Gruha Lakshmi Scheme: ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ: ಸಿಡಿದೆದ್ದ ಮಹಿಳೆಯರು
ಬೆಂಗಳೂರು, ಮೇ 15: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಚಿಸಿತ್ತು. ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಪ್ರತಿ ಗೃಹಿಣಿಯರಿಗೆ 2000 ರೂಪಾಯಿ ಹಣವನ್ನ ಸರ್ಕಾರ ನೀಡುತ್ತಿದ್ದು, ಇದೀಗ ಬರೋಬ್ಬರಿ ಮೂರು ತಿಂಗಳ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿಂದ ಖಾತೆಗೆ ವರ್ಗಾವಣೆಯಾಗದೇ ಇರುವುದರಿಂದ ಗದಗ ಹಾಗೂ ಹುಬ್ಬಳ್ಳಿಯ ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನುಡಿದಂತೆ ನಡೆಯದಿದ್ದರೆ ಮುಂದಿನ ಬಾರಿ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನೂ ಮಹಿಳೆಯರು ನೀಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಗೃಹ ಲಕ್ಷ್ಮಿ ಹಣ ಸರಿಯಾದ ತಿಂಗಳಲ್ಲಿ ಜಮಾ ಆಗುತ್ತಿಲ್ಲ. ಈ ನಡುವೆ ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣ ಬಾಕಿ ಉಳಿದಿದ್ದು, ಆದಷ್ಟು ಬೇಗ ಹಂತ ಹಂತವಾಗಿ ಮೇ ತಿಂಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರವಸೆಯನ್ನ ನೀಡಿದ್ದರು. ಆದರೆ ಮೇ 15 ದಿನ ಕಳೆಯುತ್ತಾ ಬಂದರು ಗೃಹ ಲಕ್ಷ್ಮಿಯ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎಂದು ಮಹಿಳೆಯರು ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭವರಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮೊದಲಿನಿಂದಲೂ ನುಡಿದಂತೆ ನಡೆಯುತ್ತೇವೆ ಎಂದು ಹೇಳಿಕೊಂಡು ಬಂದಿದೆ,ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪದೇ ಪದೇ, ನಮ್ಮದು ನುಡಿದಂತೆ ನಡೆದ ಸರ್ಕಾರ ಎನ್ನುತ್ತಾರೆ. ಆದರೆ, ಚುನಾವಣೆ ಸಂದರ್ಭ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಮೂರು ತಿಂಗಳಾದರೂ ಹಣ ಬಂದಿಲ್ಲ. ಎಲ್ಲಿದೆ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶ್ನೆ ಮಾಡಿದ್ದಾರೆ.
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದದ್ದು, ಇದೀಗ ಗ್ಯಾರಂಟಿ ಯೋಜನೆಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಹಿಳೆಯರು ಗ್ಯಾರಂಟಿ ಯೋಜನೆಗಳನ್ನು ನೀಡಿ ಎಂದು ಯಾರೂ ಕೇಳಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಮಹಿಳೆಯರು ಕಿಡಿಕಾರಿದ್ದಾರೆ. ಸರ್ಕಾರದ ಹಣದ ಮೇಲೆ ಅವಲಂಬಿತರಾಗಿದ್ದೆವು. ಈಗ ಹಣ ಕೊಡದೇ ಇರುವುದರಿಂದ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣಕ್ಕೂ ಹೊಡೆತ ಬಿದ್ದಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications