ಬಿಜೆಪಿ ಪಟ್ಟಿ ಹಿಂಪಡೆದಿದ್ದು ಏಕೆ?, ಕಾಂಗ್ರೆಸ್ ಟ್ವೀಟ್ ಬಾಣ!
ಬೆಂಗಳೂರು, ಏಪ್ರಿಲ್ 04; ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಗೆ ಕಾಂಗ್ರೆಸ್ 124, ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕದ ಆಡಳಿತ ಪಕ್ಷ ಬಿಜೆಪಿ ಈ ಬಾರಿಯ ಚುನಾವಣೆಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಷ್ಟರೊಳಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಜಿಲ್ಲಾವಾರು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದೆ.

ಮಂಗಳವಾರ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಆದರೆ ಇದು ನಕಲಿ ಪಟ್ಟಿ ಎಂದು ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ ಹೇಳಿದೆ. ಆದರೆ ಕಾಂಗ್ರೆಸ್ ಇದೇ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಟ್ವೀಟ್ನಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಗುಂಪುಗಾರಿಕೆಯ ಬಗ್ಗೆಯೂ ವಿಚಾರವನ್ನು ಪ್ರಸ್ತಾಪಿಸಿದೆ.
ಕಾಂಗ್ರೆಸ್ ಟ್ವೀಟ್ನಲ್ಲಿ, "ತಾನೇ ಗುಜರಾತ್ ಮಾದರಿ ಅನುಸರಿಸಿ ಕ್ಷೇತ್ರ ಬದಲಾವಣೆ ಮಾಡೋದು, ತಾನೇ ಲಿಸ್ಟ್ ರಿಲೀಸ್ ಮಾಡೋದು, ಆಮೇಲೆ ಆಕಾಂಕ್ಷಿಗಳ, ಬೆಂಬಲಿಗರ ಪ್ರತಿಭಟನೆ ತಾಳಲಾರದೇ, ತಾನೇ ಅದನ್ನು ಫೇಕ್ ಅಂತ ಕರೆಯೋದು!. ಅಭ್ಯರ್ಥಿಗಳ ಮೊದಲ ಪಟ್ಟಿ ಹಿಂಪಡೆಸಿ "ಸಂತೋಷ" ಪಡುತ್ತಿರೋದು ಯಾರು? ಪಟ್ಟಿ ಹಿಂಪಡೆದಿದ್ದು ಶಿಕಾರಿಪುರದಲ್ಲಿ ವಿಜಯೇಂದ್ರೆ ಹೆಸರು ಬಂದಿದ್ದಕ್ಕಾ?' ಎಂದು ಕರ್ನಾಟಕ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪಟ್ಟಿಯ ಕುರಿತು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. 'ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು 'FAKE' ಆಗಿರುತ್ತದೆ' ಎಂದು ಹೇಳಿದೆ ಮತ್ತು #LiesofCongress ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿದೆ.
ಮತ್ತೊಂದು ಟ್ವೀಟ್ನಲ್ಲಿ ಕಾಂಗ್ರೆಸ್ ಪಕ್ಷ, 'ಬಿಜೆಪಿ ಈಗ ಮುಳುಗುತ್ತಿರುವ ಹಡಗು, ಹಡಗು ಮುಳುಗುತ್ತಿರುವಾಗ ಬದುಕುಳಿಯುವ ಆಸೆಯಿಂದ ಎಲ್ಲರೂ ಹೊರ ಜಿಗಿಯುತ್ತಿದ್ದಾರೆ! ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಪ್ರಹ್ಲಾದ್ ಜೋಶಿ ಬಂಡಾಯದ ಮ್ಯಾನೇಜ್ಮೆಂಟಿಗೆ ಮುಂದಾಗಿದ್ದು ಏಕೆ?. ಕಟೀಲ್ ಅಸಮರ್ಥ ಎಂದೇ, ಅಥವಾ ಜೋಶಿಗೆ ಪಕ್ಷ ಹಿಡಿತಕ್ಕೆ ಪಡೆಯುವ ಆಸೆಯೇ! ಬಿಜೆಪಿಯಲ್ಲಿ ಎಲ್ಲವೂ ಆಯೋಮಯ!' ಎಂದು ವ್ಯಂಗ್ಯವಾಡಿದೆ.
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಜಿಲ್ಲಾ ನಾಯಕರ ಜೊತೆ ಚರ್ಚಿಸಿದ್ದರು. ಟಿಕೆಟ್ ಆಯ್ಕೆ ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ಎಲ್ಲರು ಒಪ್ಪಿಕೊಳ್ಳಬೇಕು ಎಂದು ಸೂಚಿಸಿದ್ದರು. ಈ ಸಭೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿ ಪಟ್ಟಿಯ ಸ್ಥಿತಿ-ಗತಿ ಏನು?; ಕಾಂಗ್ರೆಸ್ ಮತ್ತು ಜೆಡಿಎಸ್ನ ಮೊದಲ ಪಟ್ಟಿ ಬಿಡುಗಡೆಯಾದರೂ ಸಹ ಬಿಜೆಪಿಯ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ತಮ್ಮ ಟ್ವೀಟ್ನಲ್ಲಿ , 'ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ' ಎಂದು ದೂರಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಹತ್ವದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್ ಉಪಸ್ಥಿತರಿದ್ದಾರೆ ಎಂದು ಕಟೀಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿ, "ಕಳೆದೆರೆಡು ದಿನಗಳಿಂದ ಜಿಲ್ಲಾ ಸಮಿತಿಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಇಂದು ರಾಜ್ಯ ಕೋರ್ ಕಮಿಟಿ ಪರಿಶೀಲಿಸಿ, ಕೇಂದ್ರಕ್ಕೆ ಕಳುಹಿಸಿಕೊಡಲಿದೆ. ಬಹುತೇಕ ಎಪ್ರಿಲ್ 8 ಅಥವಾ 9 ರಂದು ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ" ಎಂದು ಹೇಳಿದ್ದಾರೆ.












Click it and Unblock the Notifications