Virat Kohli: ಬೆಂಗಳೂರು ಕಾಲ್ತುಳಿತ: ವಿರಾಟ್ ಕೊಹ್ಲಿ ಮೇಲೂ ಕೇಸ್ ಆಗುತ್ತಾ? ;ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಜುಲೈ 24: ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಈ ಕುರಿತು ಮಾಧ್ಯಮಗಳ ಜೊತೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಉತ್ತರಿಸಿದ್ದಾರೆ.
ಕಾಲ್ತುಳಿತ ಪ್ರಕರಣ ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಕೊಟ್ಟಿದ್ದಾರೋ ಅದರಂತೆ ತೀರ್ಮಾನ ಆಗುತ್ತದೆ, ಕ್ರಿಮಿನಲ್ ಪ್ರೊಸೀಜರ್ ಬಗ್ಗೆಯೂ ಶಿಫಾರಸು ಮಾಡಿದ್ದಾರೆ. ಅದರಂತೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ, ವಿರಾಟ್ ಕೊಹ್ಲಿ ವಿಚಾರ ಬಗ್ಗೆ ವರದಿ ಯಲ್ಲಿ ಪ್ರಸ್ತಾಪ ಇದ್ರೆ ಚರ್ಚೆ ಮಾಡಿ ನಿರ್ಣಯಿಸ್ತೇವೆ. ಇಲ್ಲಿ ಒಬ್ಬ ವ್ಯಕ್ತಿ ಅಂತ ಬರಲ್ಲ ತಂಡದ ವಿಚಾರ ಇರುತ್ತೆ, ನೋಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕು ಮತ್ತು ರಾಜ್ಯಕ್ಕೆ ಸಂಘರ್ಷ ಏನೂ ಇಲ್ಲ. ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡುತ್ತಿದ್ದೇವೆ. ರಾಜ್ಯದ ವತಿಯಿಂದ ನಮಗೆನು ಮಾನದಂಡಗಳಲ್ಲಿ ಬೇಕು ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಮೀಕ್ಷೆ ಮಾಡುವುದಿಲ್ಲ. ಯಾರು ಎಷ್ಟು ಜನ ಇದ್ದಾರೆ ಎಂಬ ಅಂಕಿ ಅಂಶವನ್ನು ಮಾತ್ರ ಕೇಂದ್ರ ಮಾಡುತ್ತದೆ ಎಂದರು.
ಎಸ್ಐಟಿ ತಂಡದಿಂದ ಐಪಿಎಸ್ ಅಧಿಕಾರಿ ಹೊರಗುಳಿಯುವ ವಿಚಾರದ ಕುರಿತು ಮಾತನಾಡಿ, ಅಧಿಕೃತವಾಗಿ ನನಗೆ ಅವರು ಮಾಹಿತಿ ತಿಳಿಸಿಲ್ಲ. ಆದರೆ ಅನ್ಅಫಿಷಿಯಲ್ ಆಗಿ ಅವರು ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣ ಇದೆ ಹಾಗಾಗಿ ತಂಡದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಒಂದು ವೇಳೆ ಆ ರೀತಿ ಇದ್ದರೆ, ಅವರನ್ನು ಬದಲಾಯಿಸಲಾಗುವುದು ಎಂದು ಹೇಳಿದರು.
ಆಂಧ್ರಪ್ರದೇಶದಲ್ಲಿ ಬೆಂಗಳೂರಿನ ಬಿಜೆಪಿ ಮುಖಂಡರ ಹತ್ಯೆ ಪ್ರಕರಣದಕುರಿತು ಪ್ರತಿಕ್ರಿಯಿಸಿ, ಆಂಧ್ರಪ್ರದೇಶ ಪೊಲೀಸರು ತನಿಖೆ ಮಾಡುತ್ತಾರೆ. ಹತ್ಯೆಯಾದವರು ನಮ್ಮ ರಾಜ್ಯದವರು ಆಗಿರುವುದರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡುತ್ತಾರೆ. ಆ ರಾಜ್ಯದ ಪೊಲೀಸರ ತನಿಖೆಗೆ ನಮ್ಮ ಪೊಲೀಸರು ಸಹಕಾರ ಮಾಡುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.












Click it and Unblock the Notifications