ಗ್ರಾಮ ಪಂಚಾಯಿತಿ ಚುನಾವಣೆ; ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು, ಅಕ್ಟೋಬರ್ 23 : ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಕರ್ನಾಟಕ ಸರ್ಕಾರ ಕೇಳುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಂತ ಹಂತವಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲವೇ? ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ವಿಧಾನ ಪರಿಷತ್ ಸದಸ್ಯ ಕೆ. ಸಿ. ಕೊಂಡಯ್ಯ ಮುಂತಾದವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಇದೇ ವರ್ಷ ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರಕ್ಕೆ ಪತ್ರ ಬರೆದ ರಾಜ್ಯ ಚುನಾವಣಾ ಆಯೋಗ!
ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಅರ್ಜಿದಾರರ ವಾದಗಳನ್ನು ಆಲಿಸಿತು. ಆಕ್ಷೇಪಣೆಗಳು ಇದ್ದಲ್ಲಿ ಅಕ್ಟೋಬರ್ 29ರೊಳಗೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತು.
ಗ್ರಾಮ ಪಂಚಾಯಿತಿ ಚುನಾವಣೆ; ಆಯೋಗದ ಸ್ಪಷ್ಟನೆ
ಈ ಕುರಿತು ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯತ್ತಿದ್ದರೂ ಸಹ ಚುನಾವಣಾ ಆಯೋಗ ಚುನಾವಣೆ ನಡೆಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬಿಹಾರ ಮತ್ತು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳೇ ನಡೆಯುತ್ತಿವೆ, ಗ್ರಾಮ ಪಂಚಾಯಿತಿ ಚುನಾವಣೆ ಏಕೆ ಬೇಡ? ಎಂದು ಕೋರ್ಟ್ ಪ್ರಶ್ನಿಸಿದೆ.
ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ರಾಜ್ಯಕ್ಕೆ ಪ್ರಥಮ
ಹಂತ-ಹಂತವಾಗಿ ಚುನಾವಣೆ : ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಿದೆ. ಪ್ರಕರಣಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತ-ಹಂತವಾಗಿ ಚುನಾವಣೆ ನಡೆಸಬಹುದು. ಸರ್ಕಾರ ಶಾಲಾ-ಕಾಲೇಜಗಳ ಪರೀಕ್ಷೆಯನ್ನೇ ನಡೆಸಿದೆ. ಚುನಾವಣೆ ನಡೆಸಲು ಏಕೆ ಸಾಧ್ಯವಿಲ್ಲ? ಎಂದು ಕೋರ್ಟ್ ಕೇಳಿದೆ.
ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, "ಸರ್ಕಾರ ಚುನಾವಣೆ ವಿರೋಧಿಸುತ್ತಿಲ್ಲ. ಈ ಚುನಾವಣೆಯಲ್ಲಿ ಸರ್ಕಾರಕ್ಕೆ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಸಾಲು ಸಾಲು ಹಬ್ಬ, ಕೊರೊನಾ ಹಿನ್ನಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಕಾಲಾವಕಾಶ ಕೋರಲಾಗಿದೆ" ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಆಯೋಗದ ಪರವಾಗಿ ವಾದಿಸಿದ ವಕೀಲ ಕೆ. ಎನ್. ಫಣೀಂದ್ರ, "ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಚುನಾವಣೆಗೆ ವಿಶೇಷ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ" ಎಂದು ಮಾಹಿತಿ ನೀಡಿದರು.