ಅಥಣಿಗೆ ಮತ್ತೊಂದು ಸಚಿವ ಸ್ಥಾನ; ಮಹೇಶ್ ಕುಮಟಳ್ಳಿ ಸಂಪುಟಕ್ಕೆ?
ಬೆಂಗಳೂರು, ಫೆಬ್ರವರಿ 01 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡಿದ್ದಾರೆ. ಯಾರು ಸಂಪುಟ ಸೇರಲಿದ್ದಾರೆ? ಎಂಬ ಲೆಕ್ಕಾಚಾರ ಜೋರಾಗಿದೆ.
ಅಂದುಕೊಂಡಂತೆ ಎಲ್ಲವೂ ನಡೆದರೆ ಸೋಮವಾರ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೆದ್ದ ಎಷ್ಟು ಶಾಸಕರು, ಮೂಲ ಬಿಜೆಪಿಯ ಎಷ್ಟು ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ? ಎಂಬುದು ಸದ್ಯದ ಪ್ರಶ್ನೆ.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ಮತ್ತೊಂದು ಸಚಿವ ಸ್ಥಾನ ಸಿಗಲಿದೆಯೇ? ಕಾದು ನೋಡಬೇಕು. ಈಗಾಗಲೇ ಕ್ಷೇತ್ರದ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾಗಿದ್ದಾರೆ. ಮಹೇಶ್ ಕುಮಟಳ್ಳಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಕಣಕ್ಕಿಳಿದು ಗೆದ್ದು ಬಂದಿದ್ದಾರೆ.
ಮಹೇಶ್ ಕುಮಟಳ್ಳಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಆಪ್ತರು. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡವನ್ನು ಹೇರುವ ಸಾಧ್ಯತೆ ಇದೆ. ಯಡಿಯೂರಪ್ಪ ಉಪ ಚುನಾವಣೆ ಪ್ರಚಾರದಲ್ಲಿ ಮಹೇಶ್ ಕುಮಟಳ್ಳಿ ಅವರನ್ನು ಸಚಿವರನ್ನಾಗಿ ಮಾಡುವೆ ಎಂದು ಭರವಸೆ ಸಹ ಕೊಟ್ಟಿದ್ದರು.

ಲಕ್ಷ್ಷಣ ಸವದಿ ಸಚಿವರು
2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಸೋಲು ಕಂಡರೂ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದರು. ಈಗ ಅವರನ್ನು ವಿಧಾನ ಪರಿಷತ್ ಉಪ ಚುನಾವಣೆ ಅಭ್ಯರ್ಥಿಯಾಗಿಯೂ ಘೋಷಣೆ ಮಾಡಲಾಗಿದೆ. ಈಗ ಕ್ಷೇತ್ರಕ್ಕೆ ಮತ್ತೊಂದು ಸಚಿವ ಸ್ಥಾನ ಸಿಗಲಿದೆಯೇ? ಎಂಬುದು ಸದ್ಯದ ಪ್ರಶ್ನೆ.

ಮಹೇಶ್ ಕುಮಟಳ್ಳಿ ಹೇಳಿದ್ದೇನು?
ಮಹೇಶ್ ಕುಮಟಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಬಹಿರಂಗ ಸಭೆಯಲ್ಲಿ ಸುಮಾರು 35 ಸಾವಿರ ಜನರ ಮುಂದೆ ನನ್ನನ್ನು ಮತ್ತು ಶ್ರೀಮಂತ ಪಾಟೀಲ್ರನ್ನು ಮಂತ್ರಿ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಯಡಿಯೂರಪ್ಪ ಪ್ರಾಣ ಬಿಟ್ಟರು ಮಾತಿಗೆ ತಪ್ಪುವವರಲ್ಲ" ಎಂದು ಹೇಳಿದ್ದಾರೆ.

ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಯಡಿಯೂರಪ್ಪ ಮಾತನಾಡಿದಾಗ ಮಹೇಶ್ ಕುಮಟಳ್ಳಿ ಬಗ್ಗೆ ಪ್ರಶ್ನೆ ಮಾಡಿದಾಗ, "ಆ ಬಗ್ಗೆ ಆಮೇಲೆ ಮಾತನಾಡುತ್ತೇನೆ" ಎಂದು ಹೇಳಿದರು.

ಹಬ್ಬಿರುವ ಸುದ್ದಿ ಏನು?
ಸದ್ಯ ಹಬ್ಬಿರುವ ಸುದ್ದಿಗಳ ಪ್ರಕಾರ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಪೈಕಿ 10 ಶಾಸಕರು ಮಾತ್ರ ಸಂಪುಟ ಸೇರಲಿದ್ದಾರೆ. ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎಂಬ ಸುದ್ದಿಗಳು ಹರಿದಾಡುತ್ತಿವೆ.












Click it and Unblock the Notifications