ನಿಗದಿತ ಸಮಯಕ್ಕಿಂತ 3 ನಿಮಿಷ ಮೊದಲೇ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದು ಯಾಕೆ?
ಬೆಂಗಳೂರು, ಜು. 28: ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಸವರಾಜ ಸೋಮಪ್ಪ ಬೊಮ್ಮಾಯಿ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮೂಲತಃ ಸಮಾಜವಾದದ ಹಿನ್ನೆಲೆಯುಳ್ಳ ಕುಟುಂಬದಿಂದ ಬಂದಿರುವ ಬಸವರಾಜ ಬೊಮ್ಮಾಯಿ ಅವರು ಆಷಾಢ ಮಾಸದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಪ್ರದಾಯಗಳಿಗೆ ಸವಾಲು ಹಾಕಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ದಿ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರು ಸಮಾಜವಾದದ ಹಿನ್ನೆಲೆಯಲ್ಲಿ ರಾಜಕಾರಣ ಮಾಡಿದವರು. ಅದೇ ರೀತಿ ಬಸವರಾಜ ಬೊಮ್ಮಾಯಿ ಅವರು ಸಮಾಜವಾದದ ಹಿನ್ನೆಲೆಯ ಜನತಾ ದಳದಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. ಸಮಾಜ ವಾದದ ಹಿನ್ನೆಲೆಯಿಂದ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರು ನಿಮಿಷ ಮೊದಲೇ ಪ್ರಮಾಣ ವಚನ ಸ್ವೀಕರಿಸಿ ಕುತೂಹಲ ಮೂಡಿಸಿದ್ದಾರೆ. ಹಾಗೆ ಮಾಡಲು ಜ್ಯೋತಿಷಿಗಳ ಸೂಚನೆ ಏನಾದರೂ ಇತ್ತಾ?
ನಿಗದಿತ ಸಮಯಕ್ಕಿಂತ ಬೇಗ ಪ್ರಮಾಣ ವಚನ ಸ್ವೀಕಾರ
ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ನಿಗದಿತ ಸಮಯಕ್ಕಿಂತಲೂ ಮೂರು ನಿಮಿಷಗಳ ಮುನ್ನವೇ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೇದಿಕೆಗೆ ತೆರಳಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದರು. ಬಳಿಕ ರಾಜ್ಯದ ಇತರ ನಾಯಕರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದರು.
ಸರಿಯಾಗಿ 11ಕ್ಕೆ ಪ್ರಮಾಣ ವಚನ ಸ್ವೀಕರಿಸಬೇಕಿತ್ತು!
ಮೊದಲೇ ನಿಗದಿಯಾದಂತೆ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ರಾಜ್ಯಪಾಲರು ಸೇರಿದಂತೆ ಎಲ್ಲರೂ ಸ್ವಲ್ಪ ಬೇಗನೆ ಆಗಮಿಸಿದ್ದರು. ಹೀಗಾಗಿ 11 ಗಂಟೆಗೆ 3 ನಿಮಿಷ ಬಾಕಿ ಇರುವಾಗಲೇ ಕಾರ್ಯಕ್ರಮ ಆರಂಭಿಸಲಾಯಿತು. ಕಾರ್ಯಕ್ರಮ ಬೇಗನೆ ಶುರುಮಾಡಲು ಬೇರೆ ಯಾವುದೇ ಕಾರಣ ಇರಲಿಲ್ಲ ಎಂಬ ಮಾಹಿತಿಯಿದೆ.
ಜೊತೆಗೆ ಪ್ರಮಾಣ ವಚನ ಕಾರ್ಯಕ್ರಮ ಆರಂಭಿಸುವ ಮೊದಲು ಸಂಪ್ರದಾಯದಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರು ರಾಜ್ಯಪಾಲರ ಅನುಮತಿ ಕೋರಿದರು. ವೇದಿಕೆಯಲ್ಲಿದ್ದ ರಾಜ್ಯಪಾಲರು ಅನುಮತಿ ಕೋಟ್ಟರು. ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.
