BS Yediyurappa : ಯಡಿಯೂರಪ್ಪ ಮನೆ ಮೇಲೆ ಬಂಜಾರ ಸಮುದಾಯದವರು ದಾಳಿ ಮಾಡಿದ್ದೇಕೆ? ಕಾರಣ ತಿಳಿಯಿರಿ
ಶಿಕಾರಿಪುರ, ಮಾರ್ಚ್ 27: ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ( BJP ) ಬಿಎಸ್ ಯಡಿಯೂರಪ್ಪ ( BS Yediyurappa ) ಅವರ ಮನೆ ಮೇಲೆ ಸೋಮವಾರ ಬಂಜಾರ ಸಮುದಾಯದವರು ದಾಳಿ ನಡೆಸಿದ್ದಾರೆ. ಈ ದಾಳಿಯು ಶಿವಮೊಗ್ಗ ಜಿಲ್ಲೆಯ ಶಿಕಾರಪುರದಲ್ಲಿರುವ ಬಿಎಸ್ವೈ ( BSY) ನಿವಾಸದ ಮೇಲೆ ನಡೆದಿದೆ. ದಾಳಿ ವೇಳೆ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
#BREAKING Members of #Banjara community attacked senior #BJP leader BS Yediyurappa's house in #Shivamogga demanding to withdraw #Karnataka govt's decision for internal reservation. #KarnatakaElection2023 pic.twitter.com/bAka5goBie
— Imran Khan (@KeypadGuerilla) March 27, 2023
ಬಂಜಾರ ಸಮುದಾಯದವರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಆಕ್ರೋಶಗೊಂಡ ಪ್ರತಿಭಟನಾಕಾರರು ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್ಗಳನ್ನು ಸುಟ್ಟು ಹಾಕಿದ್ದಾರೆ ಹಿಂಸಾಚಾರದ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಶಿಕಾರಿಪುರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಂಜಾರ ( ಲಂಬಾಣಿ ) ಸಮುದಾಯವು ಕೆರಳಿದ್ದೇಕೆ?
ಎಸ್ಸಿಗಳ ಒಳಮೀಸಲಾತಿ ಕುರಿತ ಎ ಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಸೋಮವಾರ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹೊಸದಾಗಿ ಹಂಚುವ ನಿಟ್ಟಿನಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಎಸ್ಸಿ ಸಮುದಾಯಕ್ಕೆ ಇರುವ ಶೇ.17 ರಷ್ಟು ಮೀಸಲಾತಿಯಲ್ಲಿ ಶೇ.6ರಷ್ಟು ಪರಿಶಿಷ್ಟ ಜಾತಿಗಳಿಗೆ ( ಎಡ ), ಶೇ.5.5ರಷ್ಟು ಪರಿಶಿಷ್ಟ ಜಾತಿಗಳಿಗೆ ( ಬಲ ), ಶೇ.4.5 ರಷ್ಟು ಮೀಸಲಾತಿಯನ್ನು ಸ್ಪೃಶ್ಯರಿಗೆ ನೀಡಬೇಕೆಂದು ರಾಜ್ಯ ಸರ್ಕಾರ ಶಿಪಾರಸು ಮಾಡಿದೆ.

ಪರಿಶಿಷ್ಟ ಜಾತಿಗಳಲ್ಲಿ ಬರುವ ಉಪಜಾತಿಗಳಿಗೆ ಅನುಪಾತದ ಪ್ರಾತಿನಿಧ್ಯವನ್ನು ಶಿಫಾರಸು ಮಾಡಿರುವ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ ಎಂದು ಬಂಜಾರ ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ಈ ಕುರಿತ ನಿರ್ಧಾರವನ್ನು ಕೈಬಿಡಬೇಕೆಂದು ಬಂಜಾರ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ.
ಇಷ್ಟು ವರ್ಷ ಶಾಂತಿಯುತವಾಗಿ ಬದುಕುತ್ತಿದ್ದ ಪರಿಶಿಷ್ಟ ಜಾತಿ ಸಮುದಾಯಗಳನ್ನು ಒಡೆಯಲು ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರವಾಗಿದೆ ಎಂದು ಬಂಜಾರ ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಈ ಕ್ರಮದಿಂದ ಬಂಜಾರರಿಗೆ ಅನ್ಯಾಯವಾಗಲಿದೆ. ಶಿಫಾರಸು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಶಿಕಾರಿಪುರ ವಿಧಾನಸಭೆ ವ್ಯಾಪ್ತಿಯಲ್ಲಿ ಎಸ್ಸಿ ಮತದಾರರು ಸರಿ ಸುಮಾರು 47, 355 ರಷ್ಟಿದ್ದಾರೆ. ಎಸ್ಟಿ ಮತದಾರರು ಸರಿಸುಮಾರು 11, 613 ರಷ್ಟಿದ್ದಾರೆ.

ಶಿಕಾರಿಪುರದಿಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರು 8 ಸಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗಬಹುದು ಎಂದು ಹೇಳಲಾಗುತ್ತಿದೆ. ಚುನಾವಣೆ ಸಮಯದಲ್ಲಿ ನಡೆಯುತ್ತಿರುವ ಈ ಘಟನಾವಳಿಗಳು ಬಿಜೆಪಿಗೆ ಮುಜುಗರವನ್ನು ಉಂಟು ಮಾಡುತ್ತಿವೆ ಎಂಬುದಂತೂ ಸುಳ್ಳಲ್ಲ.











Click it and Unblock the Notifications