Rain: "ಕರ್ನಾಟಕ್ಕೆ ಮಳೆ ಸಂಕಷ್ಟ: ಜೂನ್ನಲ್ಲಿ ಶೇ.42ರಷ್ಟು, ಜುಲೈನಲ್ಲಿ ಶೇ.34ರಷ್ಟು ಮಳೆ ಕೊರತೆ!"
Rain: ಕರ್ನಾಟಕದಲ್ಲಿ ಈ ಬಾರಿ ಭಾರೀ ಮಳೆ ಕೊರತೆ ಎದುರಾಗಿದ್ದು, ಈಚೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದೀಗ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕವು ತೀವ್ರ ಮಳೆಯ ಕೊರತೆ, ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಕೃಷಿ ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ವಿಶೇಷ ನೆರವು ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಮತ್ತು ಜುಲೈನಲ್ಲಿ ಶೇ.34ರಷ್ಟು ಮಳೆ ಕೊರತೆಯಾಗಿದ್ದು, ಇದರಿಂದ ವ್ಯಾಪಕ ಬೆಳೆ ನಷ್ಟ, ಅಂತರ್ಜಲ ಮಟ್ಟ ಕುಸಿತ, ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿರುವುದು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಇದು ಜೀವಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತುರ್ತು ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
1. ಸಣ್ಣ ಮತ್ತು ಅತಿ ಸಣ್ಣ ರೈತರ (SMF) ಸಂಖ್ಯೆಯನ್ನು ನಿರ್ಧರಿಸಲು ಹಳೆಯ 2015-16ರ ಕೃಷಿ ಜನಗಣತಿಯ ಬದಲಾಗಿ FRUITS ದತ್ತಾಂಶವನ್ನು ಪರಿಗಣಿಸಬೇಕು.
2. ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದ SDRF/NDRF ಮತ್ತು ಬರ ಕೈಪಿಡಿ - 2020ರ ಮಾನದಂಡಗಳನ್ನು ಏಕರೂಪಗೊಳಿಸಿ, ರೈತರಿಗೆ ತ್ವರಿತ ಹಾಗೂ ಸಮಾನ ಪರಿಹಾರ ದೊರೆಯುವಂತೆ ಮಾಡಬೇಕು.
3. ಬಿತ್ತನೆ ಅವಧಿಯಲ್ಲಿನ 20%-59% ಮಳೆ ಕೊರತೆಯನ್ನೂ ಬರ ಘೋಷಣೆಗೆ ಮಾನದಂಡವಾಗಿ ಪರಿಗಣಿಸಬೇಕು, ಕೇವಲ ಋತುಮಾನದ ಒಟ್ಟು ಮಳೆಯ ಆಧಾರದ ಮೇಲೆ ಮಾತ್ರ ನಿರ್ಧಾರ ಕೈಗೊಳ್ಳುವ ಪದ್ದತಿಯನ್ನು ಪರಿಷ್ಕರಿಸಬೇಕು.
4. ಒಣಹವೆಯ (Dry Spell) ವ್ಯಾಖ್ಯಾನವನ್ನು ಸ್ಥಳೀಯ ಕೃಷಿ ಹಾಗೂ ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ಪರಿಷ್ಕರಿಸಿ, ಅಗತ್ಯವಿದ್ದಲ್ಲಿ ಕಡಿಮೆ ಅವಧಿಯ ಒಣಹವೆಯನ್ನೂ ಪರಿಗಣಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕು.
5. ಬರವನ್ನು ಮುಂಚಿತವಾಗಿ ಘೋಷಿಸಲು ರಾಜ್ಯಗಳಿಗೆ ಅವಕಾಶ ಕಲ್ಪಿಸಿ, ಬಿತ್ತನೆ ಪೂರ್ಣಗೊಳ್ಳುವವರೆಗೆ ಕಾಯುವ ಷರತ್ತನ್ನು ಸಡಿಲಗೊಳಿಸಿ, ರೈತರಿಗೆ ಸಕಾಲದ ನೆರವು ಒದಗಿಸಬೇಕು.
ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಹೆಚ್ಚುವರಿ ನೆರವನ್ನು ನೀಡುವುದು ಮತ್ತು ಪ್ರಸ್ತುತ ಬರ ಪರಿಸ್ಥಿತಿಯನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುವುದು ಅಥವಾ ಅದಕ್ಕೆ ಸಮಾನವಾದ ವಿಶೇಷ ಆರ್ಥಿಕ ನೆರವನ್ನು ನೀಡುವಂತೆ ಮನವಿ ಮಾಡಿದ್ದೇನೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
Rain: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಡಿ.ಕೆ ಶಿವಕುಮಾರ್
ಇನ್ನು ಕರ್ನಾಟಕದಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಈಚೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ತುರ್ತು ಮಧ್ಯಪ್ರವೇಶಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ರಾಜ್ಯವು ಗಮನಾರ್ಹ ಮುಂಗಾರು ಕೊರತೆ, ಖಾರಿಫ್ ಬಿತ್ತನೆ ವಿಳಂಬ, ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಕೃಷಿ, ಕುಡಿಯುವ ನೀರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಹೆಚ್ಚಿನ ಒತ್ತಡವನ್ನು ಸೃಷ್ಟಿ ಮಾಡಿದೆ. ಕರ್ನಾಟಕ ಸರ್ಕಾರವು ಈಗಾಗಲೇ ತುರ್ತು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ನೀರಿನ ಸಂರಕ್ಷಣೆಗೆ ಆದ್ಯತೆ ನೀಡಿದೆ, ಆದರೆ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ನಮ್ಮ ರೈತರನ್ನು ಬೆಂಬಲಿಸಲು ಮತ್ತು ರಾಜ್ಯದ ಬರ ತಗ್ಗಿಸುವ ಪ್ರಯತ್ನಗಳನ್ನು ಬಲಪಡಿಸಲು ಸಕಾಲಿಕ ಸಹಾಯವನ್ನು ನೀಡಲು ಕೇಂದ್ರ ತಂಡವನ್ನು ನಿಯೋಜಿಸಲು ಡಿ.ಕೆ ಶಿವಕುಮಾರ್ ಅವರು ವಿನಂತಿಸಿದ್ದರು.












Click it and Unblock the Notifications