DK Shivakumar Nomination: ಕನಕಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದರ ಹಿಂದಿದೆ ಕಾನೂನಿನ ಕಾರಣ- ಏನದು ತಿಳಿಯಿರಿ
ಕನಕಪುರ, ಏಪ್ರಿಲ್ 20: ಗುರುವಾರ ನಡೆದ ಅಚ್ಚರಿಕರ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ನ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಅವರು ಕನಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಹೋದರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕ್ಷೇತ್ರವಾದ ರಾಮನಗರ ಜಿಲ್ಲೆಯ ಕನಕಪುರದಿಂದ ಡಿಕೆ ಶಿವಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಶಿವಕುಮಾರ್ ಅವರ ವಿರುದ್ಧ ಹಲವು ಪ್ರಕರಣಗಳು ಬಾಕಿ ಇರುವುದರಿಂದ ಅವರ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕ್ಷೇತ್ರವನ್ನು ಬಹಿರಂಗಪಡಿಸದೇ ತಮ್ಮ ಸಹೋದರ ಸುರೇಶ್ ಅವರು ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದರು.
ಕ್ಷೇತ್ರದ ಬಗ್ಗೆ ಬಹಿರಂಗ ಪಡಿಸದೇ ನಾಮ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದರು.
ಗುರುವಾರ ಮಧ್ಯಾಹ್ನ, ನಾಮಪತ್ರ ಸಲ್ಲಿಕೆಗೆ ಕೇವಲ ಒಂದು ಗಂಟೆ ಬಾಕಿ ಇರುವಾಗ, ಸುರೇಶ್ ಕನಕಪುರದ ತಹಸೀಲ್ದಾರ್ ಕಚೇರಿಯಲ್ಲಿ ತಮ್ಮ ಪತ್ರಗಳನ್ನು ಸಲ್ಲಿಸಿದರು.
ಕನಕಪುರದಿಂದ ಬಿಜೆಪಿ ಕಣಕ್ಕಿಳಿಸಲು ನಿರ್ಧರಿಸಿದ ನಂತರ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸುತ್ತಾರೆ ಎಂಬ ಊಹಾಪೋಹಗಳು ಇದ್ದವು. ಆದರೆ, ಈ ಎಲ್ಲ ಉಹಾಪೋಹಗಳನ್ನು ಡಿಕೆ ಬ್ರದರ್ಸ್ ತಲೆಕೆಳಗಾಗಿಸಿದ್ದಾರೆ.

ಸುರೇಶ್ಗೆ ನಾಮಪತ್ರ ಸಲ್ಲಿಸಲು ಹೇಳಿದ್ದು ಏಕೆ?
ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಕನಕಪುರದಿಂದ ಕಣಕ್ಕಿಳಿದಿರುವ ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಭೀತಿ ಕಾಂಗ್ರೆಸ್ ನಾಯಕರಲ್ಲಿದೆ.
ಎಐಸಿಸಿ ಅಧ್ಯಕ್ಷರು ಮತ್ತು ಹಿರಿಯ ನಾಯಕರ ನಿರ್ದೇಶನದ ಮೇರೆಗೆ ಕನಕಪುರದಿಂದ ಇಂದು ನಾಮಪತ್ರ ಸಲ್ಲಿಸಿದ್ದೇನೆ. ನಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಮಾಹಿತಿ ಕೇಳಿಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಏನಾದರೂ ಆಗಬಹುದು. ಬಿಜೆಪಿಯ ಕೆಲ ನಾಯಕರು ಡಿಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದು, ಅದಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ. ಅವರ ಯೋಜನೆ ಯಶಸ್ವಿಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ನನ್ನ ನಾಮಪತ್ರವನ್ನು ಸಲ್ಲಿಸಿದ್ದೇನೆ ಎಂದು ಸುರೇಶ್ ಹೇಳಿದರು.
ತನಗೆ ಮತ್ತು ತನ್ನ ಸಹೋದರನಿಗೆ ಆದಾಯ ತೆರಿಗೆ ಇಲಾಖೆಯಿಂದ ಹೊಸದಾಗಿ ಸಮನ್ಸ್ ಬಂದಿದೆ ಎಂದು ಅವರು ಹೇಳಿದರು.
ನಾಲ್ಕು ದಿನಗಳ ಹಿಂದೆ ಚೆನ್ನೈನಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ನೋಟಿಸ್ ಬಂದಿತ್ತು. ಅವರ ಮುಂದೆ ತನಿಖೆಗೆ ಹಾಜರಾಗಲು ನಮ್ಮನ್ನು ಕೇಳಿಕೊಂಡಿದ್ದರು. ಚುನಾವಣೆ ನಡೆಯುತ್ತಿರುವುದರಿಂದ ಒಂದು ತಿಂಗಳ ನಂತರ ಬರುವುದಾಗಿ ತಿಳಿಸಿದ್ದೇವೆ ಎಂದು ಸುರೇಶ್ ತಿಳಿಸಿದರು.
ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಆತಂಕವಿದೆಯೇ ಎಂಬ ಪ್ರಶ್ನೆಗೆ, ಇದು ಸಾಧ್ಯ ಎಂದು ಸುರೇಶ್ ಹೇಳಿದರು.
'ಎಲ್ಲವೂ ಸಾಧ್ಯ. ನಮಗೆ ಸಿಕ್ಕ ಮಾಹಿತಿ ಮೇರೆಗೆ ಕ್ರಮ ಕೈಗೊಂಡಿದ್ದೇವೆ. ನಾನು ನನ್ನ ಬಿ-ಫಾರ್ಮ್ ಅನ್ನು ಸಹ ಸಲ್ಲಿಸಿದ್ದೇನೆ. ಕನಕಪುರದಿಂದ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದನ್ನು ಕಾದು ನೋಡಿ' ಎಂದು ಸುರೇಶ್ ಮಾತು ಮುಗಿಸಿದರು.
ಕನಕಪುರದಿಂದ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿ ಶಿವಕುಮಾರ್ ಏಪ್ರಿಲ್ 17 ರಂದು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಶಿವಕುಮಾರ್ ವಿರುದ್ಧ ಕನಕಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣಗಳು
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಏಪ್ರಿಲ್ 25 ರವರೆಗೆ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐಗೆ ಕರ್ನಾಟಕ ಸರ್ಕಾರ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯಲ್ಲಿ ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಕರ್ನಾಟಕ ಹೈಕೋರ್ಟ್ ಏಪ್ರಿಲ್ 17 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರನ್ನು ವಿಚಾರಣೆಗೊಳಪಡಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆಯೂ ಇಡಿ ತನಿಖೆ ನಡೆಸುತ್ತಿದೆ.












Click it and Unblock the Notifications