7th Pay Commission; ವರದಿ ಸ್ವೀಕಾರಕ್ಕೆ ವಿಳಂಬ ಮಾಡಿದ ಸರ್ಕಾರ?
ಬೆಂಗಳೂರು, ಮೇ 08: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯಗೊಂಡಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರದ ಮೇಲೆ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವ ಒತ್ತಡ ಹೆಚ್ಚಾಗುತ್ತಿದೆ.
ರಾಜ್ಯ ಸರ್ಕಾರ ಲೋಕಸಭೆ ಚುನಾವಣೆ ನೀತಿ ಸಂಹಿತೆಯ ಕಾರಣ ಹೇಳಿ ಮಾರ್ಚ್ನಿಂದ ವರದಿಯನ್ನು ಹಾಗೇಯೇ ಇಟ್ಟಿದೆ. 2024ರ ಮಾರ್ಚ್ 16ರ ಶನಿವಾರ ಕರ್ನಾಟಕ ಸರ್ಕಾರಕ್ಕೆ 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾಗಿತ್ತು. ಅಂದು ಮಧ್ಯಾಹ್ನವೇ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬಂದಿತು.

ಈಗ ಮತದಾನ ಮಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿಯನ್ನು ಪಡೆದು ಆರ್ಥಿಕ ಇಲಾಖೆಗೆ ನೀಡಿದ್ದಾರೆ. ಈಗ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಕೈಗೊಳ್ಳಲಿರುವ ಕ್ರಮಗಳೇನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಹೇಳಿದ್ದೇನು? 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಿದ ಬಳಿಕ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ' ಎಂದು ಹೇಳಿದ್ದರು.
ವರದಿ ಜಾರಿಯಿಂದ ಸರ್ಕಾರದ ಮೇಲೆ ಸುಮಾರು 17 ಸಾವಿರ ಕೋಟಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಸರ್ಕಾರ ವರದಿಯನ್ನು ಪಡೆಯಲು ವಿಳಂಬ ಮಾಡಿತು. 2023ರ ನವೆಂಬರ್ನಲ್ಲಿಯೇ ವೇತನ ಆಯೋಗದ ಅವಧಿ ಅಂತ್ಯಗೊಂಡಿತ್ತು. ಆಗ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು.
ಬಳಿಕ ಸರ್ಕಾರ ವೇತನ ಆಯೋಗದ ಅವಧಿಯನ್ನು ಮಾರ್ಚ್ 15ರ ತನಕ ವಿಸ್ತರಣೆ ಮಾಡಿತ್ತು. ಆಯೋಗ ಅವಧಿ ಮುಕ್ತಾಯಗೊಳ್ಳುವುದಕ್ಕೂ 5 ದಿನ ಮೊದಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲು ಸಿದ್ಧವಾಗಿತ್ತು. ಆದರೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ, ನೀತಿ ಸಂಹಿತೆ ಜಾರಿಯ ಮಾಹಿತಿ ಇದ್ದ ಸರ್ಕಾರ ವರದಿ ಸ್ವೀಕಾರ ಮಾಡಲು ವಿಳಂಬ ಮಾಡಿತು ಎಂಬ ಮಾತು ಕೇಳಿ ಬರುತ್ತಿದೆ.
ವರದಿ ಸ್ವೀಕಾರ ಮಾಡಿದ ಬಳಿಕ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, 'ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ' ಎಂದು ಹೇಳಿದ್ದಾರೆ.
ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸವಾಲು ಎದುರಿಸುತ್ತಿರುವ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿಯಾದರೆ ಹೆಚ್ಚಳವಾಗವ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಗೆ ಹೆಚ್ಚುವರಿ ಹಣ ಒದಗಿಸಬೇಕಿದೆ. ಆದ್ದರಿಂದ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ದಿನವೇ ವರದಿ ಸ್ವೀಕಾರ ಮಾಡಲಾಗಿದೆ ಎಂಬ ಮಾತಿದೆ.
ಸರ್ಕಾರ ಈಗ ವರದಿಯನ್ನು ಸ್ವೀಕಾರ ಮಾಡಿದೆ. ಆದರೆ ಅನುಷ್ಠಾನದ ಬಗ್ಗೆ ಇನ್ನೂ ತೀರ್ಮಾನ ಪ್ರಕಟಿಸಿಲ್ಲ. 1/7/2022ರಿಂದಲೇ ವರದಿ ಜಾರಿಗೆ ಬರಬೇಕಿದೆ ಎಂದು ವರದಿ ಹೇಳಿದೆ. ಆದರೆ ವರದಿ ಯಾವಾಗಿನಿಂದ ಜಾರಿಯಾಗಬೇಕು? ಎಂದು ಸರ್ಕಾರ ತೀರ್ಮಾನಿಸಬಹುದು.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳಲಿದೆ. ಒಂದು ವೇಳೆ ಚುನಾವಣೆಯಲ್ಲಿ ಪಕ್ಷ ನಿರೀಕ್ಷೆ ಮಾಡದಷ್ಟು ಸ್ಥಾನ ಸಿಗದಿದ್ದರೆ ಯಾವ ದಿನಾಂಕದಿಂದ ವರದಿ ಜಾರಿಗೆ ಸರ್ಕಾರ ಒಪ್ಪಿಗೆ ನೀಡಲಿದೆ? ಎಂಬುದು ಸರ್ಕಾರಿ ನೌಕರರ ಚಿಂತೆಗೆ ಕಾರಣವಾಗಿದೆ.












Click it and Unblock the Notifications