'ಬಚ್ಚಲು ಬಾಯಿ ಈಶ್ವರಪ್ಪನ ವಜಾ ಮಾಡುವವರೆಗೂ ಹೋರಾಟ': ಡಿ.ಕೆ. ಶಿವಕುಮಾರ್
ಬೆಂಗಳೂರು, ಫೆ.19: ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ. ಅವನನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ನಾವು ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಾವು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಯನ್ನು ಎರಡು ದಿನ ಪೂರೈಸಿದ್ದು, ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಶನಿವಾರ ವಿಧಾನಸೌಧದದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ಮೇಲೂ ಕೇಸು ದಾಖಲಿಸಲಿ:
ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ, ಈಗ ದೊಡ್ಡ ಸಾಧನೆ ಮಾಡಿರುವಂತೆ ಬೀಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ರಾಷ್ಟ್ರಗೀತೆ, ಧ್ವಜ, ಪ್ರಜಾಪ್ರಭುತ್ವ, ಸಂವಿಧಾನ ನೀಡಿದ್ದೇವೆ ಎಂದು ಹೇಳಿದರು.

ನಾವು ಅಧಿವೇಶನದ ಸಮಯದಲ್ಲಿ ರಾಷ್ಟ್ರಧ್ವಜ ಹಾರಿಸಿ ತಪ್ಪು ಮಾಡಿದ್ದರೆ ನಮ್ಮ ಮೇಲೆ ಕೇಸ್ ದಾಖಲಿಸಲಿ. ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕಿಂತ ಮೊದಲು ದೇಶದ ಧ್ವಜಕ್ಕೆ ಅಪಮಾನ ಮಾಡಿರುವ ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ ಎಂದು ಹೇಳಿದರು.
ಹಳ್ಳಿ ಹಳ್ಳಿಗೂ ಹೋರಾಟ:
ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯಾದ್ಯಂತ ಸೋಮವಾರ (ಫೆ.21) ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸುತ್ತೇವೆ. ಬಳಿಕ ಹಳ್ಳಿ, ಹಳ್ಳಿಗೂ ಹೋಗಿ ಜನರ ಮಧ್ಯೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಈಶ್ವರಪ್ಪ ದೊಡ್ಡ ಸಾಧನೆ ಮಾಡಿರುವಂತೆ ಅವರಿಗೆ ಸ್ವಾಗತ ಕೋರಲು ಐನೂರು ಮಂದಿ ಸೇರಿದ್ದಾರಂತೆ. ಸಂತೋಷ ಅವರು ಏನಾದರೂ ಮಾಡಿಕೊಳ್ಳಲಿ. ಆದರೆ ದೇಶದ್ರೋಹದ ಹೇಳಿಕೆ ಕೊಟ್ಟ ಈಶ್ವರಪ್ಪನ ವಿರುದ್ಧ ಪ್ರಕರಣ ದಾಖಲಿಸದೆ, ಅವರ ಹೇಳಿಕೆ ವಿರುದ್ಧ ಕಪ್ಪು ಬಾವುಟ ಹಾರಿಸಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಾನು ಎಸ್ಪಿ ಹಾಗೂ ಡಿಜಿ ಜೊತೆ ಮಾತನಾಡುತ್ತೇನೆ. ಅವರು ಪೊಲೀಸ್ ಸಮವಸ್ತ್ರ ಕಳಚಿ ಕೇಸರಿ ಬಟ್ಟೆ ಧರಿಸಿ ಬಿಜೆಪಿಯ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಹೇಳುತ್ತೇನೆ.
ಈಶ್ವರಪ್ಪನಿಗೆ ಸ್ವಾಗತ ಕೋರಲು ಐನೂರು ಜನ ಸೇರಬಹುದಂತೆ, ಅವರ ವಿರುದ್ಧ ಪ್ರಕರಣವಿಲ್ಲವಂತೆ, ಆದರೆ ಪ್ರತಿಭಟನೆ ಮಾಡಲು ಹೋದ 15-20 ಮಂದಿ ವಿರುದ್ಧ ಪ್ರಕರಣವಂತೆ. ಇದೆಂಥ ನ್ಯಾಯ? ನಾವು ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದರು, ಬಿಜೆಪಿಯ ಹಲವು ನಾಯಕರು ಸಾವಿರಾರು ಜನ ಸೇರಿಸಿ ಕಾರ್ಯಕ್ರಮ ಮಾಡಲಿಲ್ಲವೇ? ಅವರ ವಿರುದ್ಧ ಯಾಕೆ ಕೇಸ್ ಹಾಕಿಲ್ಲ? ಮುಖ್ಯಮಂತ್ರಿಗಳು ನಿಷ್ಪಕ್ಷಪಾತರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರೂ ಅವರ ಕೈಗೊಂಬೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಕೆಲಸ ಮಾಡುತ್ತಿಲ್ಲ. ಅವರ ಮೊದಲ ಆದ್ಯತೆ ಅವರ ಪಕ್ಷದ ಅಜೆಂಡಾ.
ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಈಗ ಅದರಂತೆ ಅವರು ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.












Click it and Unblock the Notifications