ಶತ್ರು ಸಂಹಾರಕ್ಕೆ ಪ್ರಸಿದ್ಧಿ ಪಡೆದಿರುವ ತಮಿಳುನಾಡಿನ ದೇಗುಲದಲ್ಲಿ ಡಿ ಕೆ ಶಿವಕುಮಾರ್ ಪೂಜೆ: ಹೋಮ ಮಾಡಿಸಿದ್ದು ಯಾಕೆ?
ಬೆಂಗಳೂರು, ಜನವರಿ 10: ತಮಿಳುನಾಡಿನ ಕುಂಭಕೋಣಂನಲ್ಲಿರುವ ಪ್ರತ್ಯಂಗೀರಾ ದೇವಾಲಯ ಹಲವು ವಿಶಿಷ್ಟ ಶಕ್ತಿಗಳಿಗೆ ಹೆಸರುವಾಸಿಯಾಗಿದೆ.ತಮಿಳುನಾಡಿನ ಪ್ರತ್ಯಂಗೀರಾ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರತ್ಯಂಗೀರಾ ದೇವಾಲಯದಲ್ಲಿ ಸಾಮಾನ್ಯವಾಗಿ ಶತ್ರುಗಳ ಸಂಹಾರಕ್ಕಾಗಿ ಪೂಜೆ ಮಾಡಲಾಗುತ್ತದೆ. ಜೊತೆಗೆ ತಮ್ಮಲ್ಲಿನ ನಕಾರಾತ್ಮಕ ಶಕ್ತಿ ಹೋಗಲೆಂದು ಪೂಜೆ ಮಾಡಲಾಗುತ್ತದೆ.
ಈ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಪತ್ನಿ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪೂಜೆಯ ಉದ್ದೇಶದ ಬಗ್ಗೆ ಹಲವು ಕುತೂಹಲಗಳು ಹೆಚ್ಚಿವೆ. ಡಿ ಕೆ ಶಿವಕುಮಾರ್ ಯಾಕೆ ಆ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದರು ಎಂಬ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಹೇಳಿದರು.
ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾತನಾಡಿ, ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದು ಹೇಳಿದರು. ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಹೇಳಿದರು.
ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿರುವುದಾಗಿ ಡಿ ಕೆ ಶಿವಕುಮಾರ್ ಅವರು ಹೇಳಿದರು.












Click it and Unblock the Notifications