ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರ್ತಾರಾ?
ಕೊಡಗು, ಜನವರಿ 09 : ಜೆಡಿಎಸ್ ನಾಯಕ, ಮಾಜಿ ಸಚಿವ ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರಲಿದ್ದಾರೆಯೇ?. ಸಿದ್ದರಾಮಯ್ಯ ನಾಣಯ್ಯ ಮನೆಗೆ ಭೇಟಿ ನೀಡಲಿರುವುದು ಈ ಪ್ರಶ್ನೆಯನ್ನು ಹುಟ್ಟು ಹಾಕಿದೆ.
ರಾಜ್ಯ ಪ್ರವಾಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಡಗಿಗೆ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಅವರು ಎಂ.ಸಿ.ನಾಣಯ್ಯ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಎಂ.ಸಿ.ನಾಣಯ್ಯ ತಟಸ್ಥ, ಕೊಡಗಿನಲ್ಲಿ ಜೆಡಿಎಸ್ ಒಡೆದ ಮನೆ!
ಜನತಾದಳ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆಗ ಎಂ.ಸಿ.ನಾಣಯ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಆದ್ದರಿಂದ, ಇಬ್ಬರು ನಾಯಕರ ನಡುವೆ ಉತ್ತಮ ಬಾಂಧವ್ಯವಿದೆ.
ಜೆಡಿಎಸ್ ಪಕ್ಷದಲ್ಲಿರುವ ಎಂ.ಸಿ.ನಾಣಯ್ಯ ಪಕ್ಷದ ವರಿಷ್ಠರ ವರ್ತನೆಯಿಂದ ಬೇಸತ್ತಿದ್ದಾರೆ. ಆದ್ದರಿಂದ, ಪಕ್ಷದ ಚಟುವಟಿಕೆಗಳಿಂದ ದೂರವುಳಿದಿದ್ದಾರೆ. ಹಾಗಾಗಿ ಅವರು ಕಾಂಗ್ರೆಸ್ ಸೇರಬಹುದು ಎಂಬ ಸುದ್ದಿ ಹಬ್ಬಿದೆ.
ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು
ಎಂ.ಸಿ.ನಾಣಯ್ಯ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೆನೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಆದರೆ, ಮುಖ್ಯಮಂತ್ರಿಗಳು ನಮ್ಮ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ' ಎಂದು ಹೇಳಿದ್ದಾರೆ.
'ಮುಖ್ಯಮಂತ್ರಿಗಳು ನಮ್ಮ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಜನತಾ ಪರಿವಾರದಲ್ಲಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಮ್ಮ ಬಾಂಧವ್ಯ ಉತ್ತಮವಾಗಿದೆ. ಹೀಗಿರುವಾಗ ನಮ್ಮ ಮನೆಗೆ ಬಂದರೆ ತಪ್ಪೇನು?' ಎಂದು ಪ್ರಶ್ನಿಸಿದ್ದಾರೆ.