ಪ್ರಜ್ವಲ್ ರೇವಣ್ಣ ಗೆಲುವಿನ ಕನಸಿಗೆ ಪ್ರೀತಂ ಗೌಡರೇ ಸ್ಪೀಡ್ ಬ್ರೇಕರ್! ಹಾಸನದಲ್ಲಿ ಎನ್ಡಿಎ ಕಥೆ ಏನು?
ಹಾಸನ, ಏಪ್ರಿಲ್ 22: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ ಗೌಡ ಹಾಗೂ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡುವಿನ ಹಳಸಿದ ಸಂಬಂಧ ಹಾಸನದಲ್ಲಿ ಸುಧಾರಿಸುವ ಲಕ್ಷಣ ಕಾಣುತ್ತಿಲ್ಲ.
ಹೌದು, ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಪ್ರಜ್ವಲ್ ಗೆಲುವಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಜೆಡಿಎಸ್ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದ್ದರೂ. ಯಾವುದು ಫಲಕೊಡುತ್ತಿಲ್ಲ ಕಾಣುತ್ತಿಲ್ಲ. ಹೀಗಾಗಿ ಹಾಸನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವಿನ ಬಂಡಾಯದ ಕಿಚ್ಚು ಕಾಂಗ್ರೆಸ್ ಅನುಕೂಲವಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಇತ್ತೀಚೆಗಷ್ಟೇ ಹಾಸನದಲ್ಲಿ ಎನ್ಡಿಎ ಪರ ಪ್ರಚಾರ ನಡೆಸಿದ್ದ ಪ್ರೀತಂಗೌಡ ಅವರು, ಪ್ರಜ್ವಲ್ ಹೆಸರು ಹೇಳದೆಯೇ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಎತ್ತಿ ಹಿಡಿದು ಪ್ರಚಾರ ನಡೆಸಿದ್ದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಇಬ್ಬರೂ ಯುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಅವರ ಬೆಂಬಲವಿಲ್ಲದೇ ಇದ್ದರೂ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ಮುಖಂಡರು ಹೇಳಿರುವ ಹಿನ್ನೆಲೆಯಲ್ಲಿ ಪ್ರೀತಂ, ಪ್ರಜ್ವಲ್ ಜೊತೆ ಕೈ ಜೋಡಿಸದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಮಾಜಿ ಸಚಿವ, ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ಪ್ರೀತಂ ಅವರ ಆಪ್ತರನ್ನು ಭೇಟಿ ಮಾಡಿ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಇದು ಪ್ರೀತಂ ಅವರನ್ನು ಇನ್ನಷ್ಟು ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಸಿ.ಟಿ.ರವಿ ಅವರೊಂದಿಗೆ ಇತ್ತೀಚೆಗೆ ಪ್ರೀತಂ ಅವರ ಆಪ್ತರಾಗಿರುವ ಶರತ್ ಅವರನ್ನು ಭೇಟಿ ಮಾಡಿ ಅವರ ಬೆಂಬಲವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೇಟಿ ವೇಳೆ ಎನ್ಡಿಎ ಅಭ್ಯರ್ಥಿ ಪರ ಪ್ರಚಾರ ಮಾಡದಿರಲು ನಾನು ಮತ್ತು ಪ್ರೀತಂ ಅವರ ಎಲ್ಲಾ ಬೆಂಬಲಿಗರು ನಿರ್ಧರಿಸಿದ್ದೇವೆಂದು ಶರತ್ ಹೇಳಿದ್ದಾರೆಂದು ವರದಿಗಳು ತಿಳಿಸಿವೆ. ಆದರೆ, ಪ್ರೀತಂ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿರುವುದು ಅಚ್ಚರಿಯನ್ನು ತಂದಿದೆ.
ಇತ್ತೀಚೆಗೆ ಹಾಸನದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಯನ್ನುದ್ದೇಶಿಸಿ ಮಾತನಾಡಿದಾಗ ಪ್ರೀತಂ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ಅರಕಲಗೂಡಿನಲ್ಲಿ ನಡೆದ ಜೆಡಿಎಸ್-ಬಿಜೆಪಿ ಜಂಟಿ ಪ್ರಚಾರದಲ್ಲಿ ಬಿಜೆಪಿ ಬೆಂಬಲಿಗರು ಫ್ಲೆಕ್ಸ್ ಬೋರ್ಡ್ನಲ್ಲಿ ಪ್ರೀತಂ ಅವರ ಚಿತ್ರವನ್ನು ಹಾಕದಿರುವುದೂ ಕೂಡ ಕಂಡು ಬಂದಿತ್ತು. ಈ ಎಲ್ಲಾ ಬೆಳವಣಿಗೆ ನಡುವಲ್ಲೇ ಎಲ್ಲಾ ಪಕ್ಷಗಳ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಾಸನ ಕ್ಷೇತ್ರವನ್ನ ಉಳಿಸಿಕೊಳ್ಳಲು ರೇವಣ್ಣ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಪ್ರಜ್ವಲ್ ಪರ ಪ್ರಚಾರ ನಡೆಲುವಂತೆ ಪ್ರೀತಂ ಅವರ ಮನವೊಲಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಈ ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಪ್ರೀತಂ ವಿಷಯವನ್ನು ಮುಂದುವರಿಸದಿರಲು ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.












Click it and Unblock the Notifications