ಹಾವೇರಿ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಏಕೆ ಅನರ್ಹರಾಗಿಲ್ಲ?
ಬೆಂಗಳೂರು, ಮಾರ್ಚ್ 24; ವಯನಾಡು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಶಾಸಕ ಸ್ಥಾನದಿಂದ ಅನರ್ಹಗೊಂಡಿಲ್ಲ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಕರಣದಲ್ಲಿ ಶಾಸಕರು ಹೈಕೋರ್ಟ್ ಆದೇಶದ ಕಾರಣ ಬಂಧನ ಭೀತಿಯಿಂದ ಪರಾಗಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಶಾಸಕ ನೆಹರೂ ಸಿ. ಓಲೇಕರ್ಗೆ 2023ರ ಫೆಬ್ರವರಿ 13ರಂದು ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರೂ. ದಂಡ ವಿಧಿಸಿತ್ತು. ಈ ತೀರ್ಪು ಅಮಾನತ್ತಿನಲ್ಲಿಟ್ಟು ಮತ್ತು ಜಾಮೀನು ಮಂಜೂರು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು.

ಆದರೆ ಶಾಸಕರು ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವ ಹಿನ್ನಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಏಕೆ ಅನರ್ಹಗೊಳಿಸಿಲ್ಲ? ಎಂಬುದು ಪ್ರಶ್ನೆಯಾಗಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಆಡಳಿತ ಪಕ್ಷ ಬಿಜೆಪಿ ಶಾಸಕರನ್ನು ಏಕೆ ಅನರ್ಹಗೊಳಿಸಿಲ್ಲ? ಎಂದು ಪ್ರಶ್ನೆ ಎತ್ತಲಾಗಿದೆ.
ಏನಿದು ಪ್ರಕರಣ?; ಹಾವೇರಿಯ ಬಿಜೆಪಿ ಶಾಸಕ ನೆಹರೂ ಸಿ. ಓಲೇಕರ್ 2008 ರಿಂದ 2013ರವರೆಗೆ ಶಾಸಕರಾಗಿದ್ದ ಅವಧಿಯಲ್ಲಿ ಹಾವೇರಿ ನಗರಸಭೆಯ ಕಾಮಗಾರಿಗಳನ್ನು ತಮ್ಮ ಪುತ್ರರಿಗೆ ಗುತ್ತಿಗೆ ಕೊಡಿಸಿದ್ದರು. ಆದರೆ 5 ಕಾಮಗಾರಿಗಳನ್ನು ನಡೆಸದಿದ್ದರೂ, ಕಾಮಗಾರಿಗಳು ನಡೆದಿವೆ ಎಂದು ನಕಲಿ ಬಿಲ್ ಸೃಷ್ಟಿಸಿದ್ದರು, ಒಟ್ಟು 5.35 ಕೋಟಿ ರೂ. ಪಡೆದು ವಂಚನೆ ಮಾಡಿದ್ದರು.

ಸಾಮಾಜಿಕ ಕಾರ್ಯಕರ್ತ ಶಶಿಧರ್ ಮಹದೇವಪ್ಪ ಹಳ್ಳಿಕೆರೆ ಹಾವೇರಿಯ ಲೋಕಾಯುಕ್ತ ಕೊರ್ಟ್ಗೆ ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಇಬ್ಬರು ಪುತ್ರರಿಗೆ ಗುತ್ತಿಗೆ ಕೊಡಿಸಿ ಸ್ವಜನ ಪಕ್ಷಪಾತ ಮಾಡಿದ್ದಾರೆ, ನಕಲಿ ಬಿಲ್ ಸೃಷ್ಟಿಸಿದ್ದಾರೆ, ಪ್ರಕರಣದ ಇತರ ಆರೋಪಿಗಳ ಜೊತೆಗೆ ಸೇರಿ ಅಪರಾಧಿಕ ಒಳಸಂಚು ರೂಪಿಸಿದ್ದಾರೆ. ಈ ಕುರಿತು ತನಿಖೆ ನಡೆಸಿವಂತೆ ದೂರಿನಲ್ಲಿ ಮನವಿ ಮಾಡಿದ್ದರು. ದೂರಿನ ಅನ್ವಯ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.
ಲೋಕಾಯುಕ್ತದಿಂದ ಈ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ನೆಹರು ಸಿ. ಓಲೇಕಾರ್, ಅವರ ಪುತ್ರರಾದ ಮಂಜುನಾಥ್ ಓಲೇಕಾರ್, ದೇವರಾಜ್ ಓಲೇಕಾರ್ ಮತ್ತು ನಿವೃತ್ತ ಅಧಿಕಾರಿಗಳಾದ ಎಚ್. ಕೆ. ರುದ್ರಪ್ಪ ಸೇರಿ ಒಟ್ಟು 9 ಮಂದಿ ಆರೋಪಿಗಳನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿಯಲ್ಲಿ ದೋಷಿ ಎಂದು 2023ರ ಫೆ.13ರಂದು ಆದೇಶ ನೀಡಿತ್ತು.
ಅಲ್ಲದೆ, ಎಲ್ಲಾ ಆರೋಪಿಗಳಿಗೂ ತಲಾ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರೂ. ದಂಡ ವಿಧಿಸಿತ್ತು. ಈ ಶಿಕ್ಷೆಯನ್ನು ರದ್ದುಗೊಳಿಸಿ, ಜಾಮೀನು ನೀಡುವಂತೆ ಶಾಸಕರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿತ್ತು. ಶಾಸಕರು ದೋಷಿ ಎಂಬ ತೀರ್ಪು ಬಂದಿರುವ ಹಿನ್ನಲೆಯಲ್ಲಿ ಶಾಸಕ ಸ್ಥಾನದಿಂದ ಏಕೆ ಅವರನ್ನು ಅನರ್ಹಗೊಳಿಸಿಲ್ಲ?.
ನಕಲಿ ಬಿಲ್ ಹಗರಣದಲ್ಲಿ ಹಾವೇರಿ ಶಾಸಕ ನೆಹರೂ ಸಿ. ಓಲೇಕರ್ ಬಂಧಿಸಿದ್ದರೆ ಚುನಾವಣಾ ಸಮಯದಲ್ಲಿ ಬಿಜೆಪಿಗೆ ಮತ್ತಷ್ಟು ಮುಜುಗರ ಉಂಟಾಗುತ್ತಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ ಕಾರಣ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಆದರೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಎರಡು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಹಿನ್ನಲೆಯಲ್ಲಿ ಶಾಸಕ ಸ್ಥಾನದಿಂದ ಏಕೆ ಅನರ್ಹಗೊಂಡಿಲ್ಲ.
ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನಲೆಯಲ್ಲಿ ಜಾಮೀನು ಮಂಜೂರು ಮಾಡಲು ಅವಕಾಶವಿದೆ. ಹಾವೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಶಾಸಕ ನೆಹರೂ ಸಿ. ಓಲೇಕರ್ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತರು. 2018ರ ಚುನಾವಣೆಯಲ್ಲಿ ಶಾಸಕರು 86,565 ಮತಗಳನ್ನು ಪಡೆದು ಜಯಗಳಿಸಿದ್ದಾರೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಅವರು ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದರು.












Click it and Unblock the Notifications