ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಪ್ರತಾಪ್ ಸಿಂಹ, ಯದುವೀರ್ಗೆ ಟಾಂಗ್ !
ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಅವರು ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿ.ಎಂ ಸ್ಥಾನದಿಂದ ಕೆಳಗೆ ಇಳಿಸಬೇಕು ಎನ್ನುವ ಪ್ರಯತ್ನಗಳ ನಡುವೆ ಪ್ರತಾಪ್ ಸಿಂಹ ಅವರು ಸಹ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಈ ಮೂಲಕ ತಮ್ಮದೇ ಬಿಜೆಪಿ ಪಕ್ಷದ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಮೈಸೂರು - ಕೊಡಗು ಜಿಲ್ಲೆಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ಸರಿಯಾದ ಕೆಲಸವನ್ನೇ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಅವರು ಮಾತನಾಡಿರುವುದು ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ. ಈ ನಿರ್ಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವುದು ಸರಿಯಾಗಿಯೇ ಇದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಮೂಲಕ ಈ ವಿಷಯದಲ್ಲಿ ಭಿನ್ನ ಅಭಿಪ್ರಾಯವನ್ನು ಹೊಂದಿರುವ ಮೈಸೂರು - ಕೊಡಗು ಸಂಸದ ಯದುವೀರ್ ಒಡೆಯರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಮೈಸೂರು ಬೆಟ್ಟದ ಮೇಲೆ ವಿಪರೀತ ಬೆಳವಣಿಗೆಯಾಗುತ್ತಿದ್ದು, ಅದನ್ನು ನಿಯಂತ್ರಿಸುವ ಅವಶ್ಯಕತೆ ಇದೆ. ಇಲ್ಲಿನ ಸಮಸ್ಯೆಗಳು ಪರಿಹರಿಸುವ ನಿಟ್ಟಿನಲ್ಲಿ ಒಂದು ಪ್ರಾಧಿಕಾರದ ಅವಶ್ಯಕತೆ ಖಂಡಿತವಾಗಿಯೂ ಇದೆ. ಅಲ್ಲದೇ ಬೆಟ್ಟ ಪ್ರದೇಶದಲ್ಲಿ ಒಂದು ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಯ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ನಾನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಮಾತ್ರ ಇವೆ. ಪ್ರಾಧಿಕಾರ ರಚನೆಯ ವಿಚಾರದ ನಿರ್ಧಾರ ಸಮರ್ಪಕವಾಗಿದೆ. ಅಂದರೆ ಈ ಎಲ್ಲದಕ್ಕೂ ಒಂದು ಪ್ರಾಧಿಕಾರದ ಅವಶ್ಯಕತೆ ಖಂಡಿತವಾಗಿಯೂ ಇದೆ ಎಂದು ಪ್ರತಾಪ್ ಸಿಂಹ ಪ್ರತಿಪಾದಿಸಿದ್ದಾರೆ.
ಆಸ್ತಿ ವಿಚಾರದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಭಕ್ತಾಧಿಕಾರಿಗಳಿಗೆ ಸೌಲಭ್ಯ ಕಲ್ಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಪ್ರಾಧಿಕಾರದ ನಿರ್ಧಾರ ಒಳ್ಳೆಯದು ಎಂದಿದ್ದಾರೆ. ಇನ್ನು ಅಮೃತ ಯೋಜನೆಯಡಿ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ಯಾಕೆ ಬರಲಿಲ್ಲ. ಅದಕ್ಕೆ ಕಾರಣ ಯಾರು ಎಂದು ನಾನೇನಾದರು ಮಾತನಾಡಿದರೆ, ವಿವಾದಕ್ಕೆ ಕಾರಣವಾಗುತ್ತದೆ. ಪೈಪ್ಲೈನ್ ಕೆಲಸ ಎಲ್ಲಿ ನಿಂತಿದೆ ಎಂದು ನೀವೇ ಹೋಗಿ ನೋಡಿ ಎಂದು ಮಾಧ್ಯಮದವರಿಗೆ ಹೇಳಿದರು. ಈ ಮೂಲಕ ಮೈಸೂರು ಹಾಗೂ ಕೊಡಗು ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಪ್ರಾಧಿಕಾರ ರಚನೆಯ ಬಗ್ಗೆ ವಿರೋಧಿಸಿದ್ದ ಯದುವೀರ್ ಒಡೆಯರ್
ಇನ್ನು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ರಾಜಮನೆತನದ ಯದುವೀರ್ ಒಡೆಯರ್ ಅವರು ಮೊದಲಿನಿಂದಲೂ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ. ಚಾಮುಂಡಿ ಬೆಟ್ಟವು ರಾಜಮನೆತನದ ಆಸ್ತಿಯಾಗಿದ್ದು, ಮೊದಲಿನಿಂದಲೂ ಇಲ್ಲಿನ ಸಂಪ್ರದಾಯವನ್ನು ನಾವು ಮುಂದುವರಿಸಿಕೊಂಡು ಬಂದಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಒಪ್ಪಲು ಸಾಧ್ಯವಿಲ್ಲ. ಇದನ್ನು ಪ್ರಶ್ನಿಸಲಾಗುವುದು ಎಂದು ಈಚೆಗಷ್ಟೇ ಸಂಸದ ಯದುವೀರ್ ಒಡೆಯರ್ ಅವರು ಹೇಳಿದ್ದರು. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರ ಪರ ಬ್ಯಾಟಿಂಗ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.












Click it and Unblock the Notifications