ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 24 : ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ.
ಬುಧವಾರ ಸಂಜೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, 'ಯಾವಾಗ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಶೀಘ್ರದಲ್ಲಿಯೇ ತಿಳಿಸುತ್ತೇನೆ' ಎಂದರು.
ರಮೇಶ್ ಜಾರಕಿಹೊಳಿ ರಾಜೀನಾಮೆ : ಯಾರು, ಏನು ಹೇಳಿದರು?
'ಒಬ್ಬನೇ ರಾಜೀನಾಮೆ ನೀಡಿದರೆ ಏನೂ ಪ್ರಯೋಜನವಿಲ್ಲ. ಒಂದಿಷ್ಟು ಜನ ಸೇರಿ ರಾಜೀನಾಮೆ ನೀಡುತ್ತೇವೆ. ರಾಜೀನಾಮೆ ನೀಡುವುದಂತೂ ಸತ್ಯ. ಪಕ್ಷದಲ್ಲಿ ಇನ್ನೂ ಕೆಲವರ ಜೊತೆ ಚರ್ಚೆ ನಡೆಸಬೇಕಿದೆ. ಅವರೊಂದಿಗೆ ಮಾತನಾಡಿದ ನಂತರ ತಿಳಿಸುತ್ತೇನೆ' ಎಂದು ಹೇಳಿದರು.
ಸ್ವಲ್ಪ ದಿನದಲ್ಲೇ ಒಳ್ಳೆಯ ಸುದ್ದಿ ಕೊಡ್ತೀನಿ ಎಂದ ರಮೇಶ್ ಜಾರಕಿಹೊಳಿ
ನಮ್ಮ ಲೀಡರ್ ರಾಹುಲ್ ಗಾಂಧಿ : ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ರಮೇಶ್ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. 'ಡಿ.ಕೆ.ಶಿವಕುಮಾರ್ ನನ್ನ ಲೆವೆಲ್ ಅಲ್ಲ. ಎಲ್ಲಾ ಅವನೇ ಹೇಳಿಕೊಳ್ಳುತ್ತಾನೆ. ನನ್ನ ಲೀಡರ್ ಏನಿದ್ದರೂ ರಾಹುಲ್ ಗಾಂಧಿ. ಅವರ ಜೊತೆ ಚರ್ಚಿಸಿ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ' ಎಂದು ತಿಳಿಸಿದರು.
ಸಹೋದರರ ಆರೋಪ-ಪ್ರತ್ಯಾರೋಪ: ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ?
ಸಚಿವ ಸ್ಥಾನ ಕೈ ತಪ್ಪಿದ ಬಳಿಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ.
ಮಂಗಳವಾರ ಬೆಳಗಾವಿಯಲ್ಲಿದ್ದ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಯಾವ-ಯಾವ ನಾಯಕರು ಭೇಟಿಯಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.