ನಾಡಿಗೆ ಇದು ಕೇಡಿನ ಲಕ್ಷಣ.. ಮುಂದುವರಿಯಬಾರದು.. ದಯವಿಟ್ಟು ಮುಂದುವರಿಯಬಾರದು
ಬೆಂಗಳೂರು, ಜೂ.2: ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಸಚಿವರಿಗೆ ಪತ್ರ ಬರೆದು ನನ್ನ ಪಠ್ಯವನ್ನು ಕೈ ಬಿಡಬೇಕು ಎಂದು ಮನವಿ ಮಾಡಿದ್ದ ಸಾಹಿತಿ ದೇವನೂರ ಮಹಾದೇವ ಅವರು ಗುರುವಾರ ಶಿಕ್ಷಣ ಸಚಿವರಿಗೆ ಎರಡನೇ ಪತ್ರ ಬರೆದಿದ್ದಾರೆ.
ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿರುವ ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಈ ಹಿಂದೆ ಒಂದು ಪತ್ರ ಬರೆದಿದ್ದ ದೇವನೂರು ಮಹಾದೇವ ಅವರು, ನಂತರ ನಡೆದ ಶಿಕ್ಷಣ ಇಲಾಖೆಯ ಬೆಳವಣಿಗೆಗಳು ಮತ್ತು ಶಿಕ್ಷಣ ಸಚಿವರ ಹೇಳಿಕೆಗಳನ್ನು ಗಮನಿಸಿ, ಅದರಿಂದ ಬೇಸತ್ತು ಗುರುವಾರ ಮತ್ತೊಂದು ಪತ್ರವನ್ನು ಬರೆದಿದ್ದಾರೆ. ಪತ್ರದ ಸಾರಾಂಶ ಹೀಗಿದೆ..
ಈ ಹಿಂದೆ ಹತ್ತನೇ ತರಗತಿಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26-06-2022ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ. ಅದನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾಣ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರವರಿಗೂ ಬರೆದು ಕೊರಿಯರ್ ಮಾಡಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚೆಗೆ ತಮ್ಮ ಹೇಳಿಕೆಯಲ್ಲಿ 'ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ' ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು.

ಮತ್ತೂ ಹೇಳಬೇಕೆಂದರೆ, ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯಪುಸ್ತಕ ಪುರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷರನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್ಕಿಟ್ ಎಂದು ರಾಜಕೀಕರಣಗೊಳಿಸಿ ಪರಾರಿಯಾಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನಿಸುತ್ತದೆ.
ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ- ಇದು ಮುಂದುವರಿಯಬಾರದು, ದಯವಿಟ್ಟು ಮುಂದುವರಿಯಬಾರದು.
ಹೀಗೆ ಕಠಿಣ ಶಬ್ಧಗಳ ಮೂಲಕ ದೇವನೂರ ಮಹಾದೇವ ತಮ್ಮ ಎರಡನೇ ಪತ್ರವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.












Click it and Unblock the Notifications