ಮುಂದಿನ ಚುನಾವಣೆ ಬಗ್ಗೆ ಅಮಿತ್ ಶಾ ಹೇಳಿಕೆ; ಅರುಣ್ ಸಿಂಗ್ ಸ್ಪಷ್ಟನೆ
ಬೆಂಗಳೂರು, ಸೆಪ್ಟೆಂಬರ್ 08; "ಮುಂದಿನ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಎದುರಿಸುತ್ತೇವೆ. ಪೂರ್ಣ ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ" ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.
ಕಳೆದ ವಾರ ದಾವಣಗೆರೆಯಲ್ಲಿ ಅಮಿತ್ ಶಾ ನೀಡಿದ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟು ಮಾಡಿದೆ. ಕೆಲವು ಹಿರಿಯ ನಾಯಕರು ಈಗಾಗಲೇ ಈ ಹೇಳಿಕೆಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ. ಎಸ್. ಯಡಿಯೂರಪ್ಪರನ್ನು ನಿರ್ಲಕ್ಷಿಸುವ ಕೆಲಸ ಆಗುತ್ತಿದೆಯೇ? ಎಂದು ಹಲವುರು ಪ್ರಶ್ನಿಸಿದ್ದರು.
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಮಿತ್ ಶಾ ಹೇಳಿಕೆ ಕುರಿತು ಮಾತನಾಡಿದ್ದಾರೆ. "ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಬಿಜೆಪಿಯಲ್ಲಿ ಯಾರಿಗೂ ಅಸಮಾಧಾನವಿಲ್ಲ. ಬಸವರಾಜ ಬೊಮ್ಮಯಿ ಮುಖ್ಯಮಂತ್ರಿಯಾಗಿದ್ದಾರೆ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆಗೆ ಹೋಗಬೇಕಲ್ಲವೇ?" ಎಂದು ಪ್ರಶ್ನಿಸಿದ್ದಾರೆ.
ಅಮಿತ್ ಶಾ ಹೇಳಿಕೆ ಬಿಜೆಪಿಯ ಹಿರಿಯ ನಾಯಕರಲ್ಲಿ ಅಸಮಾಧಾನ ಉಂಟು ಮಾಡಿತ್ತು. ತಮಗಿಂತ ಕಿರಿಯ ನಾಯಕನ ಬಳಿ ಹೋಗಿ ಟಿಕೆಟ್ ಕೇಳುವುದು ಸೇರಿದಂತೆ ಇತರ ವಿಚಾರಕ್ಕೆ ಅಸಮಾಧಾನಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುವಾಗಿ ನೀಡಿರುವ ಹೇಳಿಕೆ ಬಗ್ಗೆ ಮಾತುಕತೆ ನಡೆಸಿದ್ದರು.

ಏಕೆ ಅಸಮಾಧಾನಗೊಳ್ಳಬೇಕು?
"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಯಾರು, ಏಕೆ ಅಸಮಾಧಾನಗೊಳ್ಳಬೇಕು?. ಅವರು ಮುಖ್ಯಮಂತ್ರಿಗಳು ಮತ್ತು ಅವರ ನಾಯಕತ್ವದಲ್ಲಿಯೇ 2023ರ ಚುನಾವಣೆಯನ್ನು ಎದುರಿಸಬೇಕಿದೆ. ಬಿಜೆಪಿಯಲ್ಲಿ ಯಾರೂ ಸಹ ಅಮಿತ್ ಶಾ ಹೇಳಿಕೆಯಿಂದ ಅಸಮಾಧಾನಗೊಂಡಿಲ್ಲ" ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದರು.

ಪಕ್ಷವನ್ನು ಬಲಪಡಿಸಲಿದ್ದಾರೆ
"ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷವನ್ನು ಸಂಘಟನೆ ಮಾಡಿ ಬಲಪಡಿಸಲಿದ್ದಾರೆ. ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪಕ್ಷ ಮುಂದಿನ ಚುನಾವಣೆಯನ್ನು ಎದುರಿಸಲಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ" ಎಂದು ಅರುಣ್ ಸಿಂಗ್ ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಪಾಲಿಕೆ ಚುನಾವಣೆಯಲ್ಲಿ ಗೆಲುವು
"ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ನಾಯಕತ್ವದಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಯಜದ ಯಾತ್ರೆ ನಡೆಸಲಾಗಿದೆ. 2023ರ ಚುನಾವಣೆಯಲ್ಲಿಯೂ ಭರ್ಜರಿ ವಿಜಯ ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಬಿಜೆಪಿ ಹಿಡಿಯಲಿದೆ" ಎಂದು ಅರುಣ ಸಿಂಗ್ ಹೇಳಿದ್ದಾರೆ.
ಇನ್ನು ದೆಹಲಿಗೆ ಮಂಗಳವಾರ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅರುಣ್ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಿದರು. "ಇದೊಂದು ಸೌಜನ್ಯದ ಭೇಟಿಯಾಗಿತ್ತು. ಮಹಾನಗರ ಪಾಲಿಕೆ ಚುನಾವಣೆಗೆಳ ಬಗ್ಗೆ ಚರ್ಚಿಸಲಾಯಿತು" ಎಂದು ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪ ಮಾರ್ಗದರ್ಶನ
ಅಮಿತ್ ಶಾ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. "ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಎದುರಿಸಲಿದ್ದು, ಇದಕ್ಕೆ ಬಿ. ಎಸ್. ಯಡಿಯೂರಪ್ಪ ಮಾರ್ಗದರ್ಶನ ನೀಡಲಿದ್ದಾರೆ" ಎಂದು ಹೇಳಿದರು.
ಸಚಿವ ಕೆ. ಎಸ್. ಈಶ್ವರಪ್ಪ ಸಹ ಮಾಧ್ಯಮಗಳ ಜೊತೆ ಮಾತನಾಡಿದ್ದು, "ನಮ್ಮ ರಾಷ್ಟ್ರೀಯ ನಾಯಕ ಅಮಿತ್ ಶಾ ಹೇಳಿಕೆಗೆ ನನ್ನ ಆಕ್ಷೇಪವಿಲ್ಲ. ಹಿಂದೆಲ್ಲ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿತ್ತು. ಆ ಕಾರಣದಿಂದಾಗಿ ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಹೋದರೆ ಗೆಲವು ಸಾಧ್ಯ ಎಂದು ಸಲಹೆ ನೀಡಿದ್ದೆ" ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.












Click it and Unblock the Notifications