ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾವಣೆಗೆ ಪಟ್ಟು!
ಬೆಳಗಾವಿ, ಡಿಸೆಂಬರ್ 04: ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರನ್ನ ನೇಮಕ ಮಾಡಿದ ಬಳಿಕ ಕಮಲ ಪಾಳಯದಲ್ಲಿ ಅಸಮಾಧಾನದ ಕಿಚ್ಚು ಇನ್ನೂ ಕಡಿಮೆಯಾದಂತೆ ಕಾಣುತ್ತಿಲ್ಲ. ಈಗಾಗಲೇ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದಕ್ಕೆ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಹೌದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲನ್ನ ಅನುಭವಿಸಿದ್ದು, ಸೋಲಿನ ಬೆನ್ನಲ್ಲೇ ಕಮಲ ಪಾಳಯದಲ್ಲಿ ಅಸಮಾಧಾನ ಭುಗಿಲೆದಿತ್ತು. ಇದೀಗ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದು ಬಿಜೆಪಿ ಹಿರಿಯ ನಾಯಕರ ಬೇಸರಕ್ಕೆ ಕಾರಣವಾಗಿದ್ದು, ಬಹಿರಂಗವಾಗಿ ಮಾ ಬಸವನಗೌಡ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.

ಈಗಾಗಲೇ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ.ಹೀಗಾಗಿ ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಈ ಕುತಿತು ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ ಎಂದು ಯತ್ನಾಳ್ ಹೇಳಿದ್ದಾರೆ.
ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.
ನಾನು ರಾಜ್ಯಾಧ್ಯಕ್ಷನಾಗುವುದಕ್ಕೆ ಎಲ್ಲಾ ರೀತಿಯ ಅರ್ಹ ಇದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಉತ್ತರ ಕರ್ನಾಟಕದ ಎಮ್ಎಲ್ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆ ಹಳೆ ಮೈಸೂರು ಬಾಗದವರು ಆಗಬೇಕು ಯತ್ನಾಳ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ಎಂದು ಪ್ರಶ್ನಿಸಿದ ಅವರು, ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.












Click it and Unblock the Notifications