ಸಿದ್ದರಾಮಯ್ಯ ಕೈಗೂ ಸಿಕ್ಕಿಲ್ಲ ರಮೇಶ್ ಜಾರಕಿಹೊಳಿ!
ಬೆಂಗಳೂರು, ಜನವರಿ 18 : ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ?. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಮಧ್ಯಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಆದರೆ, ಸಿದ್ದರಾಮಯ್ಯ ಅವರ ಕೈಗೂ ರಮೇಶ್ ಜಾರಕಿಹೊಳಿ ಸಿಕ್ಕಿಲ್ಲ. ಸತೀಶ್ ಜಾರಕಿಹೊಳಿ ಅವರ ಮೂಲಕ ಸಂಪರ್ಕ ಮಾಡಲು ಪ್ರಯತ್ನ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ, ಕೇಳಿದ ಖಾತೆ?
ಶಾಸಕಾಂಗ ಪಕ್ಷದ ಸಭೆಗೆ ಯಾರೂ ಗೈರಾಗಬಾರದು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ, ಯಾವ-ಯಾವ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ನಡೆ ಏನು? ಎಂದು ಕಾಂಗ್ರೆಸ್ ನಾಯಕರು ಕಾಯುತ್ತಿದ್ದಾರೆ.
ರಮೇಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ ಕೆಪಿಸಿಸಿ
ಶಾಸಕರ ಜೊತೆ ಸಂಧಾನ ಸಭೆ ನಡೆಸುವಂತೆ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿತ್ತು. ಆದರೆ, ಹಲವು ಶಾಸಕರು ಸಂಪರ್ಕಕ್ಕೆ ಸಿಕ್ಕಿಲ್ಲ. ಆದ್ದರಿಂದ, ಮಧ್ಯಾಹ್ನ ಯಾರು ಸಭೆಗೆ ಹಾಜರಾಗುತ್ತಾರೆ? ಎಂಬುದನ್ನು ಕಾದು ನೋಡಬೇಕಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸ್ನೇಹಿತನ ಪತ್ರ!
ಸಿದ್ದರಾಮಯ್ಯ ಹೇಳಿದ್ದೇನು?
ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನಾನು ಸತೀಶ್ ಜಾಕಿಹೊಳಿ ಅವರ ಜೊತೆ ಚರ್ಚೆ ನಡೆಸಿದ್ದೇನೆ. ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿ ಸಭೆಗೆ ಬರಲು ಸೂಚಿಸುವಂತೆ ತಿಳಿಸಿದ್ದೇನೆ. ನಾನು ಅವರಿಗೆ ಆದೇಶ ನೀಡುತ್ತಿದ್ದೇನೆ ಎಂಬುದು ಬಿಜೆಪಿಯ ಆರೋಪ ಮಾತ್ರ. ನಮ್ಮ ವಿರುದ್ಧ ಆರೋಪಗಳನ್ನು ಮಾಡಲು ಯಡಿಯೂರಪ್ಪಗೆ ನೈತಕತೆ ಇಲ್ಲ' ಎಂದರು.
ರಮೇಶ್ ಜಾರಕಿಹೊಳಿ ಸಿಕ್ಕಿಲ್ಲ
ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರು. ಆದರೆ, ಸಂಪುಟ ಪುನಾರಚನೆ ಬಳಿಕ ಅಸಮಾಧಾನಗೊಂಡಿರುವ ಅವರು ಸಿದ್ದರಾಮಯ್ಯ ಅವರಿಗೆ ಸಿಕ್ಕಿಲ್ಲ. ಎರಡು ದಿನದ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿದ್ದರು. ಬಳಿಕ ಯಾವ ನಾಯಕರ ಸಂಪರ್ಕಕ್ಕೂ ಸಿಕ್ಕಿಲ್ಲ.
ಮುಂಬೈನಲ್ಲಿದ್ದಾರಾ?
ರಮೇಶ್ ಜಾರಕಿಹೊಳಿ ಅವರು ಮುಂಬೈನಲ್ಲಿದ್ದರು. ಆದರೆ, ಎರಡು ದಿನಗಳಿಂದ ಅವರು ಎಲ್ಲಿದ್ದಾರೆ? ಎಂಬುದು ತಿಳಿದುಬಂದಿಲ್ಲ. ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ಮತ್ತು ರಮೇಶ್ ಜಾರಕಿಹೊಳಿ ಅವರು ಒಟ್ಟಿಗೆ ಇದ್ದಾರೆ ಎಂದು ಶಂಕಿಸಲಾಗಿದೆ.
ಕೆ.ಸಿ.ವೇಣುಗೋಪಾಲ್ ಕರೆ
ಕೆ.ಸಿ.ವೇಣುಗೋಪಾಲ್ ಅವರು ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿದ್ದಾಗ ಸಚಿವ ಸ್ಥಾನದ ಆಫರ್ ನೀಡಿದ್ದರು. ಬೆಂಗಳೂರಿಗೆ ಬಂದು ಭೇಟಿಯಾಗುವಂತೆ ಸೂಚನೆ ಕೊಟ್ಟಿದ್ದರು. ಆದರೆ, ರಮೇಶ್ ಜಾರಕಿಹೊಳಿ ಅವರು ಯಾವ ನಾಯಕರನ್ನೂ ಭೇಟಿಯಾಗಿಲ್ಲ.
ಕಾದು ಕುಳಿತ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಗುರುವಾರ ಸ್ವ ಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದರು. ಅಲ್ಲಿಂದ ಅವರು ರಮೇಶ್ ಜಾರಕಿಹೊಳಿ ಅವರು ಬೆಳಗಾವಿಗೆ ಬರುವ ವಿಚಾರ ತಿಳಿದು ಅಲ್ಲಿಗೆ ತೆರಳಿದ್ದರು.
ಆದರೆ, ರಮೇಶ್ ಜಾರಕಿಹೊಳಿ ಅವರು ಬೆಳಗಾವಿಗೆ ಬಂದಿಲ್ಲ. ಸಿದ್ದರಾಮಯ್ಯ ಅವರ ಪೋನ್ ಕರೆ ಸ್ವೀಕಾರ ಮಾಡಿಲ್ಲ. ಆದ್ದರಿಂದ, ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆದರು.