Breaking; ಹಿಜಾಬ್ ತೀರ್ಪು, ನ್ಯಾಯಮೂರ್ತಿಗಳಿಗೆ 'ವೈ' ಶ್ರೇಣಿ ಭದ್ರತೆ
ಬೆಂಗಳೂರು, ಮಾರ್ಚ್ 20; ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಮಂಗಳವಾರ ತೀರ್ಪು ನೀಡಿತ್ತು. ಈ ತೀರ್ಪಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಿನ್ನಡೆ ಉಂಟಾಗಿತ್ತು.
ಕರ್ನಾಟಕ ಹೈಕೋರ್ಟ್ನ ತೀರ್ಪಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಹ ಹೋಗಿದ್ದಾರೆ. ಮುಸ್ಲಿಂ ಸಂಘಟನೆ ತೀರ್ಪಿನ ಬಳಿಕ ಕರ್ನಾಟಕ ಬಂದ್ಗೆ ಸಹ ಕರೆ ನೀಡಿತ್ತು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠ ತೀರ್ಪು ನೀಡಿತ್ತು. ಈ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದರು.
ಹಿಜಾಬ್ ವಿವಾದದ ಬಗ್ಗೆ ತೀರ್ಪು ನೀಡಿದ ಮೂವರು ನ್ಯಾಯಮೂರ್ತಿಗಳಿಗೆ 'ವೈ' ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ತಮ್ಮ ಆರ್. ಟಿ. ನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ್ರೋಹಿ ಶಕ್ತಿ ಸಹಿಸಲಾಗುವುದಿಲ್ಲ
"ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ಈ ವಿಚ್ಛಿದ್ರಕಾರಿ ಶಕ್ತಿಗಳು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಠಿಣ ಕಾನೂನು ಕ್ರಮಕ್ಕೆ ಸೂಚನೆ
"ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಉಚ್ಛನ್ಯಾಯಾಲಯದ ಬಾರ್ ಕೌನ್ಸಿಲ್ ಅವರೂ ಸಹ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಕೂಡಲೇ ತನಿಖೆ ನಡೆಸಲು ಸೂಚಿಸಲಾಗಿದೆ. ತಮಿಳುನಾಡಿನಿಂದ ರಾಜ್ಯದ ವಶಕ್ಕೆ ಆರೋಪಿಗಳನ್ನು ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ. ಮೂರು ನ್ಯಾಯಾಧೀಶರಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ' ಕೆಟಗರಿಯ ಭದ್ರತೆಯನ್ನು ನೀಡುವ ತೀರ್ಮಾವನ್ನು ಸರ್ಕಾರ ಕೈಗೊಂಡಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಜಾತ್ಯಾತೀತರು ಮೌನ ಮುರಿಯಬೇಕು
"ನ್ಯಾಯಮೂರ್ತಿಗಳು ನೀಡುವ ತೀರ್ಪಿಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣದ ಮೇಲೆ ಡೋಂಗಿ ಜಾತ್ಯಾತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯಾತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಾಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕವನ್ನು ಒಡ್ಡುತ್ತವೆ. ಸರ್ಕಾರದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕವಾಗಿ ಈ ಪ್ರಕರಣವನ್ನು ಖಂಡಿಸಬೇಕು" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ 11 ದಿನಗಳ ಕಾಲ ನಡೆದಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.












Click it and Unblock the Notifications