Siddaramaiah: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್ ಮುಂದಿನ ನಡೆ ಏನು?
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ಮಂಗಳವಾರ ವಜಾಗೊಳಿಸಿದೆ. ಹೈಕೋರ್ಟ್ನಲ್ಲಿ ತಮ್ಮ ಪರವಾಗಿ ಆದೇಶ ಬರುತ್ತದೆ ಎನ್ನುವ ವಿಶ್ವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಇದು ಆಘಾತವಾಗಿದೆ. ಈಗಾಗಲೇ ವಿಪಕ್ಷಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿವೆ.
ಮುಡಾ ಸೈಟು ಹಂಚಿಕೆ ಹಗರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದಾಗಲೇ ವಿಪಕ್ಷಗಳು ರಾಜೀನಾಮೆಗೆ ಆಗ್ರಹಿಸಿದ್ದವು. ವಿಪಕ್ಷಗಳ ಒತ್ತಾಯಕ್ಕೆ ತಲೆ ಕೆಡಿಸಿಕೊಳ್ಳದ ಸಿದ್ದರಾಮಯ್ಯ, ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿರುವುದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರಿಗೆ ಗೆಲುವು ಸಿಗುತ್ತದೆ, ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಹಲವು ಸಚಿವರು, ಶಾಸಕರು ಬೆಂಬಲ ನೀಡಿದ್ದರು.
ಈಗ ರಾಜೀನಾಮೆ ಕೊಡ್ತಾರ?
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್ ಹೈಕಮಾಂಡ್ ಕೂಡ ಸಿಎಂ ಸಿದ್ದರಾಮಯ್ಯ ಪರವಾಗಿತ್ತು, ಈಗ ನ್ಯಾಯಾಲಯ ಅವರ ಅರ್ಜಿ ತಿರಸ್ಕಾರ ಮಾಡಿದ್ದು, ಹೈಕಮಾಂಡ್ ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವ ಕುತೂಹಲ ಇದೆ. ವಿಪಕ್ಷಗಳು ಈಗ ದನಿ ಎತ್ತಲಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲಿವೆ. ಇನ್ನು ಕಾಂಗ್ರೆಸ್ನಲ್ಲಿ ಕೂಡ ಹಲವರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವುದು ಗುಟ್ಟಾಗೇನೂ ಇಲ್ಲ. ಆದರೆ ಕಾಂಗ್ರೆಸ್ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುವ ಕಾರಣ, ದೆಹಲಿಯಿಂದ ಯಾವ ಪ್ರತಿಕ್ರಿಯೆ ಬರುತ್ತದೆ ನೋಡಬೇಕಿದೆ.
ಕೋರ್ಟ್ ಆದೇಶ ಪ್ರಕಟವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಆರೋಪ ಬಂದಿರುವ ಕಾರಣ ಈಗ ರಾಜೀನಾಮೆ ನೀಡಿ, ತನಿಖೆ ಎದುರಿಸಿ ನ್ಯಾಯಾಲಯದಲ್ಲಿ ತಮ್ಮ ಪರ ತೀರ್ಪು ಬಂದ ಬಳಿಕ ಮತ್ತೆ ಸಿಎಂ ಆಗುವ ಆಯ್ಕೆ ಕೂಡ ಇದೆ.
ಸದ್ಯದ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎನ್ನಲಾಗಿದೆ. ಹಲವು ಸಚಿವರು, ಶಾಸಕರು ಕೂಡ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ ಎಂದು ಬೆಂಬಲ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಿದ್ದು ಅವರು ಈ ಪ್ರಕರಣದಿಂದ ಹೊರ ಬರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications