Get Updates
Get notified of breaking news, exclusive insights, and must-see stories!

ಜಾತಿ ಗಣಿತಿ ವರದಿ ಸ್ವೀಕಾರಕ್ಕೆ ಸರ್ಕಾರದ ಹಿಂದೇಟು ಏಕೆ? ಸಿದ್ದರಾಮಯ್ಯ

ಬೆಂಗಳೂರು, ಆ. 20: "ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ?" ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಜಾತಿ ಗಣಿತಿ ವರದಿಯನ್ನು ಸಿದ್ದರಾಮಯ್ಯ ಅವರೇ ಬರೆಯಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇದು ಅಪ್ಪಟ ಸುಳ್ಳು. ವರದಿ ಇನ್ನೂ ಸರ್ಕಾರದ ಕೈಗೆ ಬಂದಿಲ್ಲ. ಪುಟ್ಟರಂಗ ಶೆಟ್ಟಿ ಸಮ್ಮಿಶ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾಗಿದ್ದಾಗ ವರದಿ ಅಂಗೀಕಾರ ಮಾಡಿಸಿ ಎಂದು ಸೂಚಿಸಿದ್ದೆ. ಆಗ ಕುಮಾರಸ್ವಾಮಿ ವರದಿ ಮಂಡಿಸಲು ಪುಟ್ಟರಂಗ ಶೆಟ್ಟಿಗೆ ಅವಕಾಶ ಕೊಡಲಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷನಾಗಿದ್ದೆ. ಹೀಗಾಗಿ ಜಗಳ ಬೇಡ ಬಿಡಿ ಎಂದು ಹೇಳಿದ್ದೆ ಎಂದರು.

ಯಡಿಯೂರಪ್ಪ ಭೇಟಿ ಮಾಡಿ ಒತ್ತಾಯಿಸಿದ್ದಾರಯೇ?

ಯಡಿಯೂರಪ್ಪ ಭೇಟಿ ಮಾಡಿ ಒತ್ತಾಯಿಸಿದ್ದಾರಯೇ?

ಸಚಿವ ಈಶ್ವರಪ್ಪ ಅವರು ಹೊರಗಡೆ ಬಂದು ಸರ್ಕಾರ ವರದಿಯನ್ನು ಸ್ವೀಕಾರ ಮಾಡಬೇಕು ಎನ್ನುತ್ತಾರೆ. ಈ ವಿಚಾರದಲ್ಲಿ ಅವರು ಒಂದು ದಿನವಾದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರಯೇ ? ವರದಿಯಲ್ಲಿ ಒಂದು ಜಾತಿಯ ಪರ ಏನಾದರೂ ಶಿಫಾರಸು ಮಾಡಲಾಗಿದೆಯೇ ? ಎಲ್ಲ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಾಗಿದೆ. ಅದನ್ನು ಸ್ವೀಕರಿಸಲು ಸರ್ಕಾರ ಮೀನಮೇಷ ಎಣಿಸುತ್ತಿರುವುದೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸರ್ಕಾರಿ ಶಾಲಾ ಶಿಕ್ಷಕರ ನೆರವಿನಿಂದ ತಯಾರಿಸಿದ ವರದಿ ಅದು. ಖಾಸಗಿಯವರು ಮಾಡಿದ್ದಲ್ಲ. ಈ ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಸಮಾನವಾಗಿ ಹಂಚಿಕೆ ಆಗಬೇಕು. ಅದಕ್ಕೆ ಅಂಕಿ-ಅಂಶ ಅಗತ್ಯ. ಈ ಕಾರಣಕ್ಕಾಗಿಯೇ ವರದಿ ತಯಾರಿಸಲು ನಿರ್ಧರಿಸಲಾಗಿತ್ತು. ಒಲ್ಲದ ಗಂಡ ಮೊಸರಲ್ಲಿ ಕಲ್ಲು ಹುಡುಕಿದಂತೆ ವರದಿ ಬಗ್ಗೆ ಅಪಸ್ವರಗಳು ಬೇಡ.

ಬಿಜೆಪಿಯವರು ಮಹಾ ಮೋಸಗಾರರು-ಸುಳ್ಳುಗಾರರು

ಬಿಜೆಪಿಯವರು ಮಹಾ ಮೋಸಗಾರರು-ಸುಳ್ಳುಗಾರರು

ಬಿಜೆಪಿಯವರು ಮಹಾ ಮೋಸಗಾರರು ಮತ್ತು ಸುಳ್ಳುಗಾರರು. ಜನರಿಗೆ ಸಳ್ಳುಗಳನ್ನು ಹೇಳಿಯೇ ದಾರಿ ತಪ್ಪಿಸುವವರು ಅವರು. ಇತಿಹಾಸ ತಿರುಚುವಲ್ಲಿ ಹಾಗೂ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಬಿಜೆಪಿ ಕೇವಲ ಭ್ರಷ್ಟರ ಪಕ್ಷವಲ್ಲ. ಆ ಪಕ್ಷದ ನಾಯಕರು ಸಂವಿಧಾನ, ಸಾಮಾಜಿಕ ನ್ಯಾಯ, ಮೀಸಲು ಸೌಲಭ್ಯದ ವಿರೋಧಿಗಳು.

ಹಿಂದುಳಿದ ವರ್ಗದವರಿಗೆ ಮೀಸಲು ತಾವೇ ಕೊಟ್ಟಂತೆ ಮಾತನಾಡುತ್ತಿದ್ದಾರೆ ಬಿಜೆಪಿಯವರು. ಎಂಥಹ ನಾಟಕಕಾರರು ಅವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು, ಅಲ್ಪಸಂಖ್ಯಾತರು, ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳಿಗೆ ರಾಜೀವ್‍ಗಾಂಧಿಯವರು ಮೀಸಲು ಸೌಲಭ್ಯ ಒದಗಿಸಿದ ಬಳಿಕ ಅಂದಿನ ರಾಜ್ಯಸಭೆ ಸದಸ್ಯ, ದಿವಂಗತ ರಾಮಾಜೋಯಿಸ್ ಅವರು ಅದನ್ನು ವಿರೋಧಿಸಿ ನ್ಯಾಯಾಲಯಕ್ಕೆ ಹೋದರು ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಆತ್ಮಹತ್ಯೆಗೆ ಪ್ರಚೋದನೆ!

ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಆತ್ಮಹತ್ಯೆಗೆ ಪ್ರಚೋದನೆ!

ಬಿಜೆಪಿಯವರು ಎಂದಾದರೂ ಮಿಸಲು ಸೌಲಭ್ಯದ ಪರವಾಗಿ ಮಾತನಾಡಿದ್ದಾರೆಯೇ? ಮಂಡಲ್ ಆಯೋಗದ ಜಾರಿಗೆ ತರಲು ಹೊರಟಾಗ ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದವರು ಬಿಜೆಪಿ ನಾಯಕರು. ಮೀಸಲು ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ಹಾವನೂರು, ಮಂಡಲ್, ಚಿನ್ನಪ್ಪ ರೆಡ್ಡಿ ಆಯೋಗದ ವರದಿಗಳನ್ನು ತೀವ್ರವಾಗಿ ವಿರೋಧಿಸಿದವರು ಅವರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಮೋದಿಯವರಿಗೆ ನಾಚಿಕೆ ಆಗುವುದಿಲ್ಲವೇ ? ಇಡೀ ಸಮಾಜದ ಹಾಗೂ ಎಲ್ಲ ಧರ್ಮದವರು, ಜಾತಿ ಜನಾಂಗದವರನ್ನು ಒಳಗೊಂಡಿರುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ.

ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಅನಂತಕುಮಾರ್ ಹೆಗಡೆ ಅವರು ಹೇಳಿಕೆ ನೀಡಿದಾಗ ಮೋದಿ ಮತ್ತು ಅಮಿತ್ ಶಾ ಮೌನ ವಹಿಸಿದ್ದೇಕೆ. ಹೇಳಿಕೆಗೆ ಅವರು ಕುಮ್ಮಕ್ಕು ಇದ್ದುದೇ ಇದಕ್ಕೆ ಕಾರಣ. ಮೀಸಲಾತಿಗೆ ಬಿಜೆಪಿ ವಿರುದ್ಧವಾಗಿರುವುದೇ ಇಂತಹ ವರ್ತನೆಗೆ ಕಾರಣ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಬಿಜೆಪಿಯವರ ಬಗ್ಗೆ ಎಚ್ಚರದಿಂದ ಇರಬೇಕು

ಬಿಜೆಪಿಯವರ ಬಗ್ಗೆ ಎಚ್ಚರದಿಂದ ಇರಬೇಕು

ಬಿಜೆಪಿಯವರ ಬಗ್ಗೆ ಎಚ್ಚರದಿಂದ ಇರಬೇಕು. ಅವರು ಇತಿಹಾಸ ತಿರುಚಿ ಜನರು ಅದರಲ್ಲಿಯೂ ಯುವಕರನ್ನು ದಾರಿ ತಪ್ಪಿಸುತ್ತಾರೆ. ಕಾಂಗ್ರೆಸ್ ನಲ್ಲಿರುವ ಹಿಂದುಳಿದ ವರ್ಗಗಳವರಿಗೆ ಬದ್ಧತೆ ಇರಬೇಕು. ಬದ್ಧತೆ ಇದ್ದಾಗ ಮಾತ್ರ ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಲು ಸಾಧ್ಯ. ಇಲ್ಲದಿದ್ದರೆ ಅಧಿಕಾರ ಸಿಗುವ ಕಡೆ ಹೋಗುತ್ತಾರೆ. ಆ ರೀತಿ ಹೋದವರನ್ನು ಬಿಜೆಪಿಗೆ ಹೋಗಿರುವುದೇಕೆ ಎಂದು ಪ್ರಶ್ನಿಸಿದರೆ ಎಲ್ಲಿದ್ದರೂ ನಿಮ್ಮವನೇ ಅಣ್ಣ ಎನ್ನುತ್ತಾರೆ.

ದೇವರಾಜ ಅರಸು ಅವರು ಭೂ ಸುಧಾರಣೆ, ಜೀತ ವಿಮುಕ್ತಿ, ಋಣಮುಕ್ತ ಯೋಜನೆ ಸೇರಿದಂತೆ ಕಾಂಗ್ರೆಸ್‍ನ ಎಲ್ಲ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಜಾರಿಗೆ ತಂದು ಜನರಿಗೆ ತಲುಪಿಸಿದವರು. ಕನಸಿನಲ್ಲಿಯೂ ವಿಧಾನಸೌಧ ನೋಡದವರನ್ನು, ವಿಧಾನಸೌಧದ ಮೆಟ್ಟಿಲು ಹತ್ತುತ್ತೇವೆ ಎಂದು ನಿರೀಕ್ಷೆ ಮಾಡದವರನ್ನು ಕರೆ ತಂದು ಶಾಸಕ, ಮಂತ್ರಿಗಳನ್ನಾಗಿ ಮಾಡಿದರು. ಹಿಂದುಳಿದವರಿಗೆ ನಿಜವಾದ ಮೀಸಲು ಸೌಲಭ್ಯ ಕೊಟ್ಟವರು ದೇವರಾಜ ಅರಸು ರವರು. ಭಾರಿ ವಿರೋಧ ವ್ಯಕ್ತವಾದರೂ ಎದೆಗುಂದದೆ ನಿರ್ಣಯ ಮಾಡಿದರು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

Recommended Video

    ಜಾಮೀನಿನ ಮೇಲೆ ಶಾಸಕ ವಿನಯ್ ಕುಲಕರ್ಣಿ ರಿಲೀಸ್! | Oneindia Kannada
    ದಿ. ದೇವರಾಜ ಅರಸು ಧೀಮಂತ ನಾಯಕ

    ದಿ. ದೇವರಾಜ ಅರಸು ಧೀಮಂತ ನಾಯಕ

    ನಾನು ವರುಣಾ ನಾಲೆಗೆ ಆಗ್ರಹಿಸಿ ಚಳವಳಿ ಮಾಡುತ್ತಿದ್ದೆ. ಆಗ ಗುಂಡೂರಾಯರು ಮುಖ್ಯಮಂತ್ರಿಯಾಗಿದ್ದರು. ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸ್ಥಳಕ್ಕೆ ಅರಸು ಅವರು ಬಂದಿದ್ದರು. ಆಗ ಮೊದಲ ಬಾರಿಗೆ ನಾನು ಅವರನ್ನು ನೋಡಿದ್ದು. ರಾಜ್ಯ ರಾಜಕಾರಣದಲ್ಲಿ ಅರಸು ಅವರು ಧೀಮಂತ ನಾಯಕ. ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ. ರಾಜೀವ್ ಗಾಂಧಿ ಹಾಗೂ ಅರಸು ಅವರು ಮಾಡಿರುವ ಜನಪರ ಕಾರ್ಯಗಳನ್ನು ನೆನಪು ಮಾಡಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಿದ್ದರಾಮಯ್ಯ ಅವರು ಹೇಳಿದರು.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+