ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ, 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ: ಡಿ.ಕೆ.ಶಿವಕುಮಾರ್
ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ಇದೆ. ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ ಎಂಬ ಖಾತರಿಯೂ ಇದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು,ಮಾರ್ಚ್8: ವಿಧಾನಸಭಾ ಚುನಾವಣೆಗೆ ಸಿದ್ದತೆಯನ್ನ ನಡೆಸಿರುವ ರಾಜಕೀಯ ಪಕ್ಷಗಳು ತಮ್ಮದೇ ಆದ ಸಮೀಕ್ಷೆಯನ್ನ ನಡೆಸಿದ್ದು, ಸಮೀಕ್ಷೆ ಕುರಿತು ಆರೋಪ ಹಾಗೂ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ.
ಈ ಕುರಿತು ಬುಧವಾರ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ಇದೆ. ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ ಎಂಬ ಖಾತರಿಯೂ ಇದೆ. ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿ ನಾನು ಮಾತನಾಡಲ್ಲ. ಅವರು ಏನೇ ಮಾಡಿದರು 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ. ಅವರು 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಸ್ಕ್ರೀನಿಂಗ್ ಕಮಿಟಿ ಸಭೆ ಕುರಿತು ಮಾತನಾಡಿದ ಅವರು, ಬಹುತೇಕ ಶೇ.75 ರಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, ಇಂದು ಉಳಿದ ಕ್ಷೇತ್ರಗಳ ಪಟ್ಟಿ ಅಂತಿಮಗೊಳಿಸಲಾಗುವುದು. ನಂತರ ರಾಷ್ಟ್ರೀಯ ಮಟ್ಟದ ಸಭೆ ನಡೆಯಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ಇದೆ, ನಾವು 140 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ.
ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಕುರಿತು ಬಿಜೆಪಿ ವ್ಯಂಗ್ಯ ಕುರಿತು ಮಾತನಾಡಿದ ಅವರು, ನಮ್ಮ ಬಗ್ಗೆ ಏನೆಲ್ಲಾ ವ್ಯಂಗ್ಯ ಮಾಡುತ್ತಾರೋ ಮಾಡಲಿ. ಬಂದ್ ವಿಚಾರವಾಗಿಯಾದರೂ ವ್ಯಂಗ್ಯ ಮಾಡಲಿ, 200 ಯುನಿಟ್ ಉಚಿತ ವಿದ್ಯುತ್, 2000 ರೂ. ನೀಡುವ ಬಗ್ಗೆಯಾದರೂ ವ್ಯಂಗ್ಯ ಮಾಡಲಿ. ನಾವು ಅಧಿಕಾರಕ್ಕೆ ಬಂದ ನಂತರ ಇದೆಲ್ಲವನ್ನು ಮಾಡಿ ತೋರಿಸಿ ಅವರಿಗೆ ಉತ್ತರ ನೀಡುತ್ತೇವೆ.

200 ಯುನಿಟ್ ಉಚಿತ ವಿದ್ಯುತ್ ನೀಡಲು ಹೇಗೆ ಸಾಧ್ಯ ಎಂದು ಕೇಳುವ ಅವರು ಯಾವ ಲೆಕ್ಕಾಚಾರದಲ್ಲಿ ರೈತರಿಗೆ 7 ಗಂಟೆಯಿಂದ 10 ಗಂಟೆವರೆಗೂ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದರು? ನಿಮ್ಮ ಸರ್ಕಾರ ಇದ್ದರೂ ಅದನ್ನು ಯಾಕೆ ಜಾರಿ ಮಾಡಲಿಲ್ಲ? ರೈತರ 1 ಲಕ್ಷ ವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಅದನ್ನು ಯಾಕೆ ಮಾಡಲಿಲ್ಲ? ಈಗ 75 ಯುನಿಟ್ ನೀಡುವುದಾಗಿ ಹೇಳಿದ್ದಾರೆ. ನಾವು 2 ಸಾವಿರ ನೀಡುತ್ತೇವೆ ಎಂದಾಗ ಅವರು 500 ರೂ. ನೀಡುವುದಾಗಿ ಹೇಳಿ ನಂತರ 1 ಸಾವಿರ ನೀಡುತ್ತೇವೆ ಎಂದು ಘೋಷಣೆ ಮಾಡಿರುವುದೇಕೆ? ಜ.16 ರಂದು ಸರ್ಕಾರ ಗೃಹಿಣಿ ಶಕ್ತಿ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದರು. ಹೀಗೆ ಮುಖ್ಯಮಂತ್ರಿಗಳು ಸುಳ್ಳಿನ ಮೇಲೆ ಸುಳ್ಳು ಹೇಳುತ್ತಾ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ವಕೀಲರ ಸಂಘ ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗಳಿಗೆ ಪತ್ರ ಬರೆದಿರುವ ಕುರಿತು ಮಾತನಾಡಿದ ಅವರು, ನಾನು ನ್ಯಾಯಾಲಯದ ವಿಚಾರವಾಗಿ ಮಾತನಾಡುವುದಿಲ್ಲ. ನ್ಯಾಯಾಲಯ ಯಾವ ದೃಷ್ಟಿಕೋನದಲ್ಲಿ ಜಾಮೀನು ನೀಡಿದೆಯೋ ನನಗೆ ಗೊತ್ತಿಲ್ಲ. ನಾನು ಅದನ್ನು ಪ್ರಶ್ನಿಸುವುದಿಲ್ಲ ಎಂದರು.
ಸೋಮಣ್ಣ ಅವರು ಪಕ್ಷ ಸೇರುವ ಬಗ್ಗೆ ವಿರೋಧ'ನಮ್ಮ ವಿಚಾರವಾಗಿ ಮಾತನಾಡಿದ ಅವರು, ಬಳಿ ಅವರು ಮಾತನಾಡಿಲ್ಲ. ಅವರು ಪಕ್ಷ ಸೇರುವ ವಿಚಾರ ಚರ್ಚೆಯಾಗಿಲ್ಲ. ಇವೆಲ್ಲವೂ ಕೇವಲ ಊಹಾಪೋಹಗಳೇ ಹೊರತು ಯಾವುದೂ ನಿಜವಲ್ಲ ಎಂದು ಸ್ಪಷ್ಟಪಡಿಸಿದರು.











Click it and Unblock the Notifications