ಸಮಾಜವಾದದ ಹಿನ್ನೆಲೆಯ ಬೊಮ್ಮಾಯಿ ಕುಟುಂಬ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜವಾದದ ಹಿನ್ನೆಲೆಯಿಂದ ಬಂದಿದ್ದಾರೆ. ಅವರು ಜನತಾ ದಳದ ಅಭ್ಯರ್ಥಿಯಾಗಿ ಹುಬ್ಬಳ್ಳಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು. 1994ರಲ್ಲಿ ಆ ಚುನಾವಣೆಯಲ್ಲಿ ದಿ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಬಸವರಾಜ ಬೊಮ್ಮಾಯಿ ಪರವಾಗಿ ಪ್ರಚಾರ ಮಾಡಿದ್ದರು.
ಧಾರವಾಡದ ಕಲಾ ಭಣವದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಜನತಾ ದಳದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಸವರಾಜ ಬೊಮ್ಮಾಯಿ ಅವರನ್ನು ರಾಮಕೃಷ್ಣ ಹೆಗಡೆ ಪರಿಚಯಿಸಿದ್ದರು. ಆಗ ಎಸ್.ಆರ್. ಬೊಮ್ಮಾಯಿ ಅವರು ಜೊತೆಗಿದ್ದರು. ಸಮಾಜ ವಾದದ ಹಿನ್ನೆಲೆಯಿಂದ ಬಂದಿರುವ ಬಸವರಾಜ ಬೊಮ್ಮಾಯಿ ಅವರು ಮೂರು ನಿಮಿಷ ಮೊದಲು ಪ್ರಮಾಣ ವಚನ ಸ್ವೀಕರಿಸಿರುವುದರಲ್ಲಿ ಅರ್ಥಗಳಿಲ್ಲ ಎನ್ನಲಾಗಿದೆ.
Recommended Video
ಇತಿಹಾಸ ಸೃಷ್ಟಿಸಿದ ಬೊಮ್ಮಾಯಿ ಕುಟುಂಬ
ಹೆಚ್. ಡಿ. ದೇವೇಗೌಡ ಅವರ ಪುತ್ರ ಹೆಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಅದೇ ಇತಿಹಾಸ ಮರುಕಳಿಸಿದ್ದು ದಿ. ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಂದೆ ಮತ್ತು ಮಗ ಇಬ್ಬರೂ ಮುಖ್ಯಮಂತ್ರಿಯಾಗಿದ್ದ ಕುಟುಂಬಗಳ ಪಟ್ಟಿಗೆ ಬೊಮ್ಮಾಯಿ ಅವರ ಕುಟುಂಬವೂ ಇಂದು ಸೇರಿದೆ.
ಇಂದು ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವ ಧಮೇಂದ್ರ ಪ್ರಧಾನ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ವ್ಯವಹಾರಗಳ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ನಿರ್ಗಮಿತ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಡಾ ಸಿ. ಎನ್. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ, ಕೆ. ಎಸ್. ಈಶ್ವರಪ್ಪ, ಎಸ್. ಸುರೇಶ್ ಕುಮಾರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ. ಸಿ. ಪಾಟೀಲ್, ಜೆ. ಸಿ. ಮಾಧುಸ್ವಾಮಿ, ವಿ. ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಪ್ರಭು ಚೌಹಾಣ್, ಶಿವರಾಂ ಹೆಬ್ಬಾರ್, ಬಿ. ಸಿ. ಪಾಟೀಲ್, ಬೈರತಿ ಬಸವರಾಜು, ಎಸ್. ಟಿ. ಸೋಮಶೇಖರ್, ಎಂ. ಸಿ. ನಾರಾಯಣಗೌಡ, ಎಂ. ಟಿ. ಬಿ. ನಾಗರಾಜ್, ಕೆ. ಗೋಪಾಲಯ್ಯ, ಸಿ. ಪಿ. ಯೋಗೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ, ಜೆಡಿಎಸ್ ನಾಯಕ ಎ. ಟಿ. ರಾಮಸ್ವಾಮಿ, ಶಾಸಕರಾದ ರವಿ ಸುಬ್ರಮಣ್ಯ , ಅರವಿಂದ ಬೆಲ್ಲದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.