ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?
Recommended Video
ಬೆಂಗಳೂರು, ಜುಲೈ 29 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯತ್ತ ಅವರು ಗಮನ ಹರಿಸಲಿದ್ದಾರೆ. ಪ್ರಸ್ತುತ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಎರಡು ಉಪ ಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಠಿಸಲಾಗಿತ್ತು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು. ಕೆ. ಎಸ್. ಈಶ್ವರಪ್ಪ ಮತ್ತು ಆರ್. ಅಶೋಕ ಉಪ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಮತ್ತೆ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಜಾತಿ ಲೆಕ್ಕಾಚಾರದ ಮೇಲೆ ಈ ಬಾರಿಯೂ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ ಮಾಡಲಾಗುತ್ತದೆಯೇ? ಎಂಬ ಚರ್ಚೆ ಆರಂಭವಾಗಿದೆ. ಈಗಾಗಲೇ ಮೂವರು ನಾಯಕರ ಹೆಸರು ಉಪ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ.
ಯಡಿಯೂರಪ್ಪ ಮಂಗಳವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಭೇಟಿಯಾಗಲಿದ್ದು, ಸಚಿವ ಸಂಪುಟ ವಿಸ್ತರಣೆ ಮತ್ತು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಸಿಕ್ಕಿದರೆ ಶುಕ್ರವಾರ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ......

ಸಂಪುಟ ವಿಸ್ತರಣೆ ಸಂಕಟ
ಬಿಜೆಪಿ 105 ಶಾಸಕರ ಬಲವನ್ನು ಹೊಂದಿದೆ. ಇವರಲ್ಲಿ ಹಲವರು ಹಿರಿಯ ನಾಯಕರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವಾಗ ಹಿರಿಯರು, ಕಿರಿಯರು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ಸಂಪುಟ ರಚನೆ ವಿಚಾರ ಅಷ್ಟು ಸುಲಭವಾಗಿಲ್ಲ. ಯಡಿಯೂರಪ್ಪ ತಯಾರು ಮಾಡಿದ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಸಿಗಲಿದೆಯೇ? ಎಂಬ ಪ್ರಶ್ನೆಯೂ ಇದೆ. ಇದರ ಜೊತೆಗೆ ಉಪ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ಆರಂಭವಾಗಿದೆ.

ಮೂವರು ನಾಯಕರ ಹೆಸರು ಮುಂಚೂಣಿಯಲ್ಲಿ
ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪ, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ. ಶ್ರೀರಾಮುಲು, ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಅಶೋಕ ಹೆಸರುಗಳು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬರುತ್ತಿವೆ. ಎರಡು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ.

ಕೆ. ಎಸ್. ಈಶ್ವರಪ್ಪ
ಕೆ. ಎಸ್. ಈಶ್ವರಪ್ಪ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷವನ್ನು ಕಟ್ಟಿ ಬೆಳೆಸಲು ಯಡಿಯೂರಪ್ಪ ಜೊತೆ ಈಶ್ವರಪ್ಪ ಕೂಡ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕನಿಗೆ ಈ ಬಾರಿಯೂ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ನಿರೀಕ್ಷೆ ಇದೆ.

ಆರ್. ಅಶೋಕ
ಬೆಂಗಳೂರು ನಗರದ ರಾಜಕೀಯದ ಬಗ್ಗೆ ಮಾತನಾಡುವಾಗ ಆರ್. ಅಶೋಕ ಬಗ್ಗೆ ಹೇಳಲೇಬೇಕು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಅಶೋಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಉಪ ಮುಖ್ಯಮಂತ್ರಿಯಾಗಿದ್ದರು. ಇವರನ್ನು ಉಪ ಮುಖ್ಯಮಂತ್ರಿ ಮಾಡುವ ಮೂಲಕ ರಾಜ್ಯದ ಪ್ರಭಾವಿ ಸಮುದಾಯದ ಓಲೈಕೆಗೆ ಬಿಜೆಪಿ ಮುಂದಾಗಬಹುದು.

ಬಿ. ಶ್ರೀರಾಮುಲು
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎಂಬ ಚರ್ಚೆ ಆರಂಭವಾಗಿದೆ. ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರ ಶ್ರೀರಾಮುಲು ಹೆಸರು ಸಹ ಉಪ ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿ ಕೇಳಿಬರುತ್ತಿದೆ.











Click it and Unblock the Notifications