ಪೊಲೀಸರ ದಿರಿಸು ಬದಲಿಸಿದ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ!
ಬೆಂಗಳೂರು, ಅಕ್ಟೋಬರ್ 17; 'ಬಸವರಾಜ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪೊಲೀಸರ ದಿರಿಸು ಬದಲಾವಣೆ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 'ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ' ಎಂದು ಟೀಕಿಸಿದ್ದಾರೆ.
'ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ' ಎಂದು ಸಿದ್ದರಾಮಯ್ಯ ಹೇಳಿದ್ದು, ಪೊಲೀಸರು ದಿರಿಸು ಬದಲಿಸಿ ತೆಗೆಸಿಕೊಂಡ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
'ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ' ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಆಯುಧ ಪೂಜೆ ನಡೆಸಿ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು ಹಾಕಿಕೊಂಡಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಸಹ ಇದೇ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪ್ರಶ್ನೆಯನ್ನು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಟೀಕೆ
ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಆಯುಧ ಪೂಜೆ ನಡೆಸಿ ಒಟ್ಟಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು ಹಾಕಿಕೊಂಡಿದ್ದಾರೆ. ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದಾರೆ.
|
ಸಿದ್ದರಾಮಯ್ಯ ಟ್ವೀಟ್
'ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ರಾಜ್ಯದಲ್ಲಿ ಸರ್ಕಾರ ಇದೆಯೇ?
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, 'ಒಂದೆಡೆ ಅಮಾಯಕ ಯುವಕ- ಯುವತಿಯರ ಮೇಲೆ ಅನೈತಿಕ ಪೊಲೀಸ್ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
|
ಮನೆಯೊಳಗೆ ಇರುವುದು ಕ್ಷೇಮ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, 'ಗೂಂಡಾಗಿರಿಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ, ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ' ಎಂದು ಸರ್ಕಾರವನ್ನು ಟೀಕಿಸಿದ್ದಾರೆ.
|
ಪ್ರಜಾಪ್ರಭುತ್ವವನ್ನು ಉಳಿಸಿ
'ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಮುಖ್ಯಮಂತ್ರಿಗಳೇ. ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ' ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
Recommended Video

ವಿಜಯಪುರ ಎಸ್ಪಿ ಸ್ಪಷ್ಟನೆ
ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಆಯುಧಪೂಜೆ ನಿಮಿತ್ತ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಆ ಪ್ರಕಾರ ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನು ಸಹ ಪಾಲ್ಗೊಂಡಿದ್ದೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಂಮರು ಕರೆದರೂ ನಮಾಜ್ಗೆ ಹೋಗುವೆ. ನಾನು ಯಾವುದೇ ಆಚರಣೆ ವಿರೋಧಿಯಲ್ಲ" ಎಂದು ಸ್ಪಷ್ಟಪಡಿಸಿದರು.












Click it and Unblock the Notifications