನರ್ಹಗೊಳಿಸುವ ವಿಚಾರ ಸ್ಪೀಕರ್ ಅವರ ಅಧಿಕಾರ ವ್ಯಾಪ್ತಿಗೆ ಒಳಪಡುತ್ತದೆ. ಅವರು ವಿವೇಚನೆ ಬಳಸಿ ತಿರ್ಮಾನ ಕೈಗೊಳ್ಳತ್ತಾರೆ. ಆದರೆ, ದೋಷಿಯಾಗಿ ತೀರ್ಮಾನಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವ ವಿಚಾರಕ್ಕೂ, ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ವಿಚಾರಕ್ಕೆ ಸಂಬಂಧ ಇಲ್ಲವಾಗಿದೆ ಎಂದು ಉತ್ತರಿಸಿದರು.
ಲೋಕಾಯುಕ್ತ ಪರ ವಕೀಲರು, ಕ್ರಿಮಿನಲ್ ಪ್ರಕರಣದಲ್ಲಿ ಚುನಾಯಿತ ಜನ ಪ್ರತಿನಿಧಿಗಳು ಎರಡು ವರ್ಷ ಕಾಲ ಶಿಕ್ಷೆ ಗುರಿಯಾದರೆ ಅವರ ಸ್ಥಾನದ ತನ್ನಿಂದ ತಾನೇ ಅನರ್ಹತೆಯಾಗುತ್ತದೆ ಎಂದು ಸುಪ್ರಿಂ ಕೋರ್ಟ್ ತೀರ್ಪು ಸ್ಪಷ್ಟಪಡಿಸುತ್ತದೆ. ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಪಿತೂರಿ ನಡೆಸಿರುವ ಸಾಕ್ಷ್ಯಾಧಾರಗಳ ಸಮೇತ ವಿಶೇಷ ನ್ಯಾಯಾಲಯದಲ್ಲಿ ದೃಢಪಟ್ಟಿದೆ. ಆದ ಕಾರಣ ಅವರ ಮನವಿ ಪುರಸ್ಕರಿಸದೆ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದರು.
ಪ್ರಕರಣದ ಹಿನ್ನೆಲೆ ಏನು?; ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023ರ ಫೆ.13ರಂದು ಹೊರಡಿಸಿತ್ತು. ಈ ತೀರ್ಪು ಪ್ರಶ್ನಿಸಿ ಓಲೇಕರ್ಗೆ ಹೈಕೊರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಮಾ.3ರಂದು ಓಲೇಕಾರ್ಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದ ಭಾಗಕ್ಕೆ ತಡೆ ನೀಡಲು ಕೋರಿದ್ದಾರೆ.
ಬಿಜೆಪಿ ಕಾರ್ಯಕರ್ತರಿಂದಲೇ ದೂರು; ಇನ್ನು ಶಾಸಕ ನೆಹರು ಓಲೇಕಾರ್ ಅನರ್ಹಗೊಳಿಸುವಂತೆ ಬಿಜೆಪಿ ಕಾರ್ಯಕರ್ತರೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಂತೋಷ್ ರೆಡ್ಡಿ ನೇತೃತ್ವದಲ್ಲಿ ದೂರು ಕೊಡಲಾಗಿದ್ದು, ನೆಹರೂ ಓಲೆಕಾರ್ ವಿರುದ್ದ ಶಿಕ್ಷೆ ಪ್ರಕಟವಾಗಿದೆ. ಭ್ರಷ್ಟಾಚಾರ ಕೇಸ್ನಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ. ನೆಹರು ಓಲೆಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications