ಬಿಜೆಪಿ ಸೇರುವ ಬಗ್ಗೆ ಡಾ.ಎ.ಬಿ.ಮಾಲಕರಡ್ಡಿ ಹೇಳಿದ್ದೇನು?
Recommended Video
ಯಾದಗಿರಿ, ಜನವರಿ 28 : 'ವಯಸ್ಸಿನ ಕಾರಣದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಘೋಷಣೆ ಮಾಡಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಡಾ.ಎ.ಬಿ.ಮಾಲಕರಡ್ಡಿ ಅವರು, 'ವಯಸ್ಸಾದ ಹಿನ್ನಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಮತದಾರರು, ಅಭಿಮಾನಿಗಳು ಒತ್ತಾಯ ಮಾಡಿದರು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ' ಎಂದು ಹೇಳಿದ್ದಾರೆ.
ಸಿಎಂ ಮುಂದೆಯೇ ಪಕ್ಷ ತೊರೆಯುತ್ತೇನೆ ಅಂತ ಹೇಳಿ ಬಂದ್ರು!
'ನಾನು ಸ್ಪರ್ಧಿಸುವುದಿಲ್ಲ. ನಮ್ಮ ಕುಟುಂಬದವರು ಯಾರೂ ಸಹ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಡಾ.ಎ.ಬಿ.ಮಾಲಕರಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ತೊರೆಯುವ ಬಗ್ಗೆ ಶಾಸಕ ಮಾಲಕರೆಡ್ಡಿ ಹೇಳಿದ್ದೇನು?
ಡಾ.ಎ.ಬಿ.ಮಾಲಕರಡ್ಡಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, 'ಯಾವು ಯಾವುದೇ ಪಕ್ಷವನ್ನು ಸೇರುತ್ತಿಲ್ಲ' ಎಂದು ಹೇಳುವ ಮೂಲಕ ಮಾಲಕರಡ್ಡಿ ಅವರು ಬಿಜೆಪಿ ಸೇರ್ಪಡೆ ವದಂತಿಯನ್ನು ತಳ್ಳಿ ಹಾಕಿದರು.
ಬೆಳಗಾವಿಯಲ್ಲಿ ಅಧಿವೇಶ ನಡೆಯುವಾಗಿ 'ನಿಮ್ಮ ಆಡಳಿತ ಅವಧಿಯಲ್ಲಿ ಆಗಿರುವ ಅವಮಾನ ಸಾಕು. ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಹೋಗುವೆ' ಎಂದು ಎ.ಬಿ.ಮಾಲಕ ರಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆಯೇ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು. ಅವರು ಕಾಂಗ್ರೆಸ್ ಪಕ್ಷ ತೊರೆಯಬಹುದು ಎಂದು ಅಂದಾಜಿಸಲಾಗಿತ್ತು.
ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದರು
ಡಾ.ಎ.ಬಿ.ಮಾಲಕರಡ್ಡಿ ಅವರಿಗೆ 82 ವರ್ಷ ವಯಸ್ಸು. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಸಿಕ್ಕಿರಲಿಲ್ಲ. ಹಲವು ಬಾರಿ ಸಚಿವರಾಗಲೂ ಅವರು ಪ್ರಯತ್ನ ನಡೆಸಿದ್ದರು. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದರು.
ಪ್ರಿಯಾಂಕ ಖರ್ಗೆ ವಿರುದ್ಧ ಅಸಮಾಧಾನ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಿಯಾಂಕ ಖರ್ಗೆ ಅವರನ್ನು ನೇಮಿಸಿದ ಬಳಿಕ ಡಾ.ಎ.ಬಿ.ಮಾಲಕರಡ್ಡಿ ಅವರು ಕೆಡಿಪಿ ಸಭೆಗಳಿಂದ ದೂರವುಳಿದಿದ್ದರು. ಸರ್ಕಾರಿ ಕಾರ್ಯಕ್ರಮಗಳಲ್ಲಿಯೇ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಸಿದ್ದರಾಮಯ್ಯ ಸಂಧಾನ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ.ಎ.ಬಿ.ಮಾಲಕರಡ್ಡಿ ಅವರ ಮನವೊಲಿಕೆಗೆ ಮುಂದಾಗಿದ್ದರು. ಆಗ, 'ಶಾಸಕನಾಗಿ ಇದೇ ನನ್ನ ಕೊನೆ ಅವಧಿ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನನ್ನು ತಡೆಯುವ ಯತ್ನ ಮಾಡಬೇಡಿ' ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.
ಮುಂದಿನ ನಡೆ ಏನು?
'ನನ್ನ ಮುಂದಿನ ನಡೆ ಬಗ್ಗೆ ಈಗಲೇ ಹೇಳುವುದಿಲ್ಲ. ಕುಟುಂಬದ ಸದಸ್ಯರು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ನಾನು ಸಕ್ರಿಯ ರಾಜಕಾರಣದಿಂದ ದೂರವುಳಿಯುವುದಿಲ್ಲ. ಮುಂದೆ ಯಾವ ಪಕ್ಷದ ಅಭ್ಯರ್ಥಿಗೂ ನಾನು ಬೆಂಬಲ ಸೂಚಿಸಬಹುದು' ಎಂದು ಡಾ.ಎ.ಬಿ.ಮಾಲಕರಡ್ಡಿ ಹೇಳಿದ್ದಾರೆ.
ಆರೋಗ್ಯ ಸಚಿವರಾಗಿದ್ದರು
ಡಾ.ಎ.ಬಿ.ಮಾಲಕರಡ್ಡಿ ಅವರು 1994ರಲ್ಲಿ ಎಂ.ವೀರಪ್ಪ ಮೊಯ್ಲಿ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದರು. 1999ರಲ್ಲಿ ಎಸ್.ಎಂ.ಕೃಷ್ಣ ನೇತೃತ್ವದ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.
1978ರಲ್ಲಿ ಶಿಕ್ಷಕರ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯಕ್ಕೆ ಡಾ.ಎ.ಬಿ.ಮಾಲಕರಡ್ಡಿ ಪ್ರವೇಶಿಸಿದರು. 1982-84ರ ವರೆಗೆ ವಿಧಾನಪರಿಷತ್ ಉಪ ಸಭಾಪತಿಗಳಾಗಿದ್ದರು. 1989, 1994, 1999, 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